ತಾಲೂಕಿನ ಶೇಜವಾಡ ಗ್ರಾಮದಲ್ಲಿ ನೂತನವಾಗಿ ಸ್ಥಳಾಂತರಗೊಂಡಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಸಿಸುತ್ತಿದ್ದು, ಅವರಿಗೆ ಅಗತ್ಯ ಮೂಲಸೌಕರ್ಯಗಳನ್ನು ತಕ್ಷಣ ಒದಗಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ಆಗ್ರಹಿಸಿದೆ.
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರಿಗೆ ಮನವಿ । ವಿದ್ಯಾರ್ಥಿಗಳ ಸುರಕ್ಷತೆಗೆ ಸಮಸ್ಯೆ
ಕನ್ನಡಪ್ರಭ ವಾರ್ತೆ ಕಾರವಾರ
ತಾಲೂಕಿನ ಶೇಜವಾಡ ಗ್ರಾಮದಲ್ಲಿ ನೂತನವಾಗಿ ಸ್ಥಳಾಂತರಗೊಂಡಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಸಿಸುತ್ತಿದ್ದು, ಅವರಿಗೆ ಅಗತ್ಯ ಮೂಲಸೌಕರ್ಯಗಳನ್ನು ತಕ್ಷಣ ಒದಗಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ಆಗ್ರಹಿಸಿದೆ.ಈ ಕುರಿತು ಎಸ್ಎಫ್ಐ ಉತ್ತರ ಕನ್ನಡ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರಿಗೆ ಮನವಿ ಸಲ್ಲಿಸಲಾಯಿತು.
ವಿದ್ಯಾರ್ಥಿಗಳು ಪ್ರತಿನಿತ್ಯ ಕಾರವಾರ ನಗರದ ವಿವಿಧ ಕಾಲೇಜುಗಳಿಗೆ ತೆರಳಲು ಸೂಕ್ತ ಸಾರಿಗೆ ವ್ಯವಸ್ಥೆಯಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಸದಾನಂದ ಹಾಲ್ ಸಮೀಪದ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ಗಳಿಗೆ ವಸತಿ ನಿಲಯದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಡ್ಡಾಯ ನಿಲುಗಡೆ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.ವಸತಿ ನಿಲಯಕ್ಕೆ ತೆರಳುವ ರಸ್ತೆಯಲ್ಲಿ ಬೀದಿ ದೀಪಗಳಿಲ್ಲದ ಕಾರಣ ರಾತ್ರಿ ವೇಳೆ ವಿದ್ಯಾರ್ಥಿಗಳ ಸುರಕ್ಷತೆಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ಶಿರವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆಯಲ್ಲಿ ತಕ್ಷಣ ಬೀದಿ ದೀಪಗಳನ್ನು ಅಳವಡಿಸಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಎಸ್ಎಫ್ಐ ಒತ್ತಾಯಿಸಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಈಗಾಗಲೇ ಸಂಬಂಧಪಟ್ಟ ಇಲಾಖೆಗೆ ಈ ಕುರಿತು ಪತ್ರ ಬರೆದಿದ್ದರೂ, ಸಮಸ್ಯೆಗಳು ಸಂಪೂರ್ಣವಾಗಿ ಬಗೆಹರಿದಿಲ್ಲ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದೆ.ವಸತಿ ನಿಲಯದಲ್ಲಿ ಊಟೋಪಹಾರ ಕಳಪೆಯಾಗಿದ್ದು, ನಿಗದಿತ ಮೆನು ಪ್ರಕಾರ ಆಹಾರ ನೀಡುತ್ತಿಲ್ಲ ಎಂಬ ಆರೋಪವನ್ನೂ ಮಾಡಿದ ಎಸ್ಎಫ್ಐ ವಿದ್ಯಾರ್ಥಿಗಳು, ವಾರ್ಡನ್ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವುದರ ಜೊತೆಗೆ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆಯೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಅನುಕೂಲವಾಗುವಂತೆ ವಸತಿ ನಿಲಯದಲ್ಲಿ ಗ್ರಂಥಾಲಯ ವ್ಯವಸ್ಥೆ ಕಲ್ಪಿಸಬೇಕು. ರಾತ್ರಿ ವೇಳೆ ವಿದ್ಯಾರ್ಥಿಗಳ ಸುರಕ್ಷತೆ ಖಚಿತಪಡಿಸಬೇಕು ಹಾಗೂ ವಸತಿ ನಿಲಯಕ್ಕೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.ಎಸ್ಎಫ್ಐ ತಾಲೂಕು ಸಂಚಾಲಕ ವೀರೇಶ್ ರಾಠೋಡ್, ಸದಸ್ಯರಾದ ಶೇಖಪ್ಪ ಬಳ್ಳಾರಿ, ನೂರ್ ಮೊಹಮ್ಮದ್, ಅಶ್ರಫ್, ಮೆಹ್ತಾಬ್, ಸಮೀರ್ ಇದ್ದರು.