ಸಾರಾಂಶ
ಸಹಕಾರಿ ರಂಗದಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಬ್ಯಾಂಕಿಂಗ್ ಸೇವೆ ಒದಗಿಸುತ್ತಿರುವ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ ಬ್ಯಾಂಕ್)ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ನ ಪ್ರಥಮ ಪ್ರಶಸ್ತಿ ಲಭಿಸಿದೆ.
ಕನ್ನಡಪ್ರಭ ವಾರ್ತೆ ಮಂಗಳೂರು
ಸಹಕಾರಿ ರಂಗದಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಬ್ಯಾಂಕಿಂಗ್ ಸೇವೆ ಒದಗಿಸುತ್ತಿರುವ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ ಬ್ಯಾಂಕ್)ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ನ ಪ್ರಥಮ ಪ್ರಶಸ್ತಿ ಲಭಿಸಿದೆ.ಅಪೆಕ್ಸ್ ಬ್ಯಾಂಕ್ ರಾಜ್ಯದ ಅತ್ಯುತ್ತಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ಪ್ರಥಮ ಪ್ರಶಸ್ತಿ ನೀಡುತ್ತಿದ್ದು, ಈ ಪ್ರತಿಷ್ಠಿತ ಪ್ರಶಸ್ತಿಗೆ ಎಸ್ಸಿಡಿಸಿಸಿ ಬ್ಯಾಂಕ್ ಭಾಜನವಾಗಿದೆ.
ಎಸ್ಸಿಡಿಸಿಸಿ ಬ್ಯಾಂಕ್ 2023-24ನೇ ಸಾಲಿನಲ್ಲಿ ತೋರಿದ ಸರ್ವಾಂಗೀಣ ಪ್ರಗತಿಯೊಂದಿಗೆ ಲೆಕ್ಕ ಪರಿಶೋಧನೆಯಲ್ಲಿ ‘ಎ’ ವರ್ಗವನ್ನು ಪಡೆದು ಪ್ರಥಮ ಪ್ರಶಸ್ತಿಗೆ ಆಯ್ಕೆಗೊಂಡಿದೆ. ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲ ಕೃಷಿ ಸಾಲಗಳು ಶೇ.100 ಮರುಪಾವತಿ ಕಂಡಿದ್ದು, ಇಂತಹ ಸಾಧನೆಯನ್ನು ಬ್ಯಾಂಕ್ ಕಳೆದ 30 ವರ್ಷಗಳಿಂದ ನಿರಂತರವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ.23 ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ:
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 113 ಶಾಖೆಗಳ ಮೂಲಕ ಉತ್ಕೃಷ್ಟ ಬ್ಯಾಂಕಿಂಗ್ ಸೇವೆ ನೀಡುತ್ತಿರುವ ಎಸ್ಸಿಡಿಸಿಸಿ ಬ್ಯಾಂಕ್ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ನಾಯಕತ್ವದಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದೆ. ಅಭಿವೃದ್ಧಿ ಪಥದಲ್ಲಿರುವ ಎಸ್ಸಿಡಿಸಿಸಿ ಬ್ಯಾಂಕ್ ರಾಜ್ಯದ ಅತ್ಯುತ್ತಮ ಬ್ಯಾಂಕ್ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು 23ನೇ ಬಾರಿ ಮುಡಿಗೇರಿಸಿಕೊಂಡಿದೆ.ಸೇವೆಯೇ ಮುಖ್ಯ ಧ್ಯೇಯ:
ಗ್ರಾಹಕರ ಸೇವೆಯನ್ನೇ ಮುಖ್ಯ ಧ್ಯೇಯವನ್ನಾಗಿಟ್ಟುಕೊಂಡು ಯಶಸ್ಸಿನ ಪಥದಲ್ಲಿ ಮುನ್ನಡೆ ಕಾಣುತ್ತಿರುವ ಎಸ್ಸಿಡಿಸಿಸಿ ಬ್ಯಾಂಕಿಗೆ ವರದಿ ವರ್ಷದಲ್ಲಿ ಕೇಂದ್ರ ಸರ್ಕಾರದ ಅಟಲ್ ಪಿಂಚಣಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ‘ಎಪಿವೈ ರಾಷ್ಟ್ರೀಯ ಪ್ರಶಸ್ತಿ’ ನಾಲ್ಕನೇ ಬಾರಿ ಲಭಿಸಿದೆ.ಆ.13ರಂದು ಬೆಂಗಳೂರಿನಲ್ಲಿ ನಡೆಯುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.