ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿನ ಕೇಂದ್ರ ಕಾರಾಗೃಹಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ ಕೋಸಂಬೆ ಭೇಟಿ ನೀಡಿ ಊಟದ ಕೋಣೆ ಹಾಗೂ ಗ್ರಂಥಾಲಯ ಪರಿಶೀಲಿಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ನಗರದಲ್ಲಿನ ಕೇಂದ್ರ ಕಾರಾಗೃಹಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ ಕೋಸಂಬೆ ಭೇಟಿ ನೀಡಿ ಊಟದ ಕೋಣೆ ಹಾಗೂ ಗ್ರಂಥಾಲಯ ಪರಿಶೀಲಿಸಿದರು.ಕಾರಾಗೃಹದಲ್ಲಿರುವ ವಿಚಾರಣೆ ಹಾಗೂ ವಿವಿಧ ರೀತಿಯ ಶಿಕ್ಷೆಯಾದ 27 ಮಹಿಳೆಯರು ಸೇರಿದಂತೆ ಒಟ್ಟು 539 ಕೈದಿಗಳ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ, ಸದಸ್ಯರ ,ಮಕ್ಕಳ ರಕ್ಷಣಾ ಘಟಕ ಹಾಗೂ ಕಾರಾಗೃಹ ಅಧೀಕ್ಷಕರು ಸೇರಿಕೊಂಡು ಪ್ರತಿಯೊಬ್ಬ ಕೈದಿಯ 18 ವರ್ಷದ ಒಳಗಿನ ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ರಕ್ಷಣೆ ಗೆ ಸೂಕ್ತವಾದ ರೀತಿಯಲ್ಲಿ ಕ್ರಮ ಕೈಗೊಂಡು ವಾರದಲ್ಲಿ ವರದಿ ಸಲ್ಲಿಸುವಂತೆ ತಿಳಿಸಿದರು.
ಗೋಳಗುಮ್ಮಟ ಹತ್ತಿರದ ಸಮಾಜ ಕಲ್ಯಾಣ ಇಲಾಖೆಯ ಅಡಿ ನಡೆಯುತ್ತಿರುವ ಬಾಲಕಿಯರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದಲ್ಲಿ ಕೊಠಡಿ, ಶೌಚಾಲಯ, ಸ್ನಾನ ಗ್ರಹ, ಉಗ್ರಾಣ ಕೊಠಡಿ, ಕುಡಿಯುವ ನೀರಿನ ಘಟಕ, ಅಡುಗೆ ಕೊಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬೆಳಗಿನ ಉಪಹಾರಕ್ಕೆ ಮೇನು ಚಾರ್ಟ್ ಪ್ರಕಾರ ಇಂದು ಅವಲಕ್ಕಿ ಕೊಡಬೇಕಾಗಿತ್ತು. ಆದರೆ ಚೂರಿಮುರಿ ಚೂಡಾ ಕೊಟ್ಟಿದ್ದಾರೆ. ಇದನ್ನು ಕಂಡು ವಾರ್ಡನ್ ವಿರುದ್ಧ ಅಸಮಾಧಾನ ವ್ಯಪಡಿಸಿದರು. ಸ್ನಾನಕ್ಕೆ ಬಿಸಿನೀರಿನ ವ್ಯವಸ್ಥೆ ಇಲ್ಲದಿರುವುದು ಗಮನಿಸಿದ ಅವರು ತಾಲೂಕು ಮಟ್ಟದಲ್ಲಿ ಮೇಲುಸ್ತುವಾರಿ ಮಾಡಲು ನಿರ್ಲಕ್ಷ್ಯ ಧೋರಣೆ ತೋರಿದ ಸಹಾಯಕ ನಿರ್ದೇಶಕರಿಗೆ ನೋಟಿಸ್ ಹಾಗೂ ವಾರ್ಡನ್ ಗೆ ಶೋಕಾಸ್ ನೋಟಿಸ್ ನೀಡಲು ಸ್ಥಳದಲ್ಲಿದ್ದ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.
ಜಿಲ್ಲಾ ಆಸ್ಪತ್ರೆಯಲ್ಲಿನ ಅಪೌಷ್ಟಿಕ ಮಕ್ಕಳ ಪುನಃಶ್ಚೇತನ ಘಟಕಕ್ಕೆ ಜನೆವರಿಯಿಂದ ಇಲ್ಲಿಯವರೆಗೆ 320 ಮಕ್ಕಳು ದಾಖಲಾಗಿದ್ದಾರೆ, ತೀವ್ರ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳು ಬರೀ 37 ಮಕ್ಕಳಿಗೆ ಮಾತ್ರ ಆರ್ ಬಿಎಸ್ ಕೆ ತಂಡ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು ದಾಖಲು ಮಾಡಿರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ನಾಳೆಯ ಮಾಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಸೇರಿ ತುರ್ತು ಸಭೆ ನಡೆಸುವ ಮೂಲಕ ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಪಾಳಿ ಆಧಾರದ ಮೇಲೆ ದಾಖಲು ಮಾಡಲು ಕ್ರಮ ವಹಿಸಿ, ವರದಿ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚವ್ಹಾಣ ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಕಾರಾಗೃಹದ ಅಧೀಕ್ಷಕ ಕೊಟ್ರೇಶ್ವರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ, ಇತರರಿದ್ದರು.