ಜನರ ಸಮಸ್ಯೆಗಳನ್ನು ಆಲಿಸುವುದು ಮಾತ್ರವಲ್ಲ, ಅವುಗಳಿಗೆ ಸಮಯ ಬದ್ಧವಾಗಿ ಪರಿಹಾರ ಕಲ್ಪಿಸುವುದೇ ಜನಸೇವೆಯ ನಿಜವಾದ ಅರ್ಥ ಎಂದು ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸಿ.ಬಿ.ಸುರೇಶ್ ಬಾಬು ಹೇಳಿದರು.
ಕನ್ನಡಪ್ರಭ ವಾರ್ತೆ ಶಿರಾ
ಸರಕಾರದ ಯೋಜನೆಗಳು ಕೇವಲ ಕಡತಗಳಲ್ಲಿ ಉಳಿಯದೆ, ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಬೇಕು ಎಂಬುದು ನಮ್ಮ ಸ್ಪಷ್ಟ ಉದ್ದೇಶ. ಜನರ ಸಮಸ್ಯೆಗಳನ್ನು ಆಲಿಸುವುದು ಮಾತ್ರವಲ್ಲ, ಅವುಗಳಿಗೆ ಸಮಯ ಬದ್ಧವಾಗಿ ಪರಿಹಾರ ಕಲ್ಪಿಸುವುದೇ ಜನಸೇವೆಯ ನಿಜವಾದ ಅರ್ಥ ಎಂದು ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸಿ.ಬಿ.ಸುರೇಶ್ ಬಾಬು ಹೇಳಿದರು.ಅವರು ಶಿರಾ ತಾ.ಪಂ. ಸಭಾಂಗಣದಲ್ಲಿ ಬುಕ್ಕಾಪಟ್ಟಣ ಹೋಬಳಿಯ ರೈತರು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವ ಉದ್ದೇಶದಿಂದ ನಡೆದ ೫೩ನೇ ವಾರದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದರು. ಸಭೆಯಲ್ಲಿ ರೈತರು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿ, ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಯಿತು. ಬಾಕಿ ಉಳಿದಿರುವ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ವರ್ಗಾಯಿಸಿ, ಅವುಗಳ ಕುರಿತು ಮುಂದಿನ ಜನಸಂಪರ್ಕ ಸಭೆಯಲ್ಲಿ ಪ್ರಗತಿ ವರದಿ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
ವಿಶೇಷವಾಗಿ, ವಿಧವಾ ವೇತನ, ವೃದ್ಧಾಪ್ಯ ವೇತನ ಹಾಗೂ ವಿಶೇಷ ವೇತನ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಅರ್ಹ ಫಲಾನುಭವಿಗಳು ಜನಸಂಪರ್ಕ ಸಭೆಗೆ ನೇರವಾಗಿ ಆಗಮಿಸಿ ಅರ್ಜಿ ಸಲ್ಲಿಸಿದಲ್ಲಿ, ಒಂದು ವಾರದೊಳಗೆ ಮಂಜೂರಾತಿ ಪತ್ರ ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕರಿಗೆ ತಿಳಿಸಲಾಯಿತು.ಈ ಸಂದರ್ಭದಲ್ಲಿ ತಹಶೀಲ್ದಾರ್ ಆನಂದ್ ಕುಮಾರ್, ಕಾರ್ಯನಿರ್ವಾಹಕ ಅಧಿಕಾರಿ ಹರೀಶ್.ಆರ್ ಸೇರಿದಂತೆ ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.