ಕಾಪು: ಇಲ್ಲಿನ ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ ವಾರ್ಷಿಕೋತ್ಸವವು ಕಾಲೇಜಿನ ಸಭಾಂಗಣದಲ್ಲಿ ಗುರುವಾರ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸದಾ ಜಾಗೃತರಾಗಿದ್ದು ಭವಿಷ್ಯ ರೂಪಿಸಿಕೊಳ್ಳಬೇಕು ನಾಲ್ಕುವರೆ ದಶಕಗಳ ಹಿಂದೆ ಕಷ್ಟಪಟ್ಟು ಕಟ್ಟಿಬೆಳೆಸಿದ ಈ ವಿದ್ಯಾದೇಗುಲದ ಕೀರ್ತಿಗೆ ಭಾಜನರಾಗುವಂತೆ ಸಾಧನೆ ಮಾಡಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿಗಳಾದ ಪ್ರೊ. ವೈ. ಭಾಸ್ಕರ್ ಶೆಟ್ಟಿ ವಹಿಸಿ ವಿದ್ಯಾರ್ಥಿಗಳು ನಿಶ್ಚಿತ ಗುರಿ ಹೊಂದಿ ಅದರ ಸಾಧನೆಗೆ ಕಟಿಬದ್ಧರಾಗಿ ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಕಾಲೇಜಿನ ವಾರ್ಷಿಕೋತ್ಸವ ನಿಮ್ಮ ಸಾಧನೆಗಳನ್ನು ಗುರುತಿಸಿ ಹುರಿದುಂಬಿಸುವ ಸಮಾರಂಭ. ಗ್ರಾಮೀಣ ಭಾಗದ ಸಂಸ್ಥೆಗಳನ್ನು ನಿಮ್ಮ ಕೊಡುಗೆಗಳ ಮೂಲಕ ಪುನಶ್ಚೇತನಗೊಳಿಸಬೇಕು ಎಂದರು.
ಸಾಧಕರಿಗೆ ಸನ್ಮಾನ: ಈ ಸಂದರ್ಭದಲ್ಲಿ ಕಾಲೇಜಿನಲ್ಲಿ 40 ವರ್ಷ ಸುದೀರ್ಘ ಸೇವೆಯನ್ನು ಸಲ್ಲಿಸಿ ನಿವೃತ್ತರಾದ ಬೋಧಕೇತರ ಸಿಬ್ಬಂದಿ ಗೀತಾ ಕುಮಾರಿ ಹಾಗೂ ಥೈಲ್ಯಾಂಡ್ನ ಅತ್ಲೆಟಿಕ್ಸ್ ಚಾಂಪಿಯನ್ಶಿಪ್ ಭಾಗವಹಿಸಿ 4 * 100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಬೆಳ್ಳಿ ಹಾಗೂ ಗುಂಡೆಸೆತದಲ್ಲಿ ಕಂಚಿನ ಪದಕವನ್ನು ಪಡೆದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಸೌಮ್ಯ ಕುಮಾರಿ ಅವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಡಾ. ಮಿಥುನ್ ಚಕ್ರವರ್ತಿ ಇವರು 2025 - 26 ನೇ ಶೈಕ್ಷಣಿಕ ವರ್ಷದ ವರದಿ ವಾಚಿಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಹೇಮಲತಾ ಶೆಟ್ಟಿ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಕು. ಪ್ರಣತಿ ನಿರೂಪಿಸಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಪೃತ್ವಿಕ್ ಆಚಾರ್ಯ, ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪವನ್, ಕಾಲೇಜಿನ ಬೋಧಕ, ಬೋಧಕೇತರ ವೃಂದದವರು ಉಪಸ್ಥಿತರಿದ್ದು ನಂತರ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾದರು.