ಸಾರಾಂಶ
ಸಕಲೇಶಪುರ : ಪದೇ ಪದೆ ಭೂಕುಸಿತ ಸಂಭವಿಸುತ್ತಿರುವ ತಾಲೂಕಿನ ದೊಡ್ಡತಪ್ಪಲೆ ಹಾಗೂ ಇನ್ನಿತರ ಸ್ಥಳಗಳಿಗೆ ಶುಕ್ರವಾರ ಭೂಗರ್ಭ ಶಾಸ್ತ್ರಜ್ಞರ ತಂಡ ಭೇಟಿ ನೀಡಿತ್ತು.
ಈ ಸಂದರ್ಭದಲ್ಲಿ ಅಲ್ಲಿನ ಮಣ್ಣು ಮತ್ತು ಕಲ್ಲಿನ ಮಾದರಿಗಳನ್ನು ಸಂಗ್ರಹಿಸಿ ಕೊಂಡೊಯ್ಯಲಾಗಿದೆ. ಅತಿಯಾದ ಮಳೆಯಿಂದಾಗಿ ಭೂಮಿಯ ಪದರಗಳ ಒಳಗೆ ನೀರು ಸೇರಿಕೊಂಡು ಭೂಕುಸಿತ ಆಗುತ್ತಿದೆ. ಹಾಗೆಯೇ ರಸ್ತೆ ಅಗಲೀಕರಣಕ್ಕಾಗಿ ಅವೈಜ್ಞಾನಿಕವಾಗಿ ಗುಡ್ಡಗಳನ್ನು ಯಂತ್ರಗಳಿಂದ ಕತ್ತರಿಸುತ್ತಿರುವುದು ಭೂಕುಸಿತಕ್ಕೆ ಮೇಲ್ನೋಟದ ಕಾರಣಗಳಾಗಿವೆ ಎಂದು ತಂಡ ಅಭಿಪ್ರಾಯಪಟ್ಟಿದೆ.
ಈ ಮಧ್ಯೆ, ತಾಲೂಕಿನಲ್ಲಿ ಜಿಟಿಜಿಟಿ ಮಳೆ ಮುಂದುವರಿದಿದ್ದು, ರಾಷ್ಟ್ರಿಯ ಹೆದ್ದಾರಿ 75ರ ಶಿರಾಡಿಘಾಟ್ನಲ್ಲಿ ಮತ್ತಷ್ಟು ಭೂಕುಸಿತ ಸಂಭವಿಸಿದೆ. ಹೆದ್ದಾರಿ 75ರ ದೋಣಿಗಾಲ್ ಗ್ರಾಮದಿಂದ ಮಾರನಹಳ್ಳಿ ಗ್ರಾಮದವರೆಗೆ ಗುರುವಾರ ರಾತ್ರಿ ಮತ್ತಷ್ಟು ಭೂಕುಸಿತ ಸಂಭವಿಸಿದೆ. ಇದರಿಂದಾಗಿ, ಮಂಗಳೂರು-ಬೆಂಗಳೂರು ನಡುವಿನ ಸಂಚಾರ ಬಂದ್ ಆಗಿತ್ತು. ಬಳಿಕ, ಮಣ್ಣು ತೆರವುಗೊಳಿಸಲಾಗಿದ್ದು, ಶುಕ್ರವಾರ ಮಧ್ಯಾಹ್ನದಿಂದ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.