ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಲ್ಲಂಘಿಸಿ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಾ ಜಾತಿ ಪದ್ಧತಿಯ ವಿಷಬೀಜವನ್ನು ಬಿತ್ತುತ್ತಿರುವ ಮನುವಾದಿಗಳ ವಿರುದ್ಧ ಜಾತ್ಯತೀತ ಶಕ್ತಿಗಳು ಒಂದಾಗಿ ರಾಷ್ಟ್ರದ ಒಳಿತಿಗಾಗಿ ಹೋರಾಡಬೇಕಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಕರೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಲ್ಲಂಘಿಸಿ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಾ ಜಾತಿ ಪದ್ಧತಿಯ ವಿಷಬೀಜವನ್ನು ಬಿತ್ತುತ್ತಿರುವ ಮನುವಾದಿಗಳ ವಿರುದ್ಧ ಜಾತ್ಯತೀತ ಶಕ್ತಿಗಳು ಒಂದಾಗಿ ರಾಷ್ಟ್ರದ ಒಳಿತಿಗಾಗಿ ಹೋರಾಡಬೇಕಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಕರೆ ನೀಡಿದ್ದಾರೆ.ಉತ್ತರಖಂಡ್ ರಾಜ್ಯದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣಗೊಳಿಸಿದ ಪ್ರಕರಣವನ್ನು ಖಂಡಿಸಿ ಹಾಗೂ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರ ಮೇಲೆ ಎಫ್.ಐ.ಆರ್ ದಾಖಲಿಸಿರುವುದನ್ನು ವಿರೋಧಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ, ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ, ಮಡಿಕೇರಿ ಬ್ಲಾಕ್ ಮತ್ತು ನಗರ ಕಾಂಗ್ರೆಸ್ ಸಮಿತಿಯ ವತಿಯಿಂದ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.ಬಿಜೆಪಿಯ ದ್ವೇಷ ರಾಜಕಾರಣವನ್ನು ತಿರಸ್ಕರಿಸಿ ದೇಶದ ಏಕತೆಗಾಗಿ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಾಗಿದೆ. ಬಿಜೆಪಿಯಿಂದ ಶೋಷಿತ ಜನಾಂಗಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ಜನ ವಿರೋಧಿ ಮತ್ತು ಸಂವಿಧಾನ ವಿರೋಧಿ ಕೃತ್ಯಗಳ ವಿರುದ್ಧ ನಾವು ಧ್ವನಿ ಎತ್ತಿ ಮಾತನಾಡಬೇಕಾಗಿದೆ ಎಂದು ಟಿ.ಪಿ.ರಮೇಶ್ ತಿಳಿಸಿದರು. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷ ಮೋಹನ್ ಮೌರ್ಯ ಅವರು ಮಾತನಾಡಿ ದೇಶದಲ್ಲಿ ಜಾತಿ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಕುಕೃತ್ಯಗಳನ್ನು ಖಂಡಿಸಬೇಕಾಗಿದೆ. ದೇಶದಲ್ಲಿ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ ಸಂವಿಧಾನ ಗಟ್ಟಿಯಾಗಿ ನೆಲೆ ನಿಂತಿದೆ. ಇದರ ನಡುವೆಯೂ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣಗೊಳಿಸಿದ ಪ್ರಕರಣ ಸಂವಿಧಾನ ವಿರೋಧಿಯಾಗಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲು ಮಾಡುವ ಸಂಘ ಪರಿವಾರದ ನಡೆಯನ್ನು ನಾವು ಪ್ರಬಲವಾಗಿ ಖಂಡಿಸಬೇಕು ಎಂದು ಕರೆ ನೀಡಿದರು. ಪ್ರತಿಭಟನೆಯಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣಚ್ಚ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಕಾರ್ಯಧ್ಯಕ್ಷ ಸೌಖತ್‌ಆಲಿ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿ.ಜಿ.ಮೋಹನ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮತೀನ್, ಜಿಲ್ಲಾ ಪ್ರಚಾರ ಸಮಿತಿ ಉಪಾಧ್ಯಕ್ಷ ಕೇಟೋಳಿರ ಮೋಹನ್, ಮಡಿಕೇರಿ ಮೂಡಾ ಅಧ್ಯಕ್ಷ ಬಿ.ವೈ.ರಾಜೇಶ್, ಜಿಲ್ಲಾ ಪ್ರಚಾರ ಸಮಿತಿ ಕೋಶಾಧಿಕಾರಿ ಹ್ಯಾರಿಸ್ ಕೊಳಕೇರಿ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ನಿಕಟ ಪೂರ್ವ ಅಧ್ಯಕ್ಷ ಇಸ್ಮಾಯಿಲ್, ಜಿಲ್ಲಾ ಪ್ರಚಾರ ಸಮಿತಿ ಸಾಮಾಜಿಕ ಜಾಲತಾಣದ ಸಂಯೋಜಕ ಶಾಹಿನ್, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಕೋಚನ ಚೇತನ್, ಮಾಜಿ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್, ಮೂಡಾ ಸದಸ್ಯ ಆರ್.ಪಿ.ಚಂದ್ರಶೇಖರ್, ನಗರಸಭೆಯ ಮಾಜಿ ಅಧ್ಯಕ್ಷೆ ಜುಲೇಕಾಬಿ, ಮಾಜಿ ಉಪಾಧ್ಯಕ್ಷೆ ಲೀಲಾ ಶೇಷಮ್ಮ ಮತ್ತಿತರರು ಪಾಲ್ಗೊಂಡಿದ್ದರು.