ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಮಾ.೭ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ, ಪಂಗಡ ಸಮುದಾಯಗಳ ಮೇಲೆ ಉಂಟಾಗುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ಬಗ್ಗೆ ಹಾಗೂ ಅಸ್ಪೃಶ್ಯತೆ ನಿರ್ಮೂಲನೆ ಕುರಿತು ವಿಚಾರಗೋಷ್ಠಿ ಮತ್ತು ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮೀ ಹೇಳಿದರು.

ದಿವ್ಯಸಾನ್ನಿಧ್ಯವನ್ನು ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಚಿತ್ರದುರ್ಗದ ಶ್ರೀ ಶಿವಶರಣ ಮಾದರಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಸ್ವಾಮೀಜಿ, ಕಲಬುರಗಿ ಜಿಲ್ಲೆ ಕೋಡ್ಲಾದ ಶ್ರೀ ಉರಿಲಿಂಗಪೆದ್ದೀಶ್ವರ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ವಹಿಸುವರು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಉದ್ಘಾಟನೆಯನ್ನು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೆರವೇರಿಸುವರು. ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ, ಚೆಸ್ಕಾಂ ಅಧ್ಯಕ್ಷ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ರಾಜ್ಯ ಪರಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷ ಡಾ.ಮೂರ್ತಿ ಉಪಸ್ಥಿತರಿರುವರು. ಅಧ್ಯಕ್ಷತೆಯನ್ನು ಶಾಸಕ ಪಿ.ರವಿಕುಮಾರ್ ವಹಿಸುವರು. ವಿಧಾನಸಭೆ, ವಿಧಾನಪರಿಷತ್ ಶಾಸಕರು ಪಾಲ್ಗೊಳ್ಳುವರು ಎಂದರು.

ಬೆಳಗ್ಗೆ ೧೧.೩೦ ಇಂದ ೧ ಗಂಟೆಯವರೆಗೆ ದೌರ್ಜನ್ಯ ಪ್ರತಿಬಂಧ ಕಾಯ್ದೆ ಮತ್ತು ದೌರ್ಜನ್ಯ ಪ್ರಕರಣ ತಡೆಗಟ್ಟುವ ಕುರಿತು ಪೊಲೀಸ್ ಮಹಾನಿರ್ದೇಶಕ ಜೆ.ಅರುಣ್ ಚಕ್ರವರ್ತಿ, ಮಧ್ಯಾಹ್ನ ೨ ರಿಂದ ೩ರವರೆಗೆ ದೌರ್ಜನ್ಯ ಪ್ರತಿಬಂಧ ಕಾಯ್ದೆಯಡಿ ನ್ಯಾಯಾಲಯದಲ್ಲಿ ಪ್ರಕರಣ ನಡೆಸುವ ಕುರಿತು ಹಾಗೂ ಶಿಕ್ಷೆಯ ಪ್ರಮಾಣದ ಸಾಧಕ-ಬಾಧಕಗಳ ಕುರಿತು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಬಿ.ಟಿ.ವಿಶ್ವನಾಥ್, ಮಧ್ಯಾಹ್ನ ೩.೧೫ ರಿಂದ ಸಂಜೆ ೪.೩೦ರವರೆಗೆ ಅಸ್ಪೃಶ್ಯತೆ ಆಚರಣೆ ನಿರ್ಮೂಲನೆ ಬಗ್ಗೆ ವಕೀಲ ಬಾಲನ್, ಸಂಜೆ ೪.೩೦ ರಿಂದ ೫ರವರೆಗೆ ಆಧುನಿಕ ಕಾಲಘಟ್ಟದಲ್ಲಿ ಅಸ್ಪಶ್ಯತೆಯ ಸ್ವರೂಪಗಳು ಕುರಿತು ಸಾಮಾಜಿಕ ನ್ಯಾಯ ಹೋರಾಟಗಾರ ಸಿ.ಎಂ.ಕೃಷ್ಣ ವಿಚಾರ ಮಂಡನೆ ಮಾಡುವರು ಎಂದರು.


ಗೋಷ್ಠಿಯಲ್ಲಿ ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಸುಂಡಹಳ್ಳಿ ಮಂಜುನಾಥ್, ಚಂದಗಾಲು ವಿಜಯಕುಮಾರ್, ನರಸಿಂಹಮೂರ್ತಿ ಇದ್ದರು.