ಮಂಗಳೂರು: ಉದ್ಯೋಗಕ್ಕಾಗಿ ವಿದೇಶಗಳಿಗೆ ತೆರಳುವ ಭಾರತೀಯ ನಾಗರಿಕರ ಸುರಕ್ಷತೆ ಹೆಚ್ಚಿಸಲು ಜಾಗೃತಿ ಮೂಡಿಸುವ ಜತೆಗೆ ವಂಚನೆ ತಡೆಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೋರಿ ದಕ್ಷಿಣ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದ ಕ್ಯಾ. ಚೌಟ, ಮಂಗಳೂರು ಹಾಗೂ ಕರಾವಳಿ ಕರ್ನಾಟಕದ ಯುವ ಜನರು ಉದ್ಯೋಗ ಪಡೆಯುವ ಕನಸಿನೊಂದಿಗೆ ಗಲ್ಫ್‌ ಹಾಗೂ ದಕ್ಷಿಣ ಏಷ್ಯಾ ದೇಶಗಳಿಗೆ ತೆರಳುತ್ತಿದ್ದಾರೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಅನೇಕ ಸಂದರ್ಭಗಳಲ್ಲಿ ನಕಲಿ ಅಥವಾ ವಂಚಕ ಉದ್ಯೋಗ ನೇಮಕ ಏಜೆನ್ಸಿಗಳ ಮೂಲಕ ವಿದೇಶಕ್ಕೆ ತೆರಳಿದ ಬಳಿಕ ಅಲ್ಲಿ ಸೈಬರ್ ವಂಚಕರ ಬಲೆಗೆ ಸಿಲುಕುತ್ತಿರುವ, ಉದ್ಯೋಗವಿಲ್ಲದೆ ಅಥವಾ ನಿರೀಕ್ಷಿತ ಕೆಲಸ ಸಿಗದೆ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ಬಗ್ಗೆ ದೂರುಗಳು ಬರುತ್ತಿವೆ. ಹೀಗಾಗಿ, ಈ ವಂಚಕ ಜಾಲಕ್ಕೆ ಕಡಿವಾಣ ಹಾಕುವುದಕ್ಕೆ ಅಗತ್ಯ ಕ್ರಮಗಳನ್ನು ಸಚಿವಾಲಯದ ಮೂಲಕ ಜರುಗಿಸಬೇಕು. ಇಂಥಹ ನಕಲಿ ಏಜೆನ್ಸಿಗಳ ಬಗ್ಗೆಯೂ ಜನರಲ್ಲಿಯೂ ಪೂರ್ವ ಪ್ರಯಾಣ ಸಮಾಲೋಚನೆ, ನಕಲಿ ಏಜೆನ್ಸಿಗಳ ಬಗ್ಗೆ ಜಾಗೃತಿ ಅಭಿಯಾನಗಳು ಹಾಗೂ ನೇಮಕಾತಿ ಸಂಸ್ಥೆಗಳೊಂದಿಗೆ ಸಮನ್ವಯವನ್ನು ಬಲಪಡಿಸುವ ಬಗ್ಗೆ ಸಚಿವಾಲಯ ಗಮನ ಹರಿಸಬೇಕು. ಅಲ್ಲದೆ, ಅಪಾಯ ಹೆಚ್ಚಿರುವ ದೇಶಗಳಲ್ಲಿ ಹೆಚ್ಚುವರಿ ಮೇಲ್ವಿಚಾರಣಾ ವ್ಯವಸ್ಥೆ ಬಲಪಡಿಸಬೇಕು ಎಂದು ಮನವಿ ಮಾಡಿದರು.

ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಮಾವೇಶ:

ಇದೇ ಸಂದರ್ಭ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಆಶ್ರಯದಲ್ಲಿ ಮಂಗಳೂರಿನಲ್ಲಿ ತಂತ್ರಜ್ಞಾನ, ಪ್ರವಾಸೋದ್ಯಮ ಮತ್ತು ವ್ಯಾಪಾರ ಕ್ಷೇತ್ರಗಳನ್ನು ಒಳಗೊಂಡ ಅಂತಾರಾಷ್ಟ್ರೀಯ ಸಮಾವೇಶ ಆಯೋಜಿಸುವ ಕುರಿತು ಕ್ಯಾ. ಚೌಟ ಅವರು ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದರು.