ಶಿರಹಟ್ಟಿ: ಹಿರಿಯ ನಾಗರಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅತ್ಯಗತ್ಯ. ನಿಯಮಿತ ಆರೋಗ್ಯ ತಪಾಸಣೆ, ಸಮತೋಲನ ಆಹಾರ, ದೈಹಿಕ ಚಟುವಟಿಕೆ ಹಾಗೂ ವೈದ್ಯರ ಸಲಹೆಯಂತೆ ಔಷಧೋಪಚಾರವನ್ನು ಅನುಸರಿಸಿದರೆ ಅನೇಕ ಕಾಯಿಲೆಗಳನ್ನು ನಿಯಂತ್ರಣದಲ್ಲಿ ಇಟ್ಟು ಆರೋಗ್ಯಕರ ಜೀವನ ನಡೆಸಬಹುದು ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಅಭಿಪ್ರಾಯಪಟ್ಟರು.ಸೋಮವಾರ ಪಟ್ಟಣದ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿಯಲ್ಲಿ ₹೧೬ ಲಕ್ಷ ವೆಚ್ಚದಲ್ಲಿ ೧೬೮ ಜನ ಹಿರಿಯ ನಾಗರಿಕರಿಗೆ ೮೯೭ ಸಾಧನ ಸಲಕರಣೆ ವಿತರಿಸಿ ಮಾತನಾಡಿದರು.
ವಯೋಸಹಜವಾಗಿ ರಕ್ತದೊತ್ತಡ, ಮಧುಮೇಹ, ಹೃದಯ ಸಂಬಂಧಿ ಸಮಸ್ಯೆಗಳು, ಕೀಲು ನೋವು, ದೃಷ್ಟಿ ಹಾಗೂ ಶ್ರವಣ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಸಮೀಪದ ಆರೋಗ್ಯ ಕೇಂದ್ರದಲ್ಲಿ ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಹಿರಿಯರು ಪ್ರತಿದಿನ ಲಘು ವ್ಯಾಯಾಮ, ಯೋಗ, ಪ್ರಾಣಾಯಾಮ ಹಾಗೂ ವಾಕಿಂಗ್ ಮಾಡುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು. ಧೂಮಪಾನ, ಮದ್ಯಪಾನ ಹಾಗೂ ಇತರ ದುಶ್ಚಟಗಳಿಂದ ದೂರವಿದ್ದು, ಪೌಷ್ಟಿಕ ಆಹಾರ, ಸಾಕಷ್ಟು ನೀರು ಮತ್ತು ಸಮರ್ಪಕ ನಿದ್ರೆಗೆ ಆದ್ಯತೆ ನೀಡಬೇಕು ಎಂದರು.ಹಿರಿಯ ನಾಗರಿಕರ ಆರೋಗ್ಯವೇ ಕುಟುಂಬ ಹಾಗೂ ಸಮಾಜದ ಅಮೂಲ್ಯ ಸಂಪತ್ತು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ನಿಯಮಿತ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ನೆಮ್ಮದಿಯ, ಗುಣಮಟ್ಟದ ಜೀವನ ನಡೆಸಬಹುದು ಎಂದರು.ತಹಸೀಲ್ದಾರ್ ಕೆ. ರಾಘವೇಂದ್ರ ರಾವ್, ತಾಪಂ ಇಒ ರಾಮಪ್ಪ ದೊಡ್ಡಮನಿ, ಸಿಡಿಪಿಒ ಮೃತ್ತುಂಜಯ ಗುಡ್ಡದಾನವೇರಿ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಶ್ರೀದೇವಿ, ತಾಲೂಕು ಅಂಗವಿಕಲ ಕಲ್ಯಾಣಾಧಿಕಾರಿ ಭಾರತೀ ಮೂರಶಿಳ್ಳಿ ಸೇರಿ ಇತರರು ಇದ್ದರು.