ಎಸ್‌ಸಿಪಿ-ಟಿಎಸ್‌ಪಿ ಅನುದಾನ ಸಮರ್ಪಕ ಬಳಕೆಯಾಗಲಿ

| Published : Jun 07 2025, 12:05 AM IST

ಎಸ್‌ಸಿಪಿ-ಟಿಎಸ್‌ಪಿ ಅನುದಾನ ಸಮರ್ಪಕ ಬಳಕೆಯಾಗಲಿ
Share this Article
  • FB
  • TW
  • Linkdin
  • Email

ಸಾರಾಂಶ

ಹಿಂದಿನ ವರ್ಷದ ಯಾವುದೇ ಕಾಮಗಾರಿಗಳು ಬಾಕಿ ಇರದಂತೆ ನೋಡಿಕೊಳ್ಳಬೇಕು ಮತ್ತು ಒಂದು ವರ್ಷ ಮುಂಚಿತವಾಗಿ ಯೋಜನೆ ರೂಪಿಸಬೇಕು. ಅಂದಾಗ ಆ ಕೆಲಸಗಳನ್ನು ಬೇಗ ಮುಗಿಸಲು ಸಾಧ್ಯವಾಗಲಿದೆ.

ಕೊಪ್ಪಳ:

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ ಇರುವ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು. ಯಾವುದೇ ಕೆಲಸ ಹಾಗೂ ಕಾಮಗಾರಿಗಳು ಬಾಕಿ ಇರದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧಿನಿಯಮ-2013 ರನ್ವಯ ಅನುಸೂಚಿತ ಜಾತಿಗಳು ಉಪಯೋಜನೆ, ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ, ವರ್ಗದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಿಂದಿನ ವರ್ಷದ ಯಾವುದೇ ಕಾಮಗಾರಿಗಳು ಬಾಕಿ ಇರದಂತೆ ನೋಡಿಕೊಳ್ಳಬೇಕು ಮತ್ತು ಒಂದು ವರ್ಷ ಮುಂಚಿತವಾಗಿ ಯೋಜನೆ ರೂಪಿಸಬೇಕು. ಅಂದಾಗ ಆ ಕೆಲಸಗಳನ್ನು ಬೇಗ ಮುಗಿಸಲು ಸಾಧ್ಯವಾಗಲಿದೆ ಎಂದ ಅವರು, ಪರಿಶಿಷ್ಟ ಜಾತಿಯ ಕಾಲನಿಗಳಲ್ಲಿ ಶಾಲೆ, ಅಂಗನವಾಡಿ, ಗ್ರಂಥಾಲಯ, ರಸ್ತೆ, ಚರಂಡಿ, ನೀರು ಸೇರಿದಂತೆ ಅವಶ್ಯವಿರುವ ಯೋಜನೆ ರೂಪಿಸಬೇಕೆಂದು ಹೇಳಿದರು.

ದೌರ್ಜನ್ಯಕ್ಕೆ ಒಳಗಾಗಿ ಮರಣ, ಅತ್ಯಾಚಾರ ಹಾಗೂ ಗಾಯಗೊಂಡ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಕನಿಷ್ಠ ₹ 5ರಿಂದ ₹ 10 ಲಕ್ಷ ವರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಹಾರ ತಲುಪಿಸಬೇಕು. ತಮಗೆ ಅವಶ್ಯಕತೆ ಇದ್ದರೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದ ಜಿಲ್ಲಾಧಿಕಾರಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಜಿಲ್ಲೆಗೆ ನೀಡಿದ ₹ 400 ಕೋಟಿ ಅನುದಾನದಲ್ಲಿ ಎಸ್ಸಿ-ಎಸ್ಟಿ ಅಭಿವೃದ್ಧಿಗಾಗಿ ₹ 100 ಕೋಟಿ ವರೆಗೆ ಬಳಸಬಹುದು ಎಂದರು.

ಸಭೆಯಲ್ಲಿ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೇಯ. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ. ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ ಸೇರಿದಂತೆ ಜಿಲ್ಲಾಮಟ್ಟದ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.