ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಸ್ವಯಂ ಅಧ್ಯಯನಶೀಲತೆಯನ್ನು ಅಳವಡಿಸಿಕೊಳ್ಳುವ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆಯಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಹೇಳಿದರು. ತಾಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ವಿದ್ಯಾಸಂಸ್ಥೆಯಲ್ಲಿ ಸೋಮವಾರ ನಡೆದ ಆಶೀರ್ವಾದ ದಿನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಈಗಾಗಲೇ ಪರೀಕ್ಷೆಗೆ ಉತ್ತಮ ತಯಾರಿ ನಡೆಸಿದ್ದಾರೆ. ಯಾರಿಗೂ ಪರೀಕ್ಷಾ ಭಯ ಇಲ್ಲ. ಈಗಾಗಲೇ ಎರಡು ಬಾರಿ ಪೂರ್ವ ಸಿದ್ಧತಾ ಪರೀಕ್ಷೆ ಮಾಡಲಾಗಿದೆ. ವಿದ್ಯಾರ್ಥಿಗಳು ಅತ್ಯುತ್ತಮವಾಗಿ ಪರೀಕ್ಷೆ ಬರೆದಿದ್ದಾರೆ. ಪ್ರಸಕ್ತ ವರ್ಷ ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯದಲ್ಲಿ ಮೊದಲ ಅಥವಾ ಎರಡನೇ ಸ್ಥಾನವನ್ನು ಕೊಡಗು ಜಿಲ್ಲೆ ಪಡೆಯುವಂತೆ ಶಿಕ್ಷಕರು ಮತ್ತು ಶಿಕ್ಷಣ ಇಲಾಖೆ ಪ್ರಯತ್ನ ಮಾಡಿದೆ ಎಂದು ಹೇಳಿದರು. ಕ್ರೀಡೆ, ಕಲಿಕೆ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ೪ನೇ ರ‍್ಯಾಂಕ್ ಪಡೆದ ಕುವೆಂಪು ಶಾಲೆಯ ಸಿ.ಎಸ್.ಆದ್ವಿ, ೫ನೇ ರ‍್ಯಾಂಕ್ ಪಡೆದ ಕೆ.ಸಿ.ಪಂಚಮಿ, ೭ನೇ ರ‍್ಯಾಂಕ್ ಪಡೆದ ತೇಜಸ್ವಿನಿ ಅವರ ಪೋಷಕರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಸಂಘದ ಅಧ್ಯಕ್ಷ ಎ.ಆರ್.‌ ಮುತ್ತಣ್ಣ, ಉಪಾಧ್ಯಕ್ಷ ಎಸ್.ಬಿ.ಭರತ್ ಕುಮಾರ್, ಕಾರ್ಯದರ್ಶಿ ಎನ್.ಬಿ.ಗಣಪತಿ, ಖಜಾಂಚಿ ಲಿಂಗರಾಜು, ಮಾಜಿ ಎಂಎಲ್‌ಸಿ ಎಸ್.ಜಿ.ಮೇದಪ್ಪ, ನಿವೃತ್ತ ಶಿಕ್ಷಕ ಡಿ.ಎಸ್.ಚಂಗಪ್ಪ, ಪ್ರಾಂಶುಪಾಲರಾದ ಮಿಲ್ಗ್ರೆಡ್ ಗೊನ್ಸಾಲ್ವೆಸ್ ಮತ್ತು ನಿರ್ದೇಶಕರು ಇದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕಮ ನಡೆಯಿತು. ವಿದ್ಯಾರ್ಥಿನಿಯರಾದ ನಮನ, ಸುಹೈಲಾ, ದ್ವಿತಿ, ವೈಷ್ಣವಿ, ಕೀರ್ತನಾ, ಸ್ವಸ್ಥಿ, ಜ್ಞಾನ ಕಾರ್ಯಕ್ರಮ ನಿರ್ವಹಿಸಿದರು.