ಭಾರತವು ವಿವಿಧತೆಯಲ್ಲಿ ಏಕತೆಯನ್ನು ಸಾರುವ ಮಹಾನ್ ರಾಷ್ಟ್ರವಾಗಿದ್ದರೂ, ಇತ್ತೀಚಿನ ದಿನಗಳಲ್ಲಿ ರಾಜ್ಯಗಳ ನಡುವೆ ಗಡಿ ಹಾಗೂ ಜಲ ವಿವಾದಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ಸಮಸ್ಯೆಗಳಿಗೆ ರಾಜಕೀಯ ಸ್ವಾರ್ಥವನ್ನು ಬದಿಗೊತ್ತಿ ಸಂವಿಧಾನಾತ್ಮಕ ಮೌಲ್ಯಗಳ ನೆಲೆಯಲ್ಲಿ ಪರಿಹಾರ ಕಂಡುಕೊಳ್ಳಬೇಕಾದ ಹೊಣೆಗಾರಿಕೆ ರಾಜಕೀಯ ನಾಯಕರು ಹಾಗೂ ಜನಪ್ರತಿನಿಧಿಗಳ ಮೇಲಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು. ಸಂವಿಧಾನವು ದೇಶದ ಶಕ್ತಿಯಾಗಿದ್ದು, ಅದನ್ನು ಗೌರವಿಸುವ ಮೂಲಕ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠವಾಗುತ್ತದೆ ಎಂದು ಹೇಳಿದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ಭಾರತವು ವಿವಿಧತೆಯಲ್ಲಿ ಏಕತೆಯನ್ನು ಸಾರುವ ಮಹಾನ್ ರಾಷ್ಟ್ರವಾಗಿದ್ದರೂ, ಇತ್ತೀಚಿನ ದಿನಗಳಲ್ಲಿ ರಾಜ್ಯಗಳ ನಡುವೆ ಗಡಿ ಹಾಗೂ ಜಲ ವಿವಾದಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ಸಮಸ್ಯೆಗಳಿಗೆ ರಾಜಕೀಯ ಸ್ವಾರ್ಥವನ್ನು ಬದಿಗೊತ್ತಿ ಸಂವಿಧಾನಾತ್ಮಕ ಮೌಲ್ಯಗಳ ನೆಲೆಯಲ್ಲಿ ಪರಿಹಾರ ಕಂಡುಕೊಳ್ಳಬೇಕಾದ ಹೊಣೆಗಾರಿಕೆ ರಾಜಕೀಯ ನಾಯಕರು ಹಾಗೂ ಜನಪ್ರತಿನಿಧಿಗಳ ಮೇಲಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು.ನಗರದ ಜೇನುಕಲ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗವನ್ನು ನೆನಪಿಸಿಕೊಂಡು, ದೇಶದ ಏಕತೆ ಮತ್ತು ಅಖಂಡತೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು. ಸಂವಿಧಾನವು ದೇಶದ ಶಕ್ತಿಯಾಗಿದ್ದು, ಅದನ್ನು ಗೌರವಿಸುವ ಮೂಲಕ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠವಾಗುತ್ತದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮಾತನಾಡಿದ ತಹಸೀಲ್ದಾರ್ ಸಂತೋಷ್ ಕುಮಾರ್, “ಸರ್ವರಿಗೂ ಸಮಾನ ನ್ಯಾಯ” ಎಂಬ ಆಶಯವೇ ಭಾರತೀಯ ಸಂವಿಧಾನದ ಮೂಲ ತತ್ವವಾಗಿದೆ. ಸಮಾಜದ ಪ್ರತಿಯೊಬ್ಬ ವರ್ಗಕ್ಕೂ ಸಾಮಾಜಿಕ ನ್ಯಾಯ ಒದಗಿಸುವ ಸಾಮರ್ಥ್ಯ ನಮ್ಮ ಸಂವಿಧಾನಕ್ಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಕಾರ್ಯಕ್ರಮದ ಅಂಗವಾಗಿ ಇತ್ತೀಚೆಗೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಾದ ತಾಲೂಕು ಕಾರ್ಯನಿರತ ಪತ್ರಕರ್ತರ ತಂಡಕ್ಕೆ ಶಾಸಕ ಶಿವಲಿಂಗೇಗೌಡ ಬಹುಮಾನ ವಿತರಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಗೋಪಿನಾಥ್, ತಾಲೂಕು ಪಂಚಾಯಿತಿ ಸಿಇಒ ಗಂಗಣ್ಣ, ನಗರಸಭೆ ಪೌರಾಯುಕ್ತ ಕೃಷ್ಣಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.