ಫೆ.13ರಿಂದ ಸೂರಗೊಂಡನಕೊಪ್ಪದಲ್ಲಿ ಸೇವಾಲಾಲ್ ಜಯಂತಿ: ರುದ್ರಪ್ಪ ಲಮಾಣಿ

| Published : Jan 30 2024, 02:01 AM IST

ಫೆ.13ರಿಂದ ಸೂರಗೊಂಡನಕೊಪ್ಪದಲ್ಲಿ ಸೇವಾಲಾಲ್ ಜಯಂತಿ: ರುದ್ರಪ್ಪ ಲಮಾಣಿ
Share this Article
  • FB
  • TW
  • Linkdin
  • Email

ಸಾರಾಂಶ

ಸಂತ ಸೇವಾಲಾಲ್ ಮಹಾರಾಜರು ಹುಟ್ಟಿದ ಕ್ಷೇತ್ರ ಸೂರಗೊಂಡನಕೊಪ್ಪದಲ್ಲಿ ರಾಜ್ಯಮಟ್ಟದ ಜಯಂತಿ ಕಾರ್ಯಕ್ರಮವನ್ನು ರಾಜ್ಯ ತಾಂಡ ಅಭಿವೃದ್ಧಿ ನಿಗಮ, ಸಂತ ಸೇವಾಲಾಲ್ ಕ್ಷೇತ್ರಾಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಠಾನದ ಸಹಯೋಗದಲ್ಲಿ ಜಯಂತಿಯನ್ನು 3 ದಿನ ಕಾಲ ಆಚರಿಸಲಾಗುತ್ತದೆ.

ಕನ್ನಡಪ್ರಭ ವಾರ್ತೆ ದಾವಣಗೆರೆ

ಸಂತ ಸೇವಾಲಾಲ್ ಮಹಾರಾಜರು ಹುಟ್ಟಿದ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಸಂತ ಸೇವಾಲಾಲ್ ಮಹಾರಾಜರ 285 ನೇ ಜಯಂತಿ ಫೆ. 13, 14 ಹಾಗೂ 15 ರಂದು ನಡೆಯಲಿದ್ದು ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳ ಕೈಗೊಳ್ಳುವಂತೆ ಉಪ ಸಭಾಧ್ಯಕ್ಷ, ಸಂತ ಸೇವಾಲಾಲ್ ಮಹಾಮಠ ಸಮಿತಿ ಅಧ್ಯಕ್ಷ ರುದ್ರಪ್ಪ ಲಮಾಣಿ ತಿಳಿಸಿದರು.

ಸೂರಗೊಂಡನಕೊಪ್ಪ ಮಹಾಮಠದಲ್ಲಿ ಸೋಮವಾರ ನಡೆದ ಸೇವಾಲಾಲ್ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂತ ಸೇವಾಲಾಲ್ ಮಹಾರಾಜರು ಹುಟ್ಟಿದ ಕ್ಷೇತ್ರ ಸೂರಗೊಂಡನಕೊಪ್ಪದಲ್ಲಿ ರಾಜ್ಯಮಟ್ಟದ ಜಯಂತಿ ಕಾರ್ಯಕ್ರಮವನ್ನು ರಾಜ್ಯ ತಾಂಡ ಅಭಿವೃದ್ಧಿ ನಿಗಮ, ಸಂತ ಸೇವಾಲಾಲ್ ಕ್ಷೇತ್ರಾಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಠಾನದ ಸಹಯೋಗದಲ್ಲಿ ಜಯಂತಿಯನ್ನು 3 ದಿನ ಕಾಲ ಆಚರಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ಇತರೆ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಭಕ್ತರು ಆಗಮಿಸಲಿದ್ದು ಶ್ವೇತವಸ್ತ್ರ ಮಾಲಾಧಾರಿಗಳು ಭಾಗವಹಿಸಲಿದ್ದು 3 ಲಕ್ಷಕ್ಕೂ ಹೆಚ್ಚು ಭಕ್ತರು ಈ ಜಾತ್ರಾ ಮಹೋತ್ಸವದಲ್ಲ್ಲಿ ಭಾಗವಹಿಸುವರು ಎಂದರು.

ಫೆ.14ರಂದು ಸಿಎಂ, ಡಿಸಿಎಂ ಭಾಗಿ:

ಆರೋಗ್ಯ ಕಾಪಾಡುವ ದೃಷ್ಟಿಯಿಂದ ಆರೋಗ್ಯ ಘಟಕಗಳ ಸ್ಥಾಪನೆ, ಸೂಕ್ತ ಬಂದೋಬಸ್ತ್ ವ್ಯವಸ್ಥೆ ಹಾಗೂ ಇನ್ನಿತರೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿಸಲು ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಸಮಿತಿಗಳ ರಚಿಸಲಾಗಿದ್ದು ಎಲ್ಲರೂ ಅಚ್ಚುಕ್ಟಾಗಿ ಕೆಲಸ ಮಾಡಬೇಕೆಂದ ಅವರು, ಫೆ.14ರಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಶಾಸಕ ಡಿ.ಜಿ.ಶಾಂತನಗೌಡ, ಕೆ.ಎಂ.ಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಜಿಪಂ ಸಿಇಓ ಸುರೇಶ್ ಇಟ್ನಾಳ್, ತಾಂಡ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ ನಾಯ್ಕ್, ಸಮಿತಿ ಕಾರ್ಯದರ್ಶಿ ಅರುಣ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ನಾಗರಾಜ ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲಭೂತ ಸೌಕರ್ಯ ಕಲ್ಪಿಸಿ: ಲಮಾಣಿ

ಸಂತ ಸೇವಾಲಾಲ್ 285ನೇ ಜಯಂತಿಗೆ ಲಕ್ಷಾಂತರ ಭಕ್ತರು ಭಾಗವಹಿಸುವುದರಿಂದ ಇಲ್ಲಿ ಮೂಲಭೂತ ಸೌಕರ್ಯಗಳ ಕಲ್ಪಿಸಬೇಕಾಗಿದೆ. ಆಗಮಿಸುವ ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ, ವಾಹನ ನಿಲುಗಡೆ, ಸುಗಮ ಸಂಚಾರ, ಆರೋಗ್ಯ ಮತ್ತು ನೈರ್ಮಲ್ಯತೆ ಕಾಪಾಡುವುದು, ವೇದಿಕೆ ನಿರ್ಮಾಣ, ಆಸನದ ವ್ಯವಸ್ಥೆ, ಪ್ರಸಾದ ವ್ಯವಸ್ಥೆ ಸೇರಿ ಸ್ನಾನ ಮತ್ತು ಶೌಚಾಲಯದ ವ್ಯವಸ್ಥೆ ಅಚ್ಚುಕಟ್ಟಾಗಿ ನೆರವೇರಿಸಬೇಕಿದೆ ಎಂದು ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.