ನರಗುಂದ: ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಪರಿಶಿಷ್ಟ ವರ್ಗದ ಗಿರಿಜನ ಉಪಯೋಜನೆಯಡಿ ಬಿಡುಗಡೆಯಾಗುವ ಅನುದಾನವನ್ನು ಉದ್ದೇಶಿತ ಫಲಾನುಭವಿಗಳ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡುವ ಮೂಲಕ ಸರ್ಕಾರದ ಯೋಜನೆಗಳ ಉದ್ದೇಶ ಈಡೇರಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ತಿಳಿಸಿದರು.

ಮಂಗಳವಾರ ತಾಪಂ ಕಚೇರಿ ಸಭಾಭವನದಲ್ಲಿ 2026- 27ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಪರಿಶಿಷ್ಟ ವರ್ಗದ ಗಿರಿಜನ ಉಪಯೋಜನೆ ಪ್ರಗತಿ ಪರಿಶೀಲನಾ ಮಾಸಿಕ ಸಭೆಯಲ್ಲಿ ಮಾತನಾಡಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ವಿವಿಧ ಇಲಾಖೆಗಳಿಗೆ ಮೀಸಲಿಡುವ ಶೇ. 25ರ ಅನುದಾನದ ವೆಚ್ಚ ಹಾಗೂ ಪ್ರಗತಿ ಕುರಿತು ಇಲಾಖಾವಾರು ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸರ್ಕಾರ ಬಿಡುಗಡೆ ಮಾಡುವ ಅನುದಾನವನ್ನು ಉದ್ದೇಶಿತ ಫಲಾನುಭವಿಗಳ ಅಭಿವೃದ್ಧಿಗೆ ಮಾತ್ರ ಬಳಸಬೇಕು. ಯಾವುದೇ ರೀತಿಯ ದುರ್ಬಳಕೆಯಾಗದಂತೆ ತಾಲೂಕು ಮಟ್ಟದ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿದಾಗ ಮಾತ್ರ ಸರ್ಕಾರದ ಯೋಜನೆಗಳ ನಿಜವಾದ ಉದ್ದೇಶ ಸಾರ್ಥಕವಾಗಲಿದೆ ಎಂದರು.

ಸಭೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಸುಭಾಸ ಕುದಾನಪುರ ಮಾತನಾಡಿ, ಯೋಜನೆಯಡಿ ಲಭ್ಯವಾಗುವ ಶೇ. 25ರ ಅನುದಾನವನ್ನು ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಬಳಸಲಾಗುತ್ತಿದೆ. ಪೌರಕಾರ್ಮಿಕರಿಗೆ ಬೆಳಗಿನ ಉಪಹಾರ, ಸುರಕ್ಷತಾ ಸಾಮಗ್ರಿಗಳ ಖರೀದಿ ಹಾಗೂ ಅವರ ಮಕ್ಕಳ ಶೈಕ್ಷಣಿಕ ವೆಚ್ಚಕ್ಕೆ ಅನುದಾನವನ್ನು ವಿನಿಯೋಗಿಸಲಾಗುತ್ತಿದೆ ಎಂದರು.


ಸಭೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳು, ಸಹಕಾರ ಇಲಾಖೆ ಅಧಿಕಾರಿಗಳು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.