ಸಾರಾಂಶ
ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ವಿವಿಧ ಹಗರಣಗಳು ನಡೆದರೆ, ಬಿಜೆಪಿ ಸರ್ಕಾರ ಬಂದ ಮೇಲೆ ಅಭಿವೃದ್ಧಿಯ ಪರ್ವ ಆರಂಭವಾಯಿತು. ಅಭಿವೃದ್ಧಿ ಹಾಗೂ ದೇಶದ ಹಿತವು ನರೇಂದ್ರ ಮೋದಿ ಹಾಗೂ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ ತಿಳಿಸಿದರು.
ಉತ್ತರಕನ್ನಡ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೊಂದಿಗೆ ಹೊನ್ನಾವರದ ಮೂಡಗಣಪತಿ ಸಭಾಭವನದಲ್ಲಿ ಬಿಜೆಪಿ ಹೊನ್ನಾವರ ಮಂಡಲದ ಕಾರ್ಯಕರ್ತರ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.ನರೇಂದ್ರ ಮೋದಿ ಸ್ವಾರ್ಥಕ್ಕಾಗಿ ಯಾವ ಅಭಿವೃದ್ಧಿಯನ್ನು ಮಾಡುತ್ತಿಲ್ಲ. ಆದರೆ ಕಾಂಗ್ರೆಸ್ ನಿರಂತರವಾಗಿ ಆರೋಪವನ್ನು ಮಾಡುತ್ತಿದೆ. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಹಗರಣಗಳು ನಿರಂತರವಾಗಿರುತ್ತಿತ್ತು. ಪ್ರತಿ ಯೋಜನೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿತ್ತು. ಕಾಂಗ್ರೆಸ್ ಸರ್ಕಾರ ತಮ್ಮ ಅವಧಿಯಲ್ಲಿ ಸಾಲ ಮಾಡಿ ಆರ್ಥಿಕ ಸ್ಥಿತಿಯನ್ನು ಹದಗೆಡಿಸಿತ್ತು. ಆದರೆ ನರೇಂದ್ರ ಮೋದಿ ನೇತೃತ್ವದ ಹತ್ತು ವರ್ಷದ ಆಡಳಿತದಿಂದ ದೇಶ ಆರ್ಥಿಕ ಮುನ್ನಡೆ ಸಾಧಿಸಿದೆ. ಮೋದಿಜಿ ಜಗತ್ತಿನ ಅಗ್ರ ರಾಷ್ಟ್ರಗಳಲ್ಲಿ ನಮ್ಮ ದೇಶದ ಶಕ್ತಿಯನ್ನು ಗುರುತಿಸುವಂತೆ ಮಾಡಿದ್ದಾರೆ ಎಂದರು.
ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದಾಗ ಉಪ್ಪುನೀರು ತಡೆಗೋಡೆಯನ್ನು ನಿರ್ಮಿಸಿದ್ದರು. ಅದರ ನಂತರ ಯಾವ ಸರ್ಕಾರವೂ ಅನುದಾನ ನೀಡಿರಲಿಲ್ಲ. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಕಾರವಾರದಿಂದ ಭಟ್ಕಳದವರೆಗೂ ಉಪ್ಪುನೀರು ತಡೆಗೆ ₹300 ಕೋಟಿ ಅನುದಾನ ನೀಡಲಾಗಿದೆ. ಹಲವು ಕಡೆ ಈ ಕಾಮಗಾರಿಗಳು ಪೂರ್ಣಗೊಂಡಿವೆ. ಈ ಮೂಲಕ ಜನರಿಗೆ ಕುಡಿಯುವ ಹಾಗೂ ಕೃಷಿ ಭೂಮಿಯ ನೀರಿನ ಸಮಸ್ಯೆ ನಿವಾರಣೆಗೆ ಶ್ರಮಿಸಿದೆ ಎಂದರು.ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ, ಶಾಸಕ ದಿನಕರ ಶೆಟ್ಟಿ, ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ, ಮಂಡಲದ ಅಧ್ಯಕ್ಷರಾದ ಮಂಜುನಾಥ ನಾಯ್ಕ, ಮಾಜಿ ಸಚಿವರಾದ ಶಿವಾನಂದ ನಾಯ್ಕ, ಮಾಜಿ ಶಾಸಕರಾದ ಸುನಿಲ್ ನಾಯ್ಕ, ಲೊಕಸಭಾ ಸಂಚಾಲಕ ಗೋವಿಂದ ನಾಯ್ಕ, ಚುನಾವಣಾ ಪ್ರಭಾರಿ ಕೆ.ಜಿ. ನಾಯ್ಕ, ಡಾ. ಜಿ.ಜಿ. ಹೆಗಡೆ ಮತ್ತಿತರರು ಇದ್ದರು.