ಬೀದಿ ವ್ಯಾಪಾರಿಗಳ ಅನುಕೂಲಕ್ಕಾಗಿ ಶೀಘ್ರದಲ್ಲಿ ಬೀದಿ ವ್ಯಾಪಾರಿಗಳ ವಲಯ ಗುರುತಿಸಿ ವ್ಯಾಪಾರಕ್ಕೆ ಅನುವು ಮಾಡಿಕೊಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

 ಬೆಂಗಳೂರು : ಬೀದಿ ವ್ಯಾಪಾರಿಗಳ ಅನುಕೂಲಕ್ಕಾಗಿ ಶೀಘ್ರದಲ್ಲಿ ಬೀದಿ ವ್ಯಾಪಾರಿಗಳ ವಲಯ ಗುರುತಿಸಿ ವ್ಯಾಪಾರಕ್ಕೆ ಅನುವು ಮಾಡಿಕೊಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ವ್ಯಾಪಾರಿಗಳ ಸಮೀಕ್ಷೆ ಹಾಗೂ ಮಾರಾಟ ವಲಯ ಗುರುತಿಸುವ ಸಂಬಂಧ ಸೋಮವಾರ ಸಭೆ ನಡೆಸಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ವ್ಯಾಪಾರಿಗಳ ಸಮೀಕ್ಷೆಗಾಗಿ ಈಗಾಗಲೇ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ಬಿಡುಗಡೆ ಮಾಡಲಾಗಿದೆ. ಅದರಂತೆ ಆಯಾ ವಲಯಗಳಲ್ಲಿ ಬೀದಿ ವ್ಯಾಪಾರಿಗಳ ವ್ಯಾಪಾರ ವಲಯಗಳನ್ನು ಗುರುತಿಸಬೇಕು. ನಗರದಲ್ಲಿ ಎಷ್ಟು ಮಂದಿ ಬೀದಿ ವ್ಯಾಪಾರಿಗಳಿದ್ದಾರೆ ಎಂಬ ನಿಖರ ಮಾಹಿತಿ ಪಡೆಯುವುದಕ್ಕಾಗಿ ಬೀದಿ ವ್ಯಾಪಾರಿಗಳ ಸಮೀಕ್ಷೆ ಮಾಡಬೇಕಿದೆ. ನಿಗದಿತ ಸಮಯದಲ್ಲಿ ಬೀದಿ ವ್ಯಾಪಾರಿಗಳ ಸಮೀಕ್ಷೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್‌ ವಿಕಾಸ್‌ ಕಿಶೋರ್‌ ಮಾತನಾಡಿ, ಆಯಾ ವಲಯದ ಜನಸಂಖ್ಯೆಗನುಗುಣವಾಗಿ ಮಾರಾಟ ವಲಯ ಗುರುತಿಸಲಾಗುವುದು. ಬೀದಿ ವ್ಯಾಪಾರಿಗಳ ಸಮೀಕ್ಷೆಗಾಗಿ ವೆಬ್‌ ಅಪ್ಲಿಕೇಷನ್‌ ಹಾಗೂ ಮೊಬೈಲ್‌ ಅಪ್ಲಿಕೇಷನ್‌ ಸಿದ್ಧಪಡಿಸಲಾಗಿದೆ. ಅದರ ಮೂಲಕ ಜಿಯೋ ಟ್ಯಾಗಿಂಗ್‌ ಮಾಡಿ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಹೇಳಿದರು.