ಸಾರಾಂಶ
ಕನ್ನಡಪ್ರಭ ವಾರ್ತೆ ತುಮಕೂರುಮಕ್ಕಳು ತಮ್ಮ ಬಾಲ್ಯವನ್ನು ಆಟ-ಪಾಠ ಶಿಕ್ಷಣದಿಂದ ಕಳೆಯಬೇಕು. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ರೀತಿಯ ಕೆಲಸಗಳಲ್ಲಿ ತೊಡಗಿಸದೆ ಅವರಿಗೆ ಶಿಕ್ಷಣ ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ನೂರುನ್ನಿಸ ಹೇಳಿದರು.ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿಯಿಂದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದವರೆಗೂ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಮಕ್ಕಳನ್ನು ಕೆಲಸದಲ್ಲಿ ತೊಡಗಿಸಿಕೊಳ್ಳುವುದರಿಂದ ಅವರು ದೈಹಿಕವಾಗಿ ಮತ್ತು ಮಾನಸಿಕವಾಗಿ ಕುಗ್ಗಿ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಶಿಕ್ಷಣ ಮಕ್ಕಳಿಗೆ ಕೊಟ್ಟ ಸಂವಿಧಾನಬದ್ಧ ಹಕ್ಕಾಗಿರುವುದರಿಂದ ಪ್ರತಿಯೊಬ್ಬರಿಗೂ ಶಿಕ್ಷಣವನ್ನು ದೊರಕಿಸಿ ಕೊಡಬೇಕು. ಮಕ್ಕಳನ್ನು ಕೆಲಸಕ್ಕೆ ತೊಡಗಿಸಿಕೊಳ್ಳುವುದು ಕಾನೂನು ಬಾಹಿರ ಅಪರಾಧವಾಗಿದ್ದು, ಯಾರಾದರೂ ಮಕ್ಕಳನ್ನು ಕೆಲಸದಲ್ಲಿ ತೊಡಗಿಸಿದರೆ ಕಠಿಣ ಶಿಕ್ಷೆಗೆ ಗುರಿಯಾಗಲಿದ್ದಾರೆ ಎಂದು ತಿಳಿಸಿದರು.ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಮಾತನಾಡಿ, ಮಕ್ಕಳನ್ನು ಅಂಗಡಿ, ಗ್ಯಾರೇಜ್ ಸೇರಿದಂತೆ ಯಾವುದೇ ರೀತಿಯ ಕೆಲಸಗಳಲ್ಲಿ ತೊಡಗಿಸುವುದು ಅಪರಾಧವಾಗಿದ್ದು, ೧೮ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಗಳಲ್ಲಿ ತೊಡಗಿಸಬಾರದು. ಒಂದು ವೇಳೆ ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಮಾತನಾಡಿ, ಭಾರತದ ಭದ್ರ ಬುನಾದಿಗಾಗಿ ಮಕ್ಕಳಿಗೆ ಶಿಕ್ಷಣ ನೀಡಬೇಕು. ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಪ್ರತಿಯೊಂದು ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಸಮಿತಿಗಳನ್ನು ರಚಿಸಿ ಆಚರಿಸಲಾಗುತ್ತಿದೆ. ಮಕ್ಕಳನ್ನು ಕೆಲಸಗಳಲ್ಲಿ ತೊಡಗಿಸುವುದನ್ನು ತಪ್ಪಿಸಿ ಅವರಿಗೆ ಉತ್ತಮ ಶಿಕ್ಷಣ ದೊರಕಿಸಿಕೊಡುವುದು ಇದರ ಮುಖ್ಯ ಉದ್ದೇಶವಾಗಿದೆ. ಯಾರಾದರೂ ಮಕ್ಕನ್ನು ಕೆಲಸಗಳಲ್ಲಿ ತೊಡಗಿಸಿಕೊಂಡಿರುವುದು ಕಂಡುಬಂದಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆ, ನ್ಯಾಯಾಲಯ, ಕಾರ್ಮಿಕ ಇಲಾಖೆ, ಮಕ್ಕಳ ರಕ್ಷಣಾ ಘಟಕಗಳ ಗಮನಕ್ಕೆ ತಿಳಿಸಬೇಕು ಎಂದು ತಿಳಿಸಿದರು.ಕಾರ್ಮಿಕ ಅಧಿಕಾರಿ ತೇಜಾವತಿ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಎಸ್. ಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಂ.ಎಸ್. ಶ್ರೀಧರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ ಕೆ., ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿನೇಶ್ ಆರ್.ಎಂ., ಯೋಜನಾ ನಿರ್ದೇಶಕ ರವಿಕುಮಾರ್, ಕಾರ್ಮಿಕ ನಿರೀಕ್ಷಕರಾದ ವೆಂಕಟೇಶ್ ಬಾಬು, ನಾಗಭೂಷಣ್ ,ಶಾಲಾ ಮಕ್ಕಳು ಹಾಜರಿದ್ದರು.