ಸರ್ಕಾರ ಕೈಗೊಳ್ಳುವ ನೂರಾರು ಯೋಜನೆಗಳಂತೆಯೇ ಶ್ರೀ ಕ್ಷೇತ್ರ ಧರ್ಮಸ್ಥಳವೂ ಸಹ ಸಮಾಜಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ

ಕನ್ನಡಪ್ರಭ ವಾರ್ತೆ ತುರುವೇಕೆರೆ

ಸರ್ಕಾರ ಕೈಗೊಳ್ಳುವ ನೂರಾರು ಯೋಜನೆಗಳಂತೆಯೇ ಶ್ರೀ ಕ್ಷೇತ್ರ ಧರ್ಮಸ್ಥಳವೂ ಸಹ ಸಮಾಜಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರೂ, ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷರೂ ಮತ್ತು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷರಾದ ಮುರುಳೀಧರ್ ಹಾಲಪ್ಪ ಹೇಳಿದರು.

ಪಟ್ಟಣದ ಶ್ರೀ ವಿವೇಕಾನಂದ ಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ಹಾಲಪ್ಪ ಪ್ರತಿಷ್ಠಾನ ಮತ್ತು ವೀರೇಂದ್ರ ಹೆಗಡೆಯವರ ಅಭಿಮಾನಿಗಳ ಬಳಗದ ವತಿಯಿಂದ ಆಚರಿಸಿದ ಹೆಗಡೆಯವರ ೭೬ ನೇ ವರ್ಷದ ಜನ್ಮದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯು ಅನೇಕ ಜನೋಪಕಾರಿ ಯೋಜನೆಗಳನ್ನು ಕೈಗೊಳ್ಳುವ ಮೂಲಕ ಜನರ ಸ್ವಾವಲಂಬಿ ಬದುಕಿಗೆ ಜೀವನಾಡಿಯಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಮೀಣಾಭಿವೃದ್ದಿ ಸಂಸ್ಥೆಯು ಸಾಮಾಜಿಕ ಬದಲಾವಣೆಗೆ ಶ್ರಮಿಸುತ್ತಿದೆ. ಅನೇಕಾನೇಕ ಜನಪರ ಯೋಜನೆಗಳನ್ನು ಹಮ್ಮಿಕೊಳ್ಳುವ ಮೂಲಕ ಉತ್ತಮ ಕಾರ್ಯ ನಿರ್ವಹಿಸುತ್ತಿದೆ ಎಂದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್.ಆರ್. ಜಯರಾಮ್ ಮಾತನಾಡಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ದೇವಾಲಯಗಳ ಪುನಶ್ಚೇತನ, ಕೆರೆ ಕಟ್ಟೆಗಳ ನಿರ್ಮಾಣ, ಮದ್ಯವರ್ಜನ ಶಿಬಿರ ಸೇರಿದಂತೆ ಕೃಷಿ, ವಸತಿ ಸೇರಿದಂತೆ ಹತ್ತಾರು ಯೋಜನೆಗಳನ್ನು ಮಾಡುತ್ತಿರುವುದು ಶ್ಲಾಘನೀಯ. ಆದರೆ ಕೆಲವು ಕಾಣದ ಕೈಗಳು ಈ ಕ್ಷೇತ್ರದ ಬಗ್ಗೆ ಇಲ್ಲಸಲ್ಲದ ಅಪವಾದಗಳನ್ನು ಹೊರಿಸುತ್ತಿರುವುದು ಖಂಡನೀಯ ಎಂದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆಗೈದ ತಾಲೂಕಿನ ರಾಮಕೃಷ್ಣಯ್ಯ, ಗಂಗಾಧರ ದೇವರಮನೆ, ಲೈಬ್ರರಿ ರಾಮಚಂದ್ರು, ಡಾ.ಚಂದ್ರಯ್ಯ, ಪತ್ರಕರ್ತ ಸಚ್ಚಿನ್ ಮಾಯಸಂದ್ರ ಹಾಗೂ ಮಮತ ಚಂದ್ರಕೀರ್ತಿ ಅವರುಗಳನ್ನು ಸನ್ಮಾನಿಸಲಾಯಿತು ಹಾಗೂ ಅಸಹಾಯಕರಿಗೆ ಉಲ್ಲನ್ ಹೊದಿಕೆಗಳನ್ನು ವಿತರಿಸಲಾಯಿತು. ಅಣಪನಹಳ್ಳಿಯ ಶ್ರೀ ಸೋಮಶೇಖರ ಸ್ವಾಮೀಜಿ ಆಶೀರ್ವಚನ ನೀಡಿದರು. ಡಾ.ವೀರೇಂದ್ರ ಹೆಗ್ಗಡೆ ಅಭಿಮಾನಿ ಬಳಗದ ಅಧ್ಯಕ್ಷ ಸಿ.ಎಸ್.ಕಾಂತರಾಜೇ ಅರಸ್, ಬ್ರಾಹ್ಮಣ ಸಮಾಜದ ಅಧ್ಯಕ್ಷ ಆರ್.ಸತ್ಯನಾರಾಯಣ್, ಕಲಾವಿದರ ಸಂಘದ ಅಧ್ಯಕ್ಷ ಹಾಗೂ ಸಮಾಜ ಸೇವಕ ಅಮಾನಿಕೆರೆ ಮಂಜಣ್ಣ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಶಾಲಿನಿ, ಇನ್ನರ್ ವೀಲ್ ಅಧ್ಯಕ್ಷೆ ಇಂದಿರಾಪ್ರಭಾಕರ್, ಪ್ರಾಂಶುಪಾಲ ರಾಜು, ಚಂದ್ರಕೀರ್ತಿ, ಡಾ.ಚಂದ್ರಯ್ಯ, ವಿಶ್ವಾರಾಧ್ಯ, ಮಂಜೇಶ್ ಗುಪ್ತಾ, ಪುಟ್ಟರಾಜು ಸೇರಿದಂತೆ ಇತರರು ಇದ್ದರು.