ಅಗತ್ಯ ಕ್ರಮಕ್ಕೆ ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ ಅಧಿಕಾರಿಗಳಿಗೆ ಸೂಚಿಸಿ
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಫೆ.28ರಿಂದ ಮಾ.17 ರವರೆಗೆ ನಡೆಯಲಿದ್ದು, ಪರೀಕ್ಷೆಗಳನ್ನು ಜಿಲ್ಲೆಯಲ್ಲಿ ವ್ಯವಸ್ಥಿತ, ಪಾರದರ್ಶಕವಾಗಿ ನಡೆಸಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಕೆಸ್ವಾನ್ ಕೇಂದ್ರದಲ್ಲಿ ಮಂಗಳವಾರ ನಡೆದ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಪೂರ್ವ ಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ವಿರದಂತೆ ಸುವ್ಯವಸ್ಥಿತವಾಗಿ ನಡೆಸಬೇಕು. ಪರೀಕ್ಷೆಗೆ ಮೇಲ್ವಿಚಾರಕರ ನಿಯೋಜಿಸಿ ಪರೀಕ್ಷಾ ಪ್ರಾಧಿಕಾರದ ನಿರ್ದೇಶನವನ್ನು ತಪ್ಪದೆ ಪಾಲಿಸಲು ಆದೇಶಿಸಿದರು.ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ, ಕುಡಿವ ನೀರಿನ ವ್ಯವಸ್ಥೆ, ಕೊಠಡಿಗಳ ಸ್ವಚ್ಛತೆ, ಬೆಂಚುಗಳ ವ್ಯವಸ್ಥೆ, ಗೋಡೆ ಗಡಿಯಾರ ಸೇರಿದಂತೆ ಪರೀಕ್ಷೆ ಬರೆಯಲು ಅನುಕೂಲವಾಗುವ ಉತ್ತಮ ವಾತಾವರಣ ಕಲ್ಪಿಸಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಚಲನವಲನ ಗಮನಿಸಲು ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳು ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆತರುವಂತಿಲ್ಲ. ನೋಂದಣಿ ಹಾಗೂ ಕೊಠಡಿ ಸಂಖ್ಯೆಗಳನ್ನು ಖಾತ್ರಿಪಡಿಸಲು ಪರೀಕ್ಷಾ ಕೇಂದ್ರಗಳಲ್ಲಿ ಮಾಹಿತಿ ಒದಗಿಸಬೇಕು. ಪರೀಕ್ಷಾ ದಿನಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮವಹಿಸಿ, ಆರೋಗ್ಯ ಇಲಾಖೆಯಿಂದ ಶುಶ್ರೂಷಕರ ನೇಮಕ ಮಾಡಿ ಎಂದು ಸೂಚಿಸಿದರು. ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ ಉಪನಿರ್ದೇಶಕಿ ಕೆ.ಮಂಜುಳ ಮಾತನಾಡಿ, ಜಿಲ್ಲೆಯ 19 ಕೇಂದ್ರಗಳಲ್ಲಿ ಒಟ್ಟು 8,890 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಇವರಲ್ಲಿ 8,315 ಹೊಸ ವಿದ್ಯಾರ್ಥಿಗಳು, 351 ಪುನರಾವರ್ತಿತ, 222 ಖಾಸಗಿ ಅಭ್ಯರ್ಥಿಗಳು ಹಾಗೂ ಇಬ್ಬರು ಇತರೆ ಅಭ್ಯರ್ಥಿಗಳು ಸೇರಿದ್ದಾರೆ. ಕಲಾವಿಭಾಗದಲ್ಲಿ 1990, ವಿಜ್ಞಾನದಲ್ಲಿ 3800 ಹಾಗೂ ವಾಣಿಜ್ಯ ವಿಭಾಗದಲ್ಲಿ 3100ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.ಜಿಲ್ಲೆಯ ಎಲ್ಲ ತಾಲೂಕು ತಹಸೀಲ್ದಾರ್ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರೀಕ್ಷಾ ಸಿದ್ಧತೆ ಬಗ್ಗೆ ಚರ್ಚಿಸಲಾಯಿತು. ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಕಾಲೇಜು ಪ್ರಾಂಶುಪಾಲರು, ಹಿರಿಯ ಉಪನ್ಯಾಸಕರು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.