ಮಂಗಳೂರು: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ‘ಉತ್ಥಾನ’ ನೂತನ ಕಟ್ಟಡದ ಲೋಕಾರ್ಪಣೆ ಹಿನ್ನೆಲೆಯಲ್ಲಿ, ಸಂಘದ ವತಿಯಿಂದ ಎಸ್‌ಸಿಡಿಸಿಸಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಸೋಮವಾರ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಸನ್ಮಾನಿಸಲಾಯಿತು.

ಉಜಿರೆ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ಅಧ್ಯಕ್ಷ ಕೇರಿಮಾರ್ ಬಾಲಕೃಷ್ಣ ಗೌಡ ಮಾತನಾಡಿ, ಸಂಘದ ನಿರಂತರ ಅಭಿವೃದ್ಧಿಗೆ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನ ಮತ್ತು ಸಹಕಾರ ಮಹತ್ವದ ಪಾತ್ರ ವಹಿಸಿದೆ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು, ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ವಿಶಿಷ್ಟ ಗುರುತನ್ನು ನಿರ್ಮಿಸಿಕೊಂಡಿರುವ ಉಜಿರೆ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘ ಇದೀಗ 3.50 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿರುವ ‘ಉತ್ಥಾನ’ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸುವ ಮೂಲಕ ತನ್ನ ಸೇವಾ ಬದ್ಧತೆ ಮತ್ತು ಅಭಿವೃದ್ಧಿಯ ಸಂಕಲ್ಪವನ್ನು ಮತ್ತೊಮ್ಮೆ ಪ್ರತಿಬಿಂಬಿಸಿದೆ ಎಂದರು. ಇದೇ ಸಂದರ್ಭದಲ್ಲಿ ನೂತನ ಕಟ್ಟಡದ ಅಭಿವೃದ್ಧಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ 10 ಲಕ್ಷ ರು. ಸಹಾಯಧನ ನೀಡಲಾಗುವುದು ಎಂದು ಅವರು ಘೋಷಿಸಿದರು.ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಕುಶಲಪ್ಪ ಗೌಡ, ಪೆರಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಪೆರಾಡಿ, ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ನಿರ್ದೇಶಕರಾದ ರಜತ್ ಗೌಡ, ಗುರುರಾಜ್, ಪುಷ್ಪಾವತಿ, ಅಣ್ಣು ನಾಯ್ಕ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸರಸ್ವತಿ ಇದ್ದರು.