ಸಾರಾಂಶ
ಜಿಲ್ಲೆಯ ಎಲ್ಲ ಬಸ್ ನಿಲ್ದಾಣಗಳಲ್ಲಿ ತಂಬಾಕು ಮಾರಾಟ ನಿಷೇಧಿಸುವುದು ಹಾಗೂ ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳನ್ನು ತಂಬಾಕು ಮುಕ್ತ ವಲಯಗಳೆಂದು ಘೋಷಿಸಲು ಕ್ರಮ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಪರವಾನಗಿಯನ್ನು ಸರ್ಕಾರದ ಮಾರ್ಗಸೂಚಿ ಅನ್ವಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಡ್ಡಾಯವಾಗಿ ಪರವಾನಗಿ ಪಡೆಯಬೇಕು. ಪರವಾನಗಿ ಪಡೆಯದವರಿಗೆ ಕ್ರಮ ಕೈಗೊಳ್ಳಲು ನಗರಸಭೆ, ಪುರಸಭೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ಎಲ್ಲ ಬಸ್ ನಿಲ್ದಾಣಗಳಲ್ಲಿ ತಂಬಾಕು ಮಾರಾಟ ನಿಷೇಧಿಸುವುದು ಹಾಗೂ ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳನ್ನು ತಂಬಾಕು ಮುಕ್ತ ವಲಯಗಳೆಂದು ಘೋಷಿಸಲು ಕ್ರಮಕೈಗೊಳ್ಳಲು ತಿಳಿಸಿದರು.
ತಂಬಾಕು ಮುಕ್ತ ಯುವ ಅಭಿಯಾನವು ಅ.9ರಿಂದ ಆರಂಭವಾಗಿದ್ದು ನ.30ರವರೆಗೆ ನಡೆಯಲಿದೆ. ಈ ಅಭಿಯಾನವನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಯಶಸ್ವಿಯಾಗಿ ನಡೆಸಿ, ಕೋಟ್ಪಾ 2003ರ ಅಧಿನಿಯಮದ 2024ರ ತಿದ್ದುಪಡಿ ಅನುಸಾರ ದಂಡ ವಿಧಿಸುವುದು. 16 ತನಿಖಾ ದಳದ ಕಾರ್ಯಾಚರಣೆ, 400 ತಂಬಾಕು ಮುಕ್ತ ಶಾಲೆ, ಕಾಲೇಜು ಹಾಗೂ 30 ತಂಬಾಕು ಮುಕ್ತ ಗ್ರಾಮಗಳನ್ನಾಗಿ ಮಾಡಲು ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳನ್ನು 100 ಮೀ. ತಂಬಾಕು ಮಾರಾಟ ಮಾಡದಂತೆ ನೋಡಿಕೊಳಬೇಕು. ಮಕ್ಕಳಿಗೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಲು ಶಿಕ್ಷಣ ಇಲಾಖೆಯವರಿಗೆ ತಿಳಿಸಿದರು. ಜಿಲ್ಲೆಯ ಬಾರ ಅಂಗಡಿಗಳಲ್ಲಿ ಧೂಮಪಾನ ನಿಷೇಧಿಸುವುದು ಹಾಗೂ ಕೋಟ್ಪಾ ಕಾಯ್ದೆಯ ನಾಮಫಲಕ ಪ್ರದರ್ಶನ ಮಾಡಬೇಕು. ತಂಬಾಕು ಮುಕ್ತ ಕಾರ್ಯಕ್ರಮಗಳನ್ನು ಕೇವಲ ಆಚರಣೆಯ ಮಟ್ಟಕ್ಕೆ ಸೀಮಿತಗೊಳಿಸದೆ, ಅವುಗಳಿಂದ ನೈಜ ಫಲಿತಾಂಶ ಬರುವಂತಿರಬೇಕು. ಶಾಲೆ, ಕಾಲೇಜುಗಳಲ್ಲಿ ಮಾತ್ರವಲ್ಲದೆ ಬಸ್ ನಿಲ್ದಾಣಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ವಿರೋಧಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದಲ್ಲಿ ಹೆಚ್ಚು ಪರಿಣಾಮಕಾರಿ ಆಗುತ್ತದೆ ಎಂದು ತಿಳಿಸಿದರು.ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾಂತೇಶ್ವರ ಜಿಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಂಜುನಾಥ ಡಿ.ಎನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ದಯಾನಂದ ಕರೆನ್ನವರ, ನಗರಸಭೆ ಆಯುಕ್ತ ಮಾರುತಿ ವಿ.ಎನ್, ಜಿಲ್ಲಾ ತಂಬಾಕು ಸಲಹೆಗಾರರಾದ ಶಶಿಕಾಂತ ಕುಮಠಳ್ಳಿ ಸೇರಿದಂತೆ ತಾಲೂಕು ದಂಡಾಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))