ಶಿಸ್ತು ಬೆಳೆಸಲು ಸ್ಕೌಟ್ಸ್, ಗೈಡ್ಸ್ ಸಹಕಾರಿ: ರಂಗಧಾಮಪ್ಪ

| Published : Jul 04 2024, 01:03 AM IST

ಶಿಸ್ತು ಬೆಳೆಸಲು ಸ್ಕೌಟ್ಸ್, ಗೈಡ್ಸ್ ಸಹಕಾರಿ: ರಂಗಧಾಮಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಘಟಕದ ವತಿಯಿಂದ ಮಡಿಕೇರಿ ಡಿಡಿಪಿಐ ಕಚೇರಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಚಟುವಟಿಕೆಗಳ ಕುರಿತು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮತ್ತು ಪದಾಧಿಕಾರಿಗಳೊಂದಿಗೆ ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಪ್ಪ ಸಮಾಲೋಚನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಶಾಲಾ ಮಕ್ಕಳಲ್ಲಿ ಶಿಸ್ತು, ಸಂಯಮ, ಉತ್ತಮ ನಾಯಕತ್ವ ಗುಣ ಬೆಳೆಸಲು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಚಟುವಟಿಕೆ ಸಹಕಾರಿ. ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಹಾಗೂ ಭವಿಷ್ಯದಲ್ಲಿ ತಮ್ಮನ್ನು ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸ್ಕೌಟ್ಸ್‌-ಗೈಡ್ಸ್‌ ಉತ್ತಮ ವೇದಿಕೆ ಒದಗಿಸುತ್ತದೆ ಎಂದು ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಪ್ಪ ಹೇಳಿದ್ದಾರೆ.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಘಟಕದ ವತಿಯಿಂದ ನಗರದ ಡಿಡಿಪಿಐ ಕಚೇರಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಚಟುವಟಿಕೆಗಳ ಕುರಿತು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮತ್ತು ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕಾರ್ಯಚಟುವಟಿಕೆಗಳ ಕುರಿತು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾಹಿತಿ ನೀಡಿದರು.

ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಸಂಸ್ಥೆಯ ಘಟಕಗಳ ಮೂಲಕ ಮಕ್ಕಳಲ್ಲಿ ವಿವಿಧ ಅಭ್ಯಾಸಾತ್ಮಕ ಚಟುವಟಿಕೆಗಳು ಹಾಗೂ ತರಬೇತಿಗಳನ್ನು ಹಮ್ಮಿಕೊಂಡು ಮಕ್ಕಳಲ್ಲಿ ದೇಶಾಭಿಮಾನ ಬೆಳೆಸಲಾಗುತ್ತಿದೆ ಎಂದು ಬೇಬಿಮ್ಯಾಥ್ಯೂ ತಿಳಿಸಿದರು.

ಸಂಸ್ಥೆಯ ಸ್ಥಾನಿಕ ಆಯುಕ್ತ ಎಚ್.ಎಂ.ಮುತ್ತಪ್ಪ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಜಿಲ್ಲಾ ತರಬೇತಿ ಆಯುಕ್ತ ಕೆ.ಯು.ರಂಜಿತ್, ಸಂಪಾಜೆ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಎಂ.ಧನಂಜಯ, ಕಾರ್ಯದರ್ಶಿ ಕೆ.ಬಿ.ಉಷಾರಾಣಿ, ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ ಇದ್ದರು.

ಇದಕ್ಕೂ ಮೊದಲು, ಜಿಲ್ಲೆಗೆ ಹೊಸದಾಗಿ ಆಗಮಿಸಿದ ನೂತನ ಡಿಡಿಪಿಐ ಆಗಿದ್ದು, ಸ್ಕೌಟ್ಸ್, ಗೈಡ್ಸ್‌ ಸಂಸ್ಥೆಯ ಉಪಾಧ್ಯಕ್ಷರಾಗಿರುವ ಸಿ.ರಂಗಧಾಮಪ್ಪ ಅವರಿಗೆ ಸಂಸ್ಥೆಯ ಪರವಾಗಿ ಕಂಠ ವಸ್ತ್ರ ಧರಿಸಿ ಪುಷ್ಪ ಗುಚ್ಛ ನೀಡಿ ಬರಮಾಡಿಕೊಳ್ಳಲಾಯಿತು.