ಕುಷ್ಟಗಿ: ಬುಡಕಟ್ಟು ಸಮುದಾಯದ ಜನರಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಯೋಜನೆ ಜಾರಿಗೆ ತಂದಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ವೀರಪ್ಪ ಹೇಳಿದರು.
ತಾಲೂಕಿನ ಗುಮಗೇರಾ ಗ್ರಾಪಂ ವ್ಯಾಪ್ತಿಯ ನಾಗರಾಳ ಗ್ರಾಮದಲ್ಲಿ ತಾಲೂಕಾಡಳಿತ,ತಾಪಂ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ PM-JANMAN ಹಾಗೂ DA-JGUA ಯೋಜನೆಗಳಡಿ Jan Bhagidar – Sabse Door, Sabse Pehle ಎಂಬ ವಿಶೇಷ IEC Campaign, Awareness and Benefit Saturation Camps ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಈ ಅಭಿಯಾನದ ಉದ್ದೇಶ ಅತಿ ಹಿಂದುಳಿದ ಮತ್ತು ದೂರದ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಕುರಿತು ಜಾಗೃತಿ ಮೂಡಿಸುವುದು ಹಾಗೂ ಅವರಿಗೆ ನೇರವಾಗಿ ಯೋಜನೆಗಳ ಸೌಲಭ್ಯ ತಲುಪಿಸುವುದಾಗಿದ್ದು, ರಸ್ತೆ, ಕುಡಿಯುವ ನೀರು, ವಿದ್ಯುತ್, ಆರೋಗ್ಯ ಹಾಗೂ ಶಿಕ್ಷಣ ಸೌಲಭ್ಯ ತಲುಪಿಸುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.
ಬುಡಕಟ್ಟು ಸಮುದಾಯದ ಅಭಿವೃದ್ಧಿಗೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ವಿದ್ಯಾರ್ಥಿವೇತನ ಹಾಗೂ ವಸತಿ ಸೌಲಭ್ಯ ಒದಗಿಸುವ ಮೂಲಕ ಸಮಾಜ ಮುಖ್ಯವಾಹಿನಿಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆಯಲು ಸಾರ್ವಜನಿಕರು ಮುಂದಾಗಬೇಕು. ಸಮಾಜದ ಎಲ್ಲ ವರ್ಗಗಳ ಸಹಕಾರದಿಂದ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಸಿಡಿಪಿಒ ಇಲಾಖೆ ಸೂಪರವೈಸರ್ ಅನ್ನಪೂರ್ಣ ಪಾಟೀಲ ಮಹಿಳಾ ಕಲ್ಯಾಣ ಮತ್ತು ಸಬಲೀಕರಣ ಯೋಜನೆಗಳಲ್ಲಿ ಬರುವಂತಹ ಗೃಹಲಕ್ಷ್ಮಿ ಯೋಜನೆ, ಸ್ತ್ರೀ ಶಕ್ತಿ ಯೋಜನೆ, ಸಾಂತ್ವನ ಯೋಜನೆ, ಮಹಿಳಾ ಸಹಾಯವಾಣಿ, ಸಖಿ ಒನ್ ಸ್ಟಾಪ್ ಸೆಂಟರ್ ಸೇರಿದಂತೆ ವಿವಿಧ ಯೋಜನೆಗಳ ಕುರಿತು ಸಮಗ್ರ ಮಾಹಿತಿ ಹಂಚಿಕೊಂಡರು.
ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಗ್ರಾಪಂ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಯೋಜನೆಯ ಕುರಿತು ಮಾಹಿತಿ ತಿಳಿಸಿದ ಅವರು, ಸರ್ಕಾರ ಸೌಲಭ್ಯ ಪಡೆದುಕೊಂಡು ಸಮುದಾಯದ ಅಭಿವೃದ್ಧಿಗೆ ಮುಂದಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರಸಮನ್ವಯಾಧಿಕಾರಿ ಜಗದೀಶಪ್ಪ ಮೆಣೇದಾಳ, ಸಿಡಿಪಿಒ ಇಲಾಖೆ ಸೂಪರವೈಸರ್ ಅನ್ನಪೂರ್ಣ ಪಾಟೀಲ, ಗುಮಗೇರಾ ಗ್ರಾಪಂ ಪಿಡಿಒ ಶಿವಬಸಪ್ಪ ಸೇರಿದಂತೆ ಇಲಾಖೆ ಅಧಿಕಾರಿ, ಗ್ರಾಮದ ಮುಖಂಡರು ಇದ್ದರು.ಕಾರ್ಯಕ್ರಮದ ನಂತರದಲ್ಲಿ ಆರೋಗ್ಯ ಇಲಾಖೆಯವರಿಂದ ಆರೋಗ್ಯ ತಪಾಸಣೆ ನಡೆಸಲಾಯಿತು.