ಶಾಲೆ- ಕಾಲೇಜು ವಿದ್ಯಾರ್ಥಿಗಳಲ್ಲಿ ಶಿಸ್ತು- ಸಂಯಮ, ರಾಷ್ಟ್ರ ಭಕ್ತಿ, ಉತ್ತಮ ನಾಯಕತ್ವ ಗುಣ, ಸಹನೆ, ತಾಳ್ಮೆಯ ಶಕ್ತಿಯನ್ನು ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಉತ್ತಮ ವೇದಿಕೆ ಕಲ್ಪಿಸುತ್ತದೆ ಎಂದು ಕರ್ನಾಟಕ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಹೇಳಿದರು.
ಕುಶಾಲನಗರ: ಶಾಲೆ- ಕಾಲೇಜು ವಿದ್ಯಾರ್ಥಿಗಳಲ್ಲಿ ಶಿಸ್ತು- ಸಂಯಮ, ರಾಷ್ಟ್ರ ಭಕ್ತಿ, ಉತ್ತಮ ನಾಯಕತ್ವ ಗುಣ, ಸಹನೆ, ತಾಳ್ಮೆಯ ಶಕ್ತಿಯನ್ನು ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಉತ್ತಮ ವೇದಿಕೆ ಕಲ್ಪಿಸುತ್ತದೆ ಎಂದು ಕರ್ನಾಟಕ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಹೇಳಿದರು.ಭಾರತ್ ಸ್ಕೌಟ್ಸ್, ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ ವತಿಯಿಂದ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆ ವತಿಯಿಂದ
ಕುಶಾಲನಗರ ಕೊಡವ ಸಮಾಜದ ಸಭಾಂಗಣದಲ್ಲಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಏರ್ಪಡಿಸಿದ ಒಂದು ವಾರ ಕಾಲದ ಸ್ಕೌಟ್ಸ್, ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ಪ್ರಸಕ್ತ ವರ್ಷ ರಾಜ್ಯದಲ್ಲಿ 8.5 ಲಕ್ಷ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮಕ್ಕಳ ಮೂಲಕ ಸುಸ್ಥಿರ ಅಭಿವೃದ್ಧಿಯನ್ನು ದೃಷ್ಟಿಯಾಗಿರಿಸಿ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ. ಸಮಾಜದಲ್ಲಿ ಸುಸ್ಥಿರ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ಹಲವು ವ್ಯಕ್ತಿಗಳನ್ನು ನಮ್ಮ ಆದರ್ಶವಾಗಿಟ್ಟುಕೊಂಡು ಅವರ ಆದರ್ಶ ವ್ಯಕ್ತಿತ್ವವನ್ನು ನಮ್ಮ ವಿದ್ಯಾರ್ಥಿಗಳು ಅನುಸರಿಸಿ ಉತ್ತಮ ಸಮಾಜ ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ದಿಸೆಯಲ್ಲಿ ತರಬೇತಿ ನೀಡಲಾಗುತ್ತಿದೆ ಎಂದರು.ರಾಜ್ಯ ಸಂಸ್ಥೆಯ ಸ್ಕೌಟ್ ವಿಭಾಗದ ಸಹಾಯಕ ಆಯುಕ್ತ ಬಿ.ಕೆ. ಬಸವರಾಜ್ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಶಿಸ್ತು ಹಾಗೂ ಭಾವೈಕ್ಯ ಕಲಿಸುವುದೇ ಮುಖ್ಯ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಕೃಷ್ಣಪ್ಪ ಮಾತನಾಡಿ, ಶಾಲೆಗಳಲ್ಲಿ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಘಟಕಗಳನ್ನು ಸ್ಥಾಪಿಸುವ ಮೂಲಕ ಮಕ್ಕಳಲ್ಲಿ ಶಿಸ್ತುಬದ್ಧ ಜೀವನ ಮತ್ತು ಉತ್ತಮ ಜೀವನ ಕೌಶಲ್ಯಗಳನ್ನು ಬೆಳೆಸಲು ಇಂತಹ ಶಿಬಿರಗಳು ಸಹಕಾರಿಯಾಗಿವೆ ಎಂದರು.ಅಧ್ಯಕ್ಷತೆ ವಹಿಸಿದ್ದ ಸ್ಕೌಟ್ಸ್, ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮಾಥ್ಯೂ ಮಾತನಾಡಿ, ಸಂಸ್ಥೆಯ ವತಿಯಿಂದ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮ, ತರಬೇತಿಗಳ ಮೂಲಕ ಸ್ಕೌಟ್ಸ್, ಗೈಡ್ಸ್ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಶಿಬಿರದ ರೂಪುರೇಷೆ ಕುರಿತು ಶಿಬಿರಾಧಿಕಾರಿ ಜಿಲ್ಲಾ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರ ಮಾಹಿತಿ ನೀಡಿದರು. ಕೊಡವ ಸಮಾಜದ ಅಧ್ಯಕ್ಷ ವಾಂಚೀರ ಮನು ನಂಜುಂಡ ಮಾತನಾಡಿ, ಸ್ಕೌಟ್ಸ್, ಗೈಡ್ಸ್ ಸಂಸ್ಥೆಯು ಮಕ್ಕಳಲ್ಲಿ ಶಿಸ್ತು- ಸಂಯಮ ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ. ಪ್ರವೀಣ್ ದೇವರಗುಂಡ ಸೋಮಪ್ಪ, ಜಿಲ್ಲಾ ಸ್ಕೌಟ್ಸ್ ನ ಆಯುಕ್ತ ಜಿಮ್ಮಿ ಸಿಕ್ವೇರಾ, ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ. ಪ್ರೇಮ ಕುಮಾರ್, ಸ್ಥಾನಿಕ ಆಯುಕ್ತ ಎಚ್.ಆರ್. ಮುತ್ತಪ್ಪ, ಕೋಶಾಧಿಕಾರಿ ಟಿ.ಎಂ. ಮುದ್ದಯ್ಯ, ಸ್ಕೌಟ್ಸ್ ನ ಆಯುಕ್ತ ಕೆ.ಯು. ರಂಜಿತ್, ರೋವರ್ಸ್ ಲೀಡರ್ ಬಾಲಕೃಷ್ಣ ನಾಯ್ಡು, ಗೈಡ್ ಲೀಡರ್ ಪಿ.ಎಚ್. ಅಲೀಮ, ಜಿಲ್ಲಾ ಗೈಡ್ಸ್ ನ ಸಹಾಯಕ ಆಯುಕ್ತ ಸಿ.ಎಂ. ಸುಲೋಚನ, ಕೆ.ಬಿ. ಗಣೇಶ್,
ಜಿಲ್ಲಾ ಸಂಘಟಕಿ ಯು.ಸಿ. ದಮಯಂತಿ ಮತ್ತು ಸಂಪಾಜೆ ಸ್ಥಳೀಯ ಸಂಸ್ಥೆ ಅಧ್ಯಕ್ಷ ಎಂ. ಧನಂಜಯ, ಕಾರ್ಯದರ್ಶಿಕೆ.ಬಿ. ಉಷಾರಾಣಿ, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಇಂದಿರಾ, ಖಜಾಂಚಿ ಎನ್.ಎಸ್. ನರೇಶ್, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಡಾ. ಸದಾಶಿವಯ್ಯ ಎಸ್. ಪಲ್ಲೇದ್, ಪದಾಧಿಕಾರಿಗಳು, ತರಬೇತುದಾರ ಶಿಕ್ಷಕರು ಮತ್ತು ಉಪನ್ಯಾಸಕರು ಇದ್ದರು. ಕೆ.ಯು. ರಂಜಿತ್ ಸ್ವಾಗತಿಸಿದರು. ಯು.ಸಿ. ದಮಯಂತಿ ವಂದಿಸಿದರು. ಪಿ.ಎಚ್. ಅಲೀಮ ನಿರ್ವಹಿಸಿದರು.