ಸಾರಾಂಶ
ಎನ್.ಐ.ಟಿ.ಕೆ ಸುರತ್ಕಲ್ ಸೈಬರ್ ಸೆಕ್ಯೂರಿಟಿ ರೀಸರ್ಚ್ ಲ್ಯಾಬ್ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಕಾರದೊಂದಿಗೆ ಶಾಲಾ ಕಾಲೇಜುಗಳಲ್ಲಿ “ಸೈಬರ್ ಸೆಕ್ಯೂರಿಟಿ ಮತ್ತು ಕ್ರಿಪ್ಟೋಗ್ರಫಿ” ಕಾರ್ಯಾಗಾರಗಳನ್ನು ಏರ್ಪಡಿಸಿ ಭದ್ರತೆಯ ಹಲವು ಮಜಲುಗಳನ್ನು ಪರಿಚಯಿಸುವ ಪ್ರಯತ್ನ ಮಾಡುತ್ತಿದೆ ಎಂದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಭಾರತವು ಡಿಜಿಟಲ್ ತಂತ್ರಜ್ಞಾನದಲ್ಲಿ ಬಹಳಷ್ಟು ಸಾಧಿಸಿದ್ದರೂ ಅಗತ್ಯ ಭದ್ರತಾ ಕ್ರಮಗಳನ್ನು ಜನಸಾಮಾನ್ಯರು ತಿಳಿಯದೆ ಇರುವುದರಿಂದ ಈ ಕ್ಷೇತ್ರದಲ್ಲಿ ವಂಚನೆಗಳು ಮಿತಿ ಮೀರುತ್ತಿವೆ ಎಂದು ಎನ್ಐಟಿಕೆ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಡಾ. ಆಲ್ವಿನ್ ರೋಶನ್ ಪಾಯಸ್ ಹೇಳಿದ್ದಾರೆ.ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜಿಲ್ಲೆಯ ಆಯ್ದ ಎಟಿಎಲ್ ಶಾಲೆಗಳಿಗೆ ನಡೆದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಎನ್.ಐ.ಟಿ.ಕೆ ಸುರತ್ಕಲ್ ಸೈಬರ್ ಸೆಕ್ಯೂರಿಟಿ ರೀಸರ್ಚ್ ಲ್ಯಾಬ್ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಕಾರದೊಂದಿಗೆ ಶಾಲಾ ಕಾಲೇಜುಗಳಲ್ಲಿ “ಸೈಬರ್ ಸೆಕ್ಯೂರಿಟಿ ಮತ್ತು ಕ್ರಿಪ್ಟೋಗ್ರಫಿ” ಕಾರ್ಯಾಗಾರಗಳನ್ನು ಏರ್ಪಡಿಸಿ ಭದ್ರತೆಯ ಹಲವು ಮಜಲುಗಳನ್ನು ಪರಿಚಯಿಸುವ ಪ್ರಯತ್ನ ಮಾಡುತ್ತಿದೆ ಎಂದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಹಾಯಕ ಪ್ರೊಫೆಸರ್ ಡಾ. ಮಹೇಂದ್ರ ಪ್ರತಾಪ್ ಸಿಂಗ್ ಮಾತನಾಡಿ, ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಮೂಲಕ ಎಲ್ಲರನ್ನು ತಲುಪುವ ನಿಟ್ಟಿನಲ್ಲಿ ಆರ್ಥಿಕ ಅಪರಾಧಗಳನ್ನು ತಡೆಗಟ್ಟುವ ಪ್ರಯತ್ನ ಮಾಡಬೇಕು ಎಂದರು.ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ವಿ. ರಾವ್ ಮಾತನಾಡಿದರು.
ಎನ್.ಐ.ಟಿ.ಕೆ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿಕೆಗಳು ನಡೆದವು. ಭಾಗವಹಿಸಿದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಕಾರ್ಯಾಗಾರದ ಅಂಶಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕೇಂದ್ರದ ವೈಜ್ಞಾನಿಕ ಅಧಿಕಾರಿ ವಿಘ್ನೇಶ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಇನ್ನೊವೇಶನ್ ಹಬ್ನ ಮೆಂಟರ್ ಅಂಬಿಕಾ ಸ್ವಾಗತಿಸಿದರು. ಶೈಕ್ಷಣಿಕ ಸಹಾಯಕಿ ರಶ್ಮಿ ವಂದಿಸಿದರು.