ಕನ್ನಡಪ್ರಭ ವಾರ್ತೆ ಬೆಂಗಳೂರು
ಶರಣ ಸಾಹಿತ್ಯ ಗೋಷ್ಠಿಗಳು, ಆಧುನಿಕ ವಚನ ಗೋಷ್ಠಿ, ವಚನ ಗಾಯನ, ಸಂಸ್ಮರಣೆ ಸೇರಿ ವಿವಿಧ ಕಾರ್ಯಕ್ರಮಗಳನ್ನು ಒಳಗೊಂಡ ಅಖಿಲ ಭಾರತ 14ನೇ ಶರಣ ಸಾಹಿತ್ಯ ಪರಿಷತ್ ಸಮ್ಮೇಳನ ಜು.7 ಮತ್ತು 8ರಂದು ನಗರದಲ್ಲಿ ನಡೆಯಲಿದೆ.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಪರಿಷತ್ತಿನ ಅಧ್ಯಕ್ಷ ಡಾ.ಸಿ.ಸೋಮಶೇಖರ್, ವಿಜಯನಗರದಲ್ಲಿರುವ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಸಮ್ಮೇಳನ ನಡೆಯಲಿದೆ. ಜು.7ರಂದು ಬೆಳಗ್ಗೆ 10.30ಕ್ಕೆ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಸಿದ್ದಗಂಗಾ ಕ್ಷೇತ್ರದ ಸಿದ್ದಲಿಂಗ ಸ್ವಾಮೀಜಿ ಅವರು ಸಮ್ಮೇಳನದ ಸಾನ್ನಿಧ್ಯ ವಹಿಸುವರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮೇಳನ ಉದ್ಘಾಟಿಸುವರು ಎಂದರು.
ಸ್ಮರಣ ಸಂಚಿಕೆ ಬಿಡುಗಡೆ:ಕಲ್ಯಾಣ ಸಂಗಮ ಸ್ಮರಣ ಸಂಚಿಕೆಯನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಬಿಡುಗಡೆ ಮಾಡುವರು. ಮಹಾಮನೆ ವಿಶೇಷ ಸಂಚಿಕೆಯನ್ನು ಕೈಗಾರಿಕಾ ಸಚಿವ, ಸಮ್ಮೇಳನದ ಸ್ವಾಗತ ಸಮಿತಿ ಅದ್ಯಕ್ಷ ಡಾ.ಎಂ.ಬಿ.ಪಾಟೀಲ್ ಲೋಕಾರ್ಪಣೆ ಮಾಡುವರು. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.
ಎರಡು ದಿನ ನಡೆಯುವ ಸಮ್ಮೇಳನದಲ್ಲಿ ‘ಸಾಂಸ್ಕೃತಿಕ ನಾಯಕ ಬಸವಣ್ಣ’, ‘ಶರಣ ಸಾಹಿತ್ಯದಲ್ಲಿ ಮಹಿಳಾ ಸಂವೇದನೆ’, ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಸಂಸ್ಮರಣೆ ಹಾಗೂ ಯುವ ಜನರತ್ತ ಶರಣ ಸಾಹಿತ್ಯ ಗೋಷ್ಠಿಗಳು, ಆಧುನಿಕ ವಚನ ಗೋಷ್ಠಿಯೂ ನಡೆಯಲಿದೆ. ವೈಜಯಂತಿ ಕಾಶಿ ಅವರಿಂದ ನೃತ್ಯರೂಪಕ, ಎಂ.ಡಿ.ಪಲ್ಲವಿ, ಸಂಗೀತಾ ಕಟ್ಟಿ, ಮೃತ್ಯುಂಜಯ ದೊಡ್ಡವಾಡ, ಪಂಡಿತ್ ರವೀಂದ್ರ ಸೊರಗಾವಿ, ಕಿಕ್ಕೇರಿ ಕೃಷ್ಣಮೂರ್ತಿ, ಪಾವನಿ ಭಾರದ್ವಾಜ್ ಅವರಿಂದ ವಚನ ಗಾಯನ ಇರಲಿದೆ. ಸಮಾರೋಪದಲ್ಲಿ ಧಾರವಾಡದ ನಾಗರತ್ನ ಹಡಗಲಿ ಅವರ ರತಿಕಾ ನೃತ್ಯ ಕಲಾನಿಕೇತನ ತಂಡದಿಂದ ನೃತ್ಯರೂಪಕ ಹಾಗೂ ಶಿವರಾತ್ರಿ ನಾಟಕ ಪ್ರದರ್ಶಿಸಲಾಗುವುದು ಎಂದರು.
ಸಮ್ಮೇಳನದ ಸಮಾರೋಪ ಜು.8ರಂದು ಸಂಜೆ 5ಕ್ಕೆ ನಡೆಯಲಿದ್ದು, ಡಾ.ತೋಂಟದ ಸಿದ್ದರಾಮ ಸ್ವಾಮೀಜಿ, ಡಾ.ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಡಾ.ಬಸವಲಿಂಗ ಪಟ್ಟದೇವರು ಸಾನ್ನಿಧ್ಯ ವಹಿಸುವರು. ಮಾಜಿ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅಭಿನಂದನೆ ಸಲ್ಲಿಸಲಿದ್ದಾರೆ. ಶರಣ ಸಾಹಿತ್ಯಕ್ಕೆ ಸಂಬಂಧಿಸಿದ ಅನೇಕ ಅನುಭವ ಕೃತಿಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ.ಖಂಡ್ರೆ ಬಿಡುಗಡೆ ಮಾಡುವರು. ಕೆಎಲ್ಇ ವಿವಿ ಕುಲಾಧಿಪತಿ ಡಾ.ಪ್ರಭಾಕರ್ ಕೋರೆ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಬಿ.ಎಸ್.ಪರಮಶಿವಯ್ಯ, ರಮಣಶ್ರೀ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಸ್.ಷಡಕ್ಷರಿ ಪಾಲ್ಗೊಳ್ಳುವರು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಆಧ್ಯಕ್ಷ ಕೆ.ವಿ.ನಾಗರಾಜಮೂರ್ತಿ ಸೇರಿದಂತೆ ಇತರರು ಇದ್ದರು.