ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಮಕ್ಕಳ ಭವಿಷ್ಯ ರೂಪಿಸುವಲ್ಲಿ ಅಂಗನಾಡಿ ಕಾರ್ಯಕರ್ತೆಯರ ಪಾತ್ರ ಅಪಾರವಾಗಿದ್ದು, ಅವರ ಸೇವೆ ಶ್ಲಾಘನೀಯ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.ಜಿಲ್ಲಾಡಳಿತ, ಜಿಪಂ, ಶಿವಮೊಗ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೋಷಣ್ ಅಭಿಯಾನ ಯೋಜನೆ ಅಡಿ ಶಿಶು ಅಭಿವೃದ್ಧಿ ಇಲಾಖೆ ಸಭಾಂಗಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಣೆ ಮಾಡಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪೋಷಣ್ ಅಭಿಯಾನದ ಮೂಲಕ ಗರ್ಭಿಣಿಯರು ಮತ್ತು ಮಕ್ಕಳಿಗೆ ಅಪೌಷ್ಠಿಕತೆ ನಿವಾರಣೆಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ವಿಶೇಷ ಯೋಜನೆ ರೂಪಿಸಿದ್ದು ಅಂಗನವಾಡಿ ಕೇಂದ್ರಗಳ ಮೂಲಕ ಮಹಿಳೆಯರು, ಮಕ್ಕಳು, ಗರ್ಭಿಣಿಯರಲ್ಲಿ ಅಪೌಷ್ಠಿಕತೆ ನಿವಾರಣೆಯೊಂದಿಗೆ ಅವರ ಬೆಳವಣಿಗೆಗಾಗಿ ಸಾಕಷ್ಟು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
ಕೇಂದ್ರ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಿಸುವ ಮೂಲಕ ಅವರ ಕಾರ್ಯಕ್ಷಮತೆ ಕಡಿಮೆಗೊಳ್ಳಿಸಿ ಹೊಸ ತಂತ್ರಜ್ಞಾನಗಳಿಗೆ ಹೊಂದಿಕೊಂಡು ಇನ್ನೂ ಹೆಚ್ಚಿನ ಸೇವೆ ಸಲ್ಲಿಸಲು ಸಹಕಾರಿಯಾಗಿದೆ. ಮೊಬೈಲ್ಗಳನ್ನು ಸದುಪಯೋಗ ಪಡಿಸಿಕೊಂಡು ಇನ್ನೂ ಉತ್ತಮ ಕಾರ್ಯ ಮಾಡಬೇಕು ಎಂದರು.ಅಂಗನವಾಡಿ ಕಾರ್ಯಕರ್ತೆಯರು ಎಂದರೆ ನಮ್ಮ ಸಮಾಜದಲ್ಲಿ ಗೌರವಯುತ ಸ್ಥಾನದಲ್ಲಿ ಗುರುತಿಸುತ್ತಾರೆ. ಕರೋನದ ಸಂದರ್ಭದಲ್ಲಿ ಜೀವದ ಹಂಗೂ ತೊರೆದು ಸೇವೆ ಸಲ್ಲಿಸಿದ್ದಾರೆ. ಪ್ರತಿದಿನ ಮಹಿಳೆಯರ, ಮಕ್ಕಳ ಆರೋಗ್ಯ ರಕ್ಷಣೆ ಕೆಲಸ ಮಾಡುತ್ತಿರುವ ನಿಮ್ಮೆಲ್ಲರ ಆರೋಗ್ಯ ಉತ್ತಮವಾಗಿರಬೇಕು ಎಂದರು.
ಶಿವಮೊಗ್ಗ ನಗರ ಪ್ರದೇಶದಲ್ಲಿ ಈಗಾಗಲೇ ಅನೇಕ ಅಂಗನವಾಡಿ ಕೇಂದ್ರಗಳನ್ನು ಸ್ವಂತ ಕಟ್ಟಡದಲ್ಲಿ ನಡೆಸಲಾಗುತ್ತಿದ್ದು, ಜಾಗವಿದ್ದು ಸ್ವಂತ ಕಟ್ಟಡ ಇಲ್ಲದೇ ಇರುವ ಅಂಗನವಾಡಿ ಕೇಂದ್ರಗಳ ಮಾಹಿತಿ ನೀಡಿದ ಕೂಡಲೇ ಸರ್ಕಾರದ ಗಮನಕ್ಕೆ ತಂದು ಹೊಸ ಕಟ್ಟಡ ನಿರ್ಮಾಣ ಮಾಡಲು ಹಣ ನೀಡುವುದಾಗಿ ತಿಳಿಸಿದರು.ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಗಬೇಕಾದ ನ್ಯಾಯ ಒದಗಿಸಲು ನಾವು ಎಂದಿಗೂ ನಿಮ್ಮ ಜೊತೆಯಲ್ಲಿ ಇರುತ್ತೇವೆ. ನಿಮ್ಮ ಯಾವುದೇ ಬೇಡಿಕೆಗಳಿಗೆ ನಾವು ಸ್ಪಂದಿಸುತ್ತೇವೆ ನೀವು ಮಾಡುವ ಸೇವೆಗೆ ತಕ್ಕ ಪ್ರತಿಫಲ ಸಿಗಬೇಕಾಗಿದೆ ಈ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಚರ್ಚಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಸಿಡಿಪಿಓ ಬಿ.ಎಚ್ ಕೃಷ್ಣಪ್ಪ ಮಾತನಾಡಿ, ಶಾಸಕರು ನಮ್ಮ ಇಲಾಖೆಯೊಂದಿಗೆ ಸದಾ ಜೊತೆಯಾಗಿದ್ದು ಮಹಾನಗರ ಪಾಲಿಕೆಯಿಂದ 20ಕ್ಕೂ ಹೆಚ್ಚು ಅಂಗನವಾಡಿ ಸ್ವಂತ ಕಟ್ಟಡ ಒದಗಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ ಎಂದರು.ಶಿವಮೊಗ್ಗ ನಗರದ 163 ಅಂಗನವಾಡಿ ಕೇಂದ್ರಗಳಿಗೆ ಮೊಬೈಲ್ ವಿತರಸಲಾಗಿದೆ. ಈ ಮೂಲಕ ಪ್ರತಿ ನಿತ್ಯ ಹಾಜರಾತಿ, ಇಲಾಖೆ ವಿವಿಧ ಕೆಲಸ ತ್ವರಿತವಾಗಿ ಹಾಗೂ ಪರಿಣಾಮಕಾರಿಯಾಗಿ ಪಾರದರ್ಶಕವಾಗಿ ಸೇವೆ ಸಲ್ಲಿಸಲು ಸಹಕಾರ ಆಗಿದೆ ಎಂದರು.
ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಅಧಿಕಾರಿ ಗಂಗಾಬಾಯಿ, ಅಂಗನವಾಡಿ ಕಾರ್ಯಕರ್ತೆರು ಇಲಾಖೆ ಸಿಬ್ಬಂದಿ ಇದ್ದರು.