ಸಾರಾಂಶ
ಯುವಜನತೆಯಲ್ಲಿ ಶಿಸ್ತು- ಸಂಯಮ, ಬೌದ್ಧಿಕ, ಸಾಂಸ್ಕೃತಿಕ , ಆಧ್ಯಾತ್ಮಿಕ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿ ಅವರನ್ನು ದೇಶದ ಸತ್ಪ್ರಜೆಗಳನ್ನಾಗಿ ರೂಪಿಸುವುದೇ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಮುಖ ಧ್ಯೇಯ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಕುಶಾಲನಗರ
ಯುವಜನತೆಯಲ್ಲಿ ಶಿಸ್ತು- ಸಂಯಮ, ಬೌದ್ಧಿಕ, ಸಾಂಸ್ಕೃತಿಕ , ಆಧ್ಯಾತ್ಮಿಕ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿ ಅವರನ್ನು ದೇಶದ ಸತ್ಪ್ರಜೆಗಳನ್ನಾಗಿ ರೂಪಿಸುವುದೇ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಮುಖ ಧ್ಯೇಯ ಎಂದು ಭಾರತ್ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಹೇಳಿದ್ದಾರೆ.
ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕುಶಾಲನಗರ ತಾಲೂಕು ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಕುಶಾಲನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.ಯುವ ಸಮೂಹ ದೇಶದ ಶಕ್ತಿ. ಯುವ ಸಮುದಾಯ ಸ್ಕೌಟ್ಸ್ ಮತ್ತು ಗೈಡ್ಸ್ ಉದ್ದೇಶದೊಂದಿಗೆ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಿಕೊಂಡು ದೇಶದ ಹಿತ ಕಾಯುವಲ್ಲಿ ಸಂಕಲ್ಪ ಹೊಂದಬೇಕು ಎಂದರು.ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ಮಕ್ಕಳು ಭಾಗವಹಿಸುವುದರಿಂದ ಶಿಸ್ತು, ಸಂಯಮ, ದೇಶಭಕ್ತಿ ವೃದ್ಧಿಯಾಗಲಿದೆ ಎಂದರು.
ಪರಿಸರ ಸಂರಕ್ಷಣೆ ಸೇರಿದಂತೆ ಹಲವು ಸಮಾಜಪರ ಕಾರ್ಯ ಕ್ರಮಗಳನ್ನು ಆಯೋಜಿಸುತ್ತಿದೆ ಎಂದು ಪಿ.ಜಿ.ಆರ್.ಸಿಂಧ್ಯ ಹೇಳಿದರು.ಸ್ಕೌಟ್ಸ್, ಗೈಡ್ಸ್ ವಾರ್ಷಿಕ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ಸಂಸ್ಥೆಯ ರಾಜ್ಯ ಸಂಘಟನಾ ಪ್ರಮುಖ ಪ್ರಭಾಕರ್ ಭಟ್, ಪರಿಸರ ಪೂರಕ ಚಟುವಟಿಕೆಗಳು ಹಾಗೂ ಸ್ವಚ್ಛತಾ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಕುರಿತು ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕುಶಾಲನಗರ ತಾಲೂಕು ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ. ಪ್ರವೀಣ್ ದೇವರಗುಂಡ ಮಾತನಾಡಿ, ಸ್ಥಳೀಯ ಸಂಸ್ಥೆಯ ವತಿಯಿಂದ ಕೈಗೊಂಡಿರುವ ಕಾರ್ಯಕ್ರಮಗಳು ಹಾಗೂ ಸೇವಾ ಚಟುವಟಿಕೆಗಳ ಕುರಿತು ತಿಳಿಸಿದರು.ಜಿಲ್ಲಾ ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಟಿ.ಜಿ.ಪ್ರೇಮಕುಮಾರ್,
ಜಿಲ್ಲಾ ಗೈಡ್ಸ್ ವಿಭಾಗದ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ , ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ ತಮ್ಮಯ್ಯ, ಉಪಾಧ್ಯಕ್ಷ ರಾಜೇ ಗೌಡ, ಅರುಣ್, ಕಾರ್ಯದರ್ಶಿ ಎಂ.ಎಸ್.ಗಣೇಶ್, ಸಹ ಕಾರ್ಯದರ್ಶಿ ಎಸ್.ಆರ್.ಶಿವಲಿಂಗ, ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ನರೇಶ್, ಸಂಸ್ಥೆಯ ಪ್ರಮುಖರಾದ ಬಿ.ಜಿ. ವಾಣಿ, ಎ.ಆರ್.ಲತಾ, ಸುನಿಲ್ ರಾವ್, ಎಂ.ಎಸ್. ಕುಮಾರ್, ಎಂ.ಮಧುಸೂದನ್, ಬಾಪು, ವೇಣು ಆಚಾರ್ಯ, ವಸಂತ್, ರಾಜೇಶ್, ಜಯರಾಜ್ ಮತ್ತಿತರರು ಇದ್ದರು.