ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಜಿಲ್ಲೆಯಲ್ಲಿ ಗೋ ಕಳವು ಪ್ರಕರಣಗಳು ಎಗ್ಗಿಲ್ಲದೆ ನಡೆಯುತ್ತಿದ್ದು, ಇಲ್ಲಿ ಗೋವುಗಳಿಗೂ ರಕ್ಷಣೆ ಇಲ್ಲ, ಅಕ್ರಮ ಗೋವು ಸಾಗಾಣಿಕೆ ತಡೆಯುವ ಗೋ ರಕ್ಷಕರಿಗೂ ಉಳಿಗಾಲ ಎಂಬ ಸ್ಥಿತಿ ಉಲ್ಬಣಿಸಿದೆ ಎಂದು ವಿಹಿಂಪ ವಿಭಾಗ ಸಹ ಕಾರ್ಯದರ್ಶಿ ರಾಜೇಶ್ ಗೌಡ ಆರೋಪಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಗೋ ರಕ್ಷಕರನ್ನು ಹತ್ತಿಕ್ಕುವ ಕೆಲಸ ಆಗುತ್ತಿದೆ. ಗೋ ರಕ್ಷಣೆಯಲ್ಲಿ ರಾಜ್ಯ ಸರ್ಕಾರದ ಬೇಜವಬ್ದಾರಿ ತನದಿಂದ ಅಕ್ರಮ ಗೋ ಸಾಗಾಣಿಕೆ ಪ್ರಕರಣಗಳು ನಡೆಯುತ್ತಲೇ ಇವೆ ಎಂದು ದೂರಿದ ಅವರು, ಹೊಸನಗರ ತಾಲೂಕಿನ ಹರತಾಳು ಗ್ರಾಮದಲ್ಲಿ ಆ.15ರಂದು ಬೆಳಗಿನ ಜಾವ ಗೋ ಕಳ್ಳತನ ನಡೆದಿರುವ ಘಟನೆ ನಡೆದಿದೆ. ಇದನ್ನು ತಡೆಯಲು ಮುಂದಾಗಿದ್ದ ಬಜರಂಗದಳದ ಕಾರ್ಯಕರ್ತರ ಮೇಲೆಯೇ ಗೋ ಕಳ್ಳರು ಹಲ್ಲೆ ನಡೆಸಿರುವ ಘಟನೆಯನ್ನು ಬಜರಂಗದಳ ತೀವ್ರವಾಗಿ ಖಂಡಿಸಿದೆ ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲಾದ್ಯಾಂತ ಗೋ ಕಳ್ಳತನ ಹೆಚ್ಚಾಗುತ್ತಿದೆ. ಹೊಸನಗರ ತಾಲೂಕಿನ ಹರತಾಳು ಗ್ರಾಮದಲ್ಲಿ ತಡ ರಾತ್ರಿ ಬಂದ ಕಳ್ಳರು ಕೊಟ್ಟಿಯಲ್ಲಿ ಕಟ್ಟಿದ ಜಾನುವಾರುಗಳನ್ನು ವಾಹನಕ್ಕೆ ತುಂಬಿಕೊಂಡಿದ್ದು, ಪರಾರಿಯಾಗಲು ಯತ್ನಿಸಿದರು. ಜಾನುವಾರ ಸದ್ದು ಕೇಳಿ ಎಚ್ಚೆತ್ತ ಮನೆಯವರು ಜಗರಂಗದ ದಳದ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದು, ಕೂಡಲೇ ಮಾಹಿತಿ ಪಡೆದ ಕಾರ್ಯಕರ್ತರು ಕಾರ್ಯೋನ್ಮುಖರಾಗಿ ತಮ್ಮ ಕಾರಿನಲ್ಲಿ ಕಳ್ಳರ ವಾಹನವನ್ನು ಹಿಂಬಾಲಿಸಿದ್ದಾರೆ. ಗೋ ಕಳ್ಳರ ಗುಂಪು ಮಾರ್ಗ ಮಧ್ಯೆ ತಮ್ಮ ಇನ್ನೊಂದು ವಾಹನವನ್ನು ಕರೆಸಿಕೊಂಡು ಪೂರ್ವ ನಿಯೋಜಿತವಂತೆ ಕಾರ್ಯಕರ್ತರ ಕಾರಿಗೆ ತಮ್ಮ ವಾಹನದಿಂದ ಬಲವಾಗಿ ಡಿಕ್ಕಿ ಹೊಡೆದಿದ್ದಾರೆ. ಈ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರಿನಿಂದ ಇಳಿದ ಕಾರ್ಯಕರ್ತರ ಮೇಲೆ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಮನಸೋಇಚ್ಛೆ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಮೂವರು ಕಾರ್ಯಕರ್ತರಿಗೆ ಗಾಯಗಳಾಗಿವೆ. ಈ ಕುರಿತು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೂಡಲೇ ಗೋ ಕಳ್ಳರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.ಶಿಕಾರಿಪುರ ಬಂದ್‌ಗೆ ಕರೆ: ಶಿಕಾರಿಪುರದಲ್ಲಿ ನಡೆದಂತಹ ಬಜರಂಗದಳದ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19 ರಂದು ಸ್ವಯಂ ಪ್ರೇರಿತ ಶಿಕಾರಿಪುರ ಬಂದ್‌ಗೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕರೆ ನೀಡಿದೆ. ಅಂದು ವಿಶ್ವ ಹಿಂದೂ ಪರಿಷತ್‌ ಮುಖಂಡ ಶರಣ್‌ ಪಂಪ್‌ವೆಲ್‌ ಸೇರಿದಂತೆ ಜಿಲ್ಲೆಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮುಖಂಡರು ಸೇರಿದಂತೆ ಸಾವಿರಾರು ಮಂದಿ ಕಾರ್ಯಕರ್ತರು ಬಂದ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ ಬಂದ್‌ಗೆ ಶಿಕಾರಿಪುರ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ರಾಘವೇಂದ್ರ ಅವರ ಬೆಂಬಲವೂ ಇದ್ದು, ಅವರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ಶಿಕಾರಿಪುರದ ವರ್ತಕರು ಸ್ವಯಂ ಪ್ರೇರಿತವಾಗಿ ತಮ್ಮ ಅಂಗಡಿಮುಗ್ಗಟ್ಟುಗಳ ಸಹಕಾರವೂ ಕೋರಲಾಗಿದ್ದು, ಬಂದ್ ಮಾಡಿ ಬೆಂಬಲಿಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.ಗೋಷ್ಠಿಯಲ್ಲಿ ವಿಹಿಂಪ ಪ್ರಾಂತೀಯ ಸಾಮರಸ್ಯ ಪ್ರಮುಖ್ ರಮೇಶ್ ಬಾಬು, ಬಜರಂಗದಳದ ಜಿಲ್ಲಾ ಸಂಯೋಜಕ್ ಸಂತೋಷ್ ಶಿವಾಜಿ, ಪ್ರಮುಖರಾದ ನವೀನ್, ಯೋಗೀಶ್, ಸೋಮಶೇಖರ್, ಕೀರ್ತಿ ಇದ್ದರು.

-------------


ಬಾಕ್ಸ್...ದೂರು ಕೊಟ್ಟರೂ ಕ್ರಮ ಇಲ್ಲ...

ಸಾಗರ ವಿಭಾಗವೂ ಸೇರಿದಂತೆ ಗೋಗಳ್ಳರ ಸಂಖ್ಯೆ ಹೆಚ್ಚುತ್ತಿದೆ. ಕೇವಲ ಗೋವುಗಳನ್ನು ಕಳ್ಳತನ ಮಾಡಿಕೊಂಡು ಹೋಗುವುದು ಮಾತ್ರವಲ್ಲದೆ ಇದನ್ನು ತಡೆಯಲು ಹೋದ ನಮ್ಮ ಕಾರ್ಯಕರ್ತರ ಮೇಲೆ ಮಾರಣಾಂತಿ ಹಲ್ಲೆ ನಡೆಸುತ್ತಿದ್ದಾರೆ. ಈ ಬಗ್ಗೆ ದೂರು ಕೊಟ್ಟರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ಸರ್ಕಾರದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಟ್ಟಿದೆ ಹಾಗಾಗಿ ತಕ್ಷಣವೇ ಅಕ್ರಮ ಗೋಸಾಗಾಣಿಕದಾರರನ್ನು ಬಂಧಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್‌ನ ಜಿಲ್ಲೆಯಾದ ಸಾಗರದ ಜಿಲ್ಲಾಧ್ಯಕ್ಷೆ ಪ್ರತಿಮಾ ಜೋಗಿ ತಿಳಿಸಿದರು.

-----------------

ಪೋಟೋ: 17ಎಸ್‌ಎಂಜಿಕೆಪಿ06

ಶಿವಮೊಗ್ಗದ ಪತ್ರಿಕಾಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ವಿಹಿಂಪ ವಿಭಾಗ ಸಹ ಕಾರ್ಯದರ್ಶಿ ರಾಜೇಶ್ ಗೌಡ ಮಾತನಾಡಿದರು.