ಕನ್ನಡಪ್ರಭ ವಾರ್ತೆ ವಿಜಯಪುರ

ಜನಗಣತಿಯು ದೇಶದ ಜನಸಂಖ್ಯೆಯ ಗಣತಿಯ ಜೊತೆಗೆ ದೇಶದ ಸಾಮಾಜಿಕ-ಆರ್ಥಿಕ ಸ್ಥಿತಿಗಳು ಮತ್ತು ಸಾಂಸ್ಕೃತಿಕ ವೈವಿದ್ಯತೆಯನ್ನು ದಾಖಲಿಸುವ ವೈಜ್ಞಾನಿಕ ಪ್ರಕ್ರಿಯೆಯಾಗಿದ್ದು, ಭಾರತದ ಮೊದಲ ಡಿಜಿಟಲ್ ಜನಗಣತಿ ಮತ್ತು 16ನೇ ಜನಗಣತಿಯು ಏಪ್ರಿಲ್‌ನಿಂದ 2 ಹಂತದಲ್ಲಿ ಆರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಕೇಸ್ವಾನ ಸಭಾಂಗಣದಲ್ಲಿ ನಡೆದ ಜನಗಣತಿ ಕುರಿತು ಪೂರ್ವಭಾವಿ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನಗಣತಿಯ ಸುರಕ್ಷಿತ ವೆಬ್ ಪೋರ್ಟಲ್: https://se.census.gov.in ಗೆ ಮೊಬೈಲ್ ಸಂಖ್ಯೆ ಮತ್ತು ಒಟಿಪಿ ಬಳಸಿ ಲಾಗಿನ್ ಆಗಿ. ಬಳಿಕ ನಿಮ್ಮ ಸ್ಥಳ ಆಯ್ಕೆ ಮಾಡಿ. ನಕ್ಷೆಯಲ್ಲಿ ನಿಮ್ಮ ಮನೆ ಗುರುತಿಸಿ. ಬಳಿಕ ಮನೆಯ ಇಲ್ಲವೇ ಕುಟುಂಬದ ವಿವರ ಭರ್ತಿ ಮಾಡಿ, ನಿಮ್ಮ SE Reference ID ಪಡೆಯಿರಿ. ಈಗ ಬಂದಿರುವ ನಿಮ್ಮ SE ID ಅನ್ನು ಸುರಕ್ಷಿತವಾಗಿ ಇಟ್ಟು, Enumerato ಮನೆಗೆ ಬಂದಾಗ ಅದನ್ನು ಅವರೊಂದಿಗೆ ಹಂಚಿಕೊಳ್ಳಬೇಕು. ಕ್ಷೇತ್ರ ಪರಿಶೀಲನೆ: ಏ. 16 ರಿಂದ ಮೇ 15 ರವರೆಗಿನ ಅವಧಿಯಲ್ಲಿ ಗಣತಿದಾರರು ಮನೆಗೆ ಭೇಟಿ ನೀಡಿ ವಿವರಗಳನ್ನು ಪರಿಶೀಲಿಸುತ್ತಾರೆ. ಒಂದು ವೇಳೆ ಸ್ವಯಂ ಗಣತಿ ಪೂರ್ಣಗೊಳಿಸದಿದ್ದರೇ ಅವರು ನಿಮ್ಮಿಂದಲೇ ಮಾಹಿತಿ ಸಂಗ್ರಹಿಸುತ್ತಾರೆ. ಈ ಅವಧಿಯಲ್ಲಿ ಶೇ.100ರಷ್ಟು ಗೌಪ್ಯತೆ ಇಟ್ಟು ನಿಮ್ಮ ಸ್ವಯಂ ಗಣತಿಯನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಜನತೆ ಇದರ ಸದುಪಯೋಗ ಪಡೆದುಕೊಂಡು ಜನಗಣತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬಹುದಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಮನೆ ಪಟ್ಟಿ ಮತ್ತು ಮನೆಗಣತಿ ಕಾರ್ಯವು ಏ.16 ರಿಂದ ಆರಂಭವಾಗಲಿದ್ದು, ಇದಕ್ಕೂ ಮುನ್ನ 15 ದಿನಗಳ ಮುಂಚಿತವಾಗಿ ಅಂದರೆ ಏ.1 ರಿಂದ 15ರವರೆಗೆ ಸ್ವಯಂ ಗಣತಿ ಕಾರ್ಯಕ್ಕೆ ಅವಕಾಶ ನೀಡಲಾಗಿದೆ. ಏ.1 ರಿಂದ ಏ.15 ರವರೆಗೆ ಸ್ವಯಂ ಗಣತಿ ವೆಬ್ ಪೋರ್ಟಲ್ ಲಭ್ಯವಿದೆ. ಮೊಬೈಲ್, ಡೆಸ್ಕ್ ಟಾಪ್, ಲ್ಯಾಪ್ ಟಾಪ್ ಸಾಧನಗಳ ಮೂಲಕ ನಮೂದಿಸಬಹುದು. ಇದರಿಂದ ಸಮಯದ ಉಳಿತಾಯ ಜೊತೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಸಂಗ್ರಹಿಸಲು ಸಹಕಾರಿ ಆಗಲಿದೆ ಎಂದರು.ಮಾಹಿತಿ ಭರ್ತಿಯ ವೇಳೆ ಕುಟುಂಬಗಳು ತಮ್ಮ ಸ್ಥಳದ ವಿವರಗಳನ್ನು (ರಾಜ್ಯ, ಜಿಲ್ಲೆ, ತಾಲೂಕು, ಗ್ರಾಮ/ಪಟ್ಟಣ/ನಗರ ಇತ್ಯಾದಿ) ಕಡ್ಡಾಯವಾಗಿ ನಮೂದಿಸಬೇಕು. ಸ್ಥಳವನ್ನು ನಿಖರವಾಗಿ ಗುರುತಿಸಲು ಪಿನ್ ಕೋಡ್ ಮತ್ತು ಡಿಜಿಟಲ್ ಮ್ಯಾಪ್ ಮೂಲಕ ಮನೆಯ ಸ್ಥಳವನ್ನು ಗುರುತಿಸುವ ವ್ಯವಸ್ಥೆಯೂ ಇರುತ್ತದೆ. ಸ್ವಯಂ-ಗಣತಿ ಪೋರ್ಟಲ್ ನಲ್ಲಿ ಕೇಳಿರುವ ಕೇಳುವ ಪ್ರಶ್ನೆಗಳಿಗೆ ಮನೆಪಟ್ಟಿ ಕಾರ್ಯಾಚರಣೆ ಮೊಬೈಲ್ ಆ್ಯಪ್ ನಲ್ಲಿರುವಂತೆಯೇ ರೂಪಿಸಲಾಗಿದ್ದು, ಕೆಲವು ಮಾಹಿತಿಗಳು ಪೂರ್ವ ಭರ್ತಿಯಾಗಿರಬಹುದು. ಸಾರ್ವಜನಿಕರಿಗೆ ಸಹಾಯವಾಗುವಂತೆ ಪದೇ ಪದೇ ಕೇಳುವ ಪ್ರಶ್ನೆಗಳು ಮತ್ತು ಮಾರ್ಗಸೂಚಿಗಳನ್ನೂ ಒದಗಿಸಲಾಗಿದೆ. ಕುಟುಂಬವು ತಮ್ಮ ಮಾಹಿತಿಯನ್ನು ಯಶಸ್ವಿಯಾಗಿ ಸಲ್ಲಿಸಿದ ನಂತರ, ಅವರಿಗೆ ಒಂದು ವಿಶಿಷ್ಟ ಸ್ವಯಂ-ಗಣತಿ ಐಡಿ ನೀಡಲಾಗುತ್ತದೆ. ಈ ಐಡಿಯನ್ನು ಎಸ್ ಎಂಎಸ್ ಮತ್ತು ಇಮೇಲ್ ಮೂಲಕ ಕಳುಹಿಸಲಾಗುತ್ತದೆ. ಅದನ್ನು ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಈ ಐಡಿಯನ್ನು ಸಾರ್ವಜನಿಕರು ಹಂಚಿಕೊಳ್ಳಬಹುದು. ಒಂದು ವೇಳೆ ಸಾರ್ವಜನಿಕರು ತಮ್ಮ ಸ್ವಯಂ ಗಣತಿ ಪೂರ್ಣಗೊಳಿಸದಿದ್ದರೇ ಗಣತಿದಾರರು ತಮ್ಮಿಂದಲೇ ಮಾಹಿತಿಯನ್ನು ಸಂಗ್ರಹಿಸುತ್ತಾರೆ. ಸ್ವಯಂ ಗಣತಿಯು ಶೇ.100 ರಷ್ಟು ಗೌಪ್ಯತೆಯ ಭದ್ರತೆ ನೀಡಲಿದ್ದು, ಪ್ರತಿಯೊಬ್ಬರೂ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ ದೇಶದ ಜವಾಬ್ದಾರಿಯುತ ನಾಗರಿಕರಾಗಬೇಕಿದೆ ಎಂದು ತಿಳಿಸಿದರು.ಸಭೆಯಲ್ಲಿ ಅಪರ್‌ ಜಿಲ್ಲಾಧಿಕಾರಿ ಡಾ.ಔದ್ರಾಮ, ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ ಸೇರಿದಂತೆ ಹಲವು ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.