ಕನ್ನಡಪ್ರಭ ವಾರ್ತೆ ಹಾಸನ

ಮನೆಗೆ ಡ್ರಾಪ್ ಕೊಡುವ ನೆಪದಲ್ಲಿ ೧೭ ವರ್ಷದ ಅಪ್ರಾಪ್ತೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ೨೧ ವರ್ಷದ ಯುವಕನನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಗರದಲ್ಲಿ ಮಂಗಳವಾರ ನಡೆದು ಆರೋಪಿಯನ್ನು ಬುಧವಾರ ಬಂಧಿಸಲಾಗಿದೆ.ಬಂಧಿತನನ್ನು ಸಾಗರ್ ಎಂದು ಗುರುತಿಸಲಾಗಿದ್ದು, ಆತ ನಗರದ ೮೦ ಅಡಿ ರಸ್ತೆ ಸಮೀಪ ಪಾನಿಪುರಿ ವ್ಯಾಪಾರ ನಡೆಸುತ್ತಿದ್ದ ಎನ್ನಲಾಗಿದೆ. ಸಂತ್ರಸ್ತ ಬಾಲಕಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದು, ಪಾನಿಪುರಿ ಅಂಗಡಿಗೆ ಆಗಾಗ್ಗೆ ಬರುತ್ತಿದ್ದ ಕಾರಣ ಇಬ್ಬರ ನಡುವೆ ಪರಿಚಯ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಪರಿಚಯವನ್ನು ದುರುಪಯೋಗಪಡಿಸಿಕೊಂಡ ಆರೋಪಿ, ಬಾಲಕಿಯನ್ನು ನಂಬಿಸಿ ಇತ್ತೀಚೆಗೆ ೮೦ ಅಡಿ ರಸ್ತೆ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಘಟನೆಯ ಬಳಿಕ ಬಾಲಕಿಯನ್ನು ಬೈಕ್‌ನಲ್ಲಿ ವಾಪಸ್ ಕರೆತರುತ್ತಿದ್ದ ವೇಳೆ ಆಕೆ ಭಯಭೀತಳಾಗಿ ಸಹಾಯಕ್ಕಾಗಿ ಕಿರುಚಿಕೊಂಡಿದ್ದಾಳೆ. ಬಾಲಕಿಯ ಕಿರುಚಾಟ ಕೇಳಿದ ಸ್ಥಳೀಯರು ತಕ್ಷಣ ಮಧ್ಯಪ್ರವೇಶಿಸಿ ಆಕೆಯನ್ನು ಸುರಕ್ಷಿತವಾಗಿ ರಕ್ಷಿಸಿ ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಬಳಿಕ ಬಾಲಕಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪ್ರಕರಣದ ಮಾಹಿತಿ ದೊರೆಯುತ್ತಿದ್ದಂತೆಯೇ ಮಹಿಳಾ ಠಾಣೆ ಪೊಲೀಸರು ತ್ವರಿತವಾಗಿ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಪೊಲೀಸ್ ಮೂಲಗಳ ಪ್ರಕಾರ, ಅಪ್ರಾಪ್ತ ಬಾಲಕಿಯರೊಂದಿಗೆ ಸಂಪರ್ಕ ಸಾಧಿಸಿ ನಂಬಿಕೆ ಗಳಿಸುವ ಮೂಲಕ ಇಂತಹ ಕೃತ್ಯಗಳು ನಡೆಯುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದ್ದು, ಪೋಷಕರು ಮಕ್ಕಳ ಚಲನವಲನಗಳ ಬಗ್ಗೆ ಹೆಚ್ಚಿನ ಎಚ್ಚರ ವಹಿಸುವ ಅಗತ್ಯವಿದೆ. ಪರಿಚಿತ ವ್ಯಕ್ತಿಗಳೊಂದಿಗೆ ಎಲ್ಲಿಗೆ ಹೋಗುತ್ತಿದ್ದಾರೆ, ಯಾರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬುದರ ಬಗ್ಗೆ ಗಮನ ಹರಿಸಬೇಕು ಎಂದು ಸಲಹೆ ನೀಡಲಾಗಿದೆ.ಪ್ರಕರಣ ದಾಖಲಾದ ಬೆನ್ನಲ್ಲೇ ಪಿಎಸ್‌ಐ ಮಧು ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.