ಚಿಲ್ಲರೆ ಮದ್ಯ ಮಾರಾಟ ಲಾಭಾಂಶ ಹೆಚ್ಚಳಕ್ಕೆ ಮಾರಾಟಗಾರರ ಧರಣಿ

| Published : Feb 23 2024, 01:46 AM IST

ಸಾರಾಂಶ

ಚಿಲ್ಲರೆ ಮದ್ಯ ಮಾರಾಟದ ಲಾಭಾಂಶವನ್ನು ಹೆಚ್ಚಳ ಮಾಡಬೇಕು ಎಂದು ಮದ್ಯ ಮಾರಾಟಗಾರರ ಸಂಘವು ಪ್ರತಿಭಟನೆ ನಡೆಸಿತು. ಸಚಿವ ಆರ್‌.ಬಿ.ತಿಮ್ಮಾಪೂರ ಬೇಡಿಕೆ ಈಡೇರಿಕೆ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಚಿಲ್ಲರೆ ಮದ್ಯ ಮಾರಾಟದ ಲಾಭಾಂಶ ಹೆಚ್ಚಳ ಸೇರಿದಂತೆ ಇನ್ನಿತರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಭರವಸೆ ನೀಡಿದ್ದಾರೆ.

ಚಿಲ್ಲರೆ ಮದ್ಯ ಮಾರಾಟದ ಮೇಲೆ ಕನಿಷ್ಠ ಶೇಕಡ 20ರಷ್ಟು ಲಾಭಾಂಶ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಫೆಡರೇಷನ್‌ ಆಫ್‌ ವೈನ್‌ ಮರ್ಚಂಟ್ಸ್‌ ಅಸೋಸಿಯೇಷನ್‌ನಿಂದ ಗುರುವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಸ್ಥಳಕ್ಕೆ ಆಗಮಿಸಿದ ಸಚಿವರು ಮನವಿ ಸ್ವೀಕರಿಸಿ ಬಳಿಕ ಮಾತನಾಡಿದರು.

ಲಾಭಾಂಶ ಹೆಚ್ಚಿಸಬೇಕು ಎಂಬುದು ಸೇರಿ ಹಲವು ಬೇಡಿಕೆಗಳನ್ನು ನೀವು ಸಲ್ಲಿಸಿದ್ದೀರಿ. ಈ ಬಗ್ಗೆ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಇದಕ್ಕೆ ಸಹಮತ ವ್ಯಕ್ತಪಡಿಸಿದ ಅಸೋಸಿಯೇಷನ್‌ನವರು ಪ್ರತಿಭಟನೆ ವಾಪಸ್‌ ಪಡೆದರು.

ಇದಕ್ಕೂ ಮುನ್ನ ಮಾತನಾಡಿದ ಅಸೋಸಿಯೇಷನ್‌ ಅಧ್ಯಕ್ಷ ಎಸ್‌.ಗುರುಸ್ವಾಮಿ, ಚಿಲ್ಲರೆ ಮದ್ಯ ಮಾರಾಟದ ಮೇಲೆ ಕನಿಷ್ಠ ಶೇ.20ರಷ್ಟು ಲಾಭಾಂಶ ನೀಡಬೇಕು. ಅನಧಿಕೃತ ಮದ್ಯ ಮಾರಾಟ ತಡೆಗಟ್ಟಬೇಕು. ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. 2023ರ ಜು.10ರಂದು ಹೆಚ್ಚಳ ಮಾಡಿರುವ ಅಬಕಾರಿ ಶುಲ್ಕವನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ಮೂಲ ವೇತನ ಹೆಚ್ಚಳಕ್ಕಾಗಿ ಕೆಎಸ್ಸಾರ್ಟಿಸಿ ಸಮಿತಿ ಧರಣಿಕನ್ನಡಪ್ರಭ ವಾರ್ತೆ ಬೆಂಗಳೂರುಮೂಲ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಗುರುವಾರ ಒಂದು ದಿವಸ ಉಪವಾಸ ಸತ್ಯಾಗ್ರಹ ನಡೆಸಲಾಯಿತು.ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಎಸ್‌ಆರ್‌ಟಿಸಿ ನೌಕರರ ಮಹಾ ಮಂಡಳಿಯ ಬಿ.ಜಯದೇವರಾಜೇ ಅರಸು, 2024ರ ಜ.1ರಿಂದ ಮೂಲ ವೇತನದಲ್ಲಿ ಶೇ.25ರಷ್ಟನ್ನು ಹೆಚ್ಚಿಸಬೇಕು. 2020ರ ಜ.1ರಿಂದ 2023ರ ಫೆ.28ರವರೆಗಿನ ವೇತನ ಹೆಚ್ಚಳದ ಬಾಕಿ ಹಣವನ್ನೂ ನಿವೃತ್ತ ನೌಕರರು ಸೇರಿದಂತೆ ಎಲ್ಲರಿಗೂ ಸರ್ಕಾರ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.ಶಕ್ತಿ ಯೋಜನೆಯ ಹಣವನ್ನು ಬಾಕಿ ಉಳಿಸಿಕೊಳ್ಳದೇ ಪ್ರತೀ ತಿಂಗಳೂ ಸಾರಿಗೆ ನಿಗಮಗಳಿಗೆ ನೀಡಬೇಕು. ನಿಗಮಗಳಲ್ಲಿ ಬಾಕಿ ಇರುವ ಪಿಎಫ್‌, ಗ್ರಾಚ್ಯೂಟಿ, ರಜೆ ನಗದೀಕರಣ ಮತ್ತಿತರ ಸೌಲಭ್ಯಗಳಿಗಾಗಿ ರಾಜ್ಯ ಸರ್ಕಾರ ತಕ್ಷಣ ₹2 ಸಾವಿರ ಕೋಟಿ ಮಂಜೂರು ಮಾಡಬೇಕು. ಎಲ್ಲ ನೌಕರರಿಗೂ ಪಾಳಿ ವ್ಯವಸ್ಥೆ ಮಾಡಬೇಕು. ರಿಯಾಯಿತಿ ದರದಲ್ಲಿ ಕ್ಯಾಂಟೀನ್‌ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಒಂದು ದಿವಸ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.