ಬಿಜೆಪಿಗೆ ಮರಳವಂತೆ ಕರೆ ಬರುತ್ತಿದೆ: ಲಕ್ಷ್ಮಣ ಸವದಿ

| Published : Jan 27 2024, 01:15 AM IST

ಸಾರಾಂಶ

ಬಿಜೆಪಿಯ ಯಾವುದೇ ಒತ್ತಡಕ್ಕೆ ಒಳಗಾಗಿ ನಾನು ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ. ಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರಿಗೆ ನಮ್ಮ ಅವಶ್ಯಕತೆ ಮತ್ತು ಅನಿವಾರ್ಯತೆ ಇರುವುದರಿಂದ ಅವರು ನಮ್ಮನ್ನು ಪಕ್ಷಕ್ಕೆ ಕರೆಯುತ್ತಿದ್ದಾರೆ. ಆದರೆ ನಾನು ಕಾಂಗ್ರೆಸ್ ಪಕ್ಷವನ್ನು ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದರು.

- ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಬಿಡಲ್ಲ: ಪುನರುಚ್ಚಾರ

ಕನ್ನಡಪ್ರಭ ವಾರ್ತೆ ಅಥಣಿ

ಬಿಜೆಪಿಯ ಯಾವುದೇ ಒತ್ತಡಕ್ಕೆ ಒಳಗಾಗಿ ನಾನು ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ. ಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರಿಗೆ ನಮ್ಮ ಅವಶ್ಯಕತೆ ಮತ್ತು ಅನಿವಾರ್ಯತೆ ಇರುವುದರಿಂದ ಅವರು ನಮ್ಮನ್ನು ಪಕ್ಷಕ್ಕೆ ಕರೆಯುತ್ತಿದ್ದಾರೆ. ಆದರೆ ನಾನು ಕಾಂಗ್ರೆಸ್ ಪಕ್ಷವನ್ನು ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದರು.

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರಾಜಕೀಯ ಜೀವನದಲ್ಲಿ ಕಳೆದ 25 ವರ್ಷಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡಿದ್ದೇನೆ. ಹೀಗಾಗಿ ಅನೇಕ ಜನ ನನಗೆ ಆತ್ಮೀಯ ಸ್ನೇಹಿತರು ಮತ್ತು ಒಳ್ಳೆಯ ಅಭಿಮಾನಿ ಜನಪ್ರತಿನಿಧಿಗಳು ಇದ್ದು, ಸಂಪರ್ಕಿಸುವ ಪ್ರಯತ್ನ ಮಾಡಿದ್ದಾರೆ ಎಂದರು.

ನಾನು ಮತ್ತು ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಬಂದ ನಂತರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹಳಷ್ಟು ನಷ್ಟವಾಗಿದೆ. ಹೀಗಾಗಿ ಬಿಜೆಪಿ ವರಿಷ್ಠರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಮತ್ತು ತಮ್ಮ ಪಕ್ಷದ ಏಳಿಗೆಗಾಗಿ ಆಪರೇಷನ್ ಮತ್ತೆ ಶುರು ಮಾಡಿದ್ದಾರೆ. ನನಗೂ ಕೆಲವರು ಸಂಪರ್ಕಿಸಿದ್ದಾರೆ. ಅವರ ಹೆಸರುಗಳನ್ನು ನಾನು ಬಹಿರಂಗಪಡಿಸುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ ನನ್ನ ಮೇಲೆ ವಿಶ್ವಾಸವಿಟ್ಟಿದ್ದಾರೆ. ಅವರಿಗೆ ವಿಶ್ವಾಸ ದ್ರೋಹ ಬಗೆಯಲು ನಾನು ಬಯಸುವುದಿಲ್ಲ. ಬಿಜೆಪಿಯ ಯಾವುದೇ ಒತ್ತಡಕ್ಕೆ ಒಳಗಾಗಿ ನಾನು ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.