ಸಾರಾಂಶ
ಗಣತಿ ಸಮಯದಲ್ಲಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಶೇಖರಿಸುತ್ತಿದ್ದಾರೆ
ಹಾವೇರಿ: ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ದಾಸ್ ಏಕ ವಿಚಾರಣಾ ಆಯೋಗ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣ-2025ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸೋಮವಾರದಿಂದ ಮೂರು ಹಂತದಲ್ಲಿ ಪರಿಶಿಷ್ಟ ಜಾತಿ ಸಮುದಾಯ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ಸಮೀಕ್ಷೆ ಚಾಲನೆ ನೀಡಲಾಗಿದೆ.
ನಗರದ ಇಜಾರಿಲಕ್ಮಾಪೂರದಲ್ಲಿ ಸಮೀಕ್ಷೆ ಕಾರ್ಯದ ಸಿಬ್ಬಂದಿಗಳೊಂದಿಗೆ ಜಿಲ್ಲಾಧಿಕಾರಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಅಧ್ಯಕ್ಷ ಡಾ.ವಿಜಯ ಮಹಾಂತೇಶ ದಾನಮ್ಮನವರ ಭೋವಿ ಜನಾಂಗ ವಾಸಿಸುವ ಕಾಲನಿ ಮನೆಗಳಿಗೆ ಭೇಟಿ ನೀಡಿ, ಅಲ್ಲಿನ ಜನರೊಂದಿಗೆ ಮಾತನಾಡಿ, ಜಾತಿಗಣತಿ ಬಗ್ಗೆ ನಿಮಗೆ ಮಾಹಿತಿ ಇದೆಯಾ? ನೀವು ಯಾವ ಜಾತಿಗೆ ಸೇರಿದ್ದೀರಿ, ಈ ಹಿಂದೆ ಯಾವುದಾದರು ಮೀಸಲಾತಿ ಪಡೆದುಕೊಂಡಿದ್ದೀರಾ? ನಿಮ್ಮ ಬಳಿ ನಿಮ್ಮ ಜಾತಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳ ದಾಖಲೆ ಇವೇಯಾ? ಎಂಬ ಮುಂತಾದ ವಿಷಯಗಳ ಕುರಿತು ಜನರಿಂದ ಮಾಹಿತಿ ಪಡೆದುಕೊಂಡರು.ನಿಖರ ಮಾಹಿತಿ ನೀಡಿ:ಗಣತಿ ಸಮಯದಲ್ಲಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಶೇಖರಿಸುತ್ತಿದ್ದಾರೆ. ಈ ಸಮಯದಲ್ಲಿ ಸಾರ್ವಜನಿಕರು ಗಣತಿದಾರರಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ, ಮೊಬೈಲ್ ನಂಬರ್ ಕಡ್ಡಾಯವಾಗಿ ನೀಡಬೇಕು. ನಿಖರ ಮಾಹಿತಿ ನೀಡಬೇಕು ಹಾಗೂ ತಪ್ಪು ಮಾಹಿತಿ ನೀಡಬಾರದು ಎಂದು ಸಲಹೆ ನೀಡಿದರು.
ವಡ್ಡರ ಓಣಿ ಜನಸಂಖ್ಯೆ ಕುರಿತ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಂದ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿಗಳು, ಪ್ರತಿಯೊಂದು ಮನೆಗೆ ಭೇಟಿ ನೀಡಿ ಅವರುಗಳಿಗೆ ಜಾತಿ ಗಣತಿ ಎಂದರೇನು ಎಂಬುವುದನ್ನು ಮೊದಲು ಮನದಟ್ಟು ಮಾಡಿ ಅದರ ಪ್ರಯೋಜನ ಕುರಿತು ಮಾಹಿತಿ ನೀಡಿ. ನಂತರ ಅವರ ಕುಟುಂಬ ಸದಸ್ಯರ ಸಂಪೂರ್ಣ ಮಾಹಿತಿ ಪಡೆದು ವ್ಯವಸ್ಥಿತವಾಗಿ ಮೊಬೈಲ್ ಆಪ್ನಲ್ಲಿ ದಾಖಲಿಸುವಂತೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಆಂಜನೇಯ ಎಚ್. ಹುಲ್ಲಾಳ ಇತರರು ಇದ್ದರು.