ವಯಸ್ಸು ಮರೆತು ಹಾಡಿ ಕುಣಿದ ಹಿರಿಯ ನಾಗರಿಕರು!

| Published : Sep 17 2025, 01:08 AM IST

ಸಾರಾಂಶ

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಮಂಗಳವಾರ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗಾಗಿ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. 60 ವರ್ಷ ಮೇಲ್ಪಟ್ಟ ಹಿರಿಯರು ತಮ್ಮ ವಯಸ್ಸನ್ನು ಮರೆತು ಕ್ರೀಡಾಚಟವಟಿಕೆಗಳಲ್ಲಿ ಭಾಗವಹಿಸಿ ತಮ್ಮ ಜೀವನೋತ್ಸಾಹವನ್ನು ತೋರ್ಪಡಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಮಂಗಳವಾರ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗಾಗಿ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. 60 ವರ್ಷ ಮೇಲ್ಪಟ್ಟ ಹಿರಿಯರು ತಮ್ಮ ವಯಸ್ಸನ್ನು ಮರೆತು ಕ್ರೀಡಾಚಟವಟಿಕೆಗಳಲ್ಲಿ ಭಾಗವಹಿಸಿ ತಮ್ಮ ಜೀವನೋತ್ಸಾಹವನ್ನು ತೋರ್ಪಡಿಸಿದರು.ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ ಸ್ಪರ್ಧೆ ಹಾಗೂ ಬಕೆಟ್‌ಗೆ ಬಾಲ್ ಎಸೆಯುವ ಸ್ಪರ್ಧೆ, ಗಾಯನ ಹಾಗೂ ಏಕಪಾತ್ರಾಭಿನಯ ಸ್ಪರ್ಧೆಗಳಲ್ಲಿ ಮನಃಪೂರ್ತಿ ಭಾಗವಹಿಸಿದ ಹಿರಿಯರು, ತಾವು ಸಂತಸ ಪಟ್ಟರು, ನೋಡುವವರನ್ನೂ ಸಂತಸಗೊಳಿಸಿದರು.ಈ ಸ್ಪರ್ಧೆಗಳನ್ನು ಬಕೆಟಿಗೆ ಚೆಂಡು ಹಾಕುವ ಮೂಲಕ ಉದ್ಘಾಟಿಸಿದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ. ಹಿರಿಯರು ನಿವೃತ್ತಿಯ ನಂತರ ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಇತರ ನಿವೃತ್ತರ ಪರಿಚಯದ ಜೊತೆಗೆ ಹೆಚ್ಚು ಕ್ರಿಯಾಶೀಲತೆಯಿಂದ ಬದುಕುವುದಕ್ಕೆ ಸಾಧ್ಯವಿದೆ ಎಂದರು.ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ, ರೆಡ್‌ಕ್ರಾಸ್ ಸದಸ್ಯ ಕಾರ್ಯದರ್ಶಿ ಗಣನಾಥ ಶೆಟ್ಟಿ ಎಕ್ಕಾರು, ಜಿಲ್ಲಾ ಹಿರಿಯ ನಾಗರಿಕರ ಒಕ್ಕೂಟದ ಅಧ್ಯಕ್ಷ ಎಚ್. ವಿಶ್ವನಾಥ್ ಹೆಗ್ಡೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಎಂ.ನಿರಂಜನ ಭಟ್, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಅಧ್ಯಕ್ಷೆ ವಾಸಂತಿ ಕೊರಡ್ಕಲ್, ತಾಲೂಕು ಹಿರಿಯ ನಾಗರಿಕರ ವೇದಿಕೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಹಿರಿಯ ನಾಗರಿಕರು ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ವಿಶೇಷ ಶಿಕ್ಷಕರ ಸಂಘದ ಅಧ್ಯಕ್ಷ ಎಚ್. ರವೀಂದ್ರ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.