ಕನ್ನಡಪ್ರಭ ವಾರ್ತೆ ಅರಸೀಕೆರೆ
ತಾಲೂಕು ಮಟ್ಟದಲ್ಲಿ ಮಹನೀಯರ ಜಯಂತಿಗಳನ್ನು ಇನ್ನಷ್ಟು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ತಾಲೂಕು ಆಡಳಿತ ಹಮ್ಮಿಕೊಳ್ಳುವ ಕಾರ್ಯಕ್ರಮಗಳಿಗೆ ವೈಯಕ್ತಿಕವಾಗಿ ಎರಡು ಲಕ್ಷ ರುಪಾಯಿ ಸಹಾಯಧನ ನೀಡುವುದಾಗಿ ರಾಜ್ಯ ಗೃಹ ನಿರ್ಮಾಣ ಮಂಡಳಿ ಅಧ್ಯಕ್ಷರೂ ಆಗಿರುವ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಪ್ರಕಟಿಸಿದರು. ಸಮಾಜದ ಇತಿಹಾಸ, ಸಂಸ್ಕೃತಿ ಮತ್ತು ಮಹನೀಯರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.ತಾಲೂಕು ಆಡಳಿತ ಹಾಗೂ ತಾಲೂಕು ಗಂಗಾಮತ ಸಮಾಜದ ಸಂಯುಕ್ತ ಆಶ್ರಯದಲ್ಲಿ ಗಂಗಾಪರಮೇಶ್ವರಿ ಸಮುದಾಯ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಂಗಾಮತ ಸಮಾಜವು ಸನಾತನ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದ್ದು ಯುಗಯುಗಾಂತರಗಳಿಂದ ಸಮಾಜದ ಸೇವೆಯಲ್ಲಿ ತನ್ನದೇ ಆದ ಸ್ಥಾನವನ್ನು ಹೊಂದಿದೆ ಎಂದು ಹೇಳಿದರು. ಭೀಷ್ಮ ಅಂಬಿಗರ ಚೌಡಯ್ಯನಂತಹ ಮಹನೀಯರು ಈ ಸಮಾಜದಲ್ಲಿ ಜನಿಸಿ ಸಮಾಜೋದ್ಧಾರಕ್ಕೆ ಕಾರಣರಾದರು ಎಂದು ನುಡಿನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಈಗಾಗಲೇ ತಮ್ಮಿಂದ ನಿರ್ಮಿಸಲ್ಪಟ್ಟಿರುವ ಗಂಗಾಪರಮೇಶ್ವರಿ ಸಮುದಾಯ ಭವನದ ನವೀಕರಣಕ್ಕಾಗಿ ಮತ್ತೊಮ್ಮೆ 25 ಲಕ್ಷ ರು. ಅನುದಾನ ನೀಡುವುದಾಗಿ ಹಾಗೂ ಗಂಗಾಪರಮೇಶ್ವರಿ ಸಹಕಾರಿ ಸಂಘಕ್ಕೆ 5 ಲಕ್ಷ ರು. ಪ್ರೋತ್ಸಾಹಧನ ನೀಡುವುದಾಗಿ ಶಾಸಕರು ಘೋಷಿಸಿದರು.ನಗರಸಭೆಯ ನಿಕಟ ಪೂರ್ವ ಅಧ್ಯಕ್ಷ ಎಂ. ಸಮೀವುಲ್ಲಾ ಮಾತನಾಡಿ, ಜಾತಿ ಮತ ಭೇದವಿಲ್ಲದೆ ಎಲ್ಲ ಸಮಾಜಗಳನ್ನು ಒಗ್ಗೂಡಿಸಿ, ವಿಶೇಷವಾಗಿ ಸಣ್ಣ ಸಮಾಜಗಳನ್ನು ಗುರುತಿಸಿ ಅವುಗಳ ಸಂಘಟನೆ ಹಾಗೂ ರಾಜಕೀಯ ಬೆಳವಣಿಗೆಗೆ ಸಹಕಾರ ನೀಡುತ್ತಿರುವ ಶಾಸಕರ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ತಾಲೂಕು ಗಂಗಾಮತ ಸಮಾಜದ ಅಧ್ಯಕ್ಷ ಡಿ. ಲಕ್ಷ್ಮಣ್ ಮಾತನಾಡಿ, ತಾಲೂಕಿನಲ್ಲಿ ಸಂಖ್ಯಾತ್ಮಕವಾಗಿ ಸಣ್ಣ ಸಮಾಜವಾಗಿದ್ದರೂ ನಮ್ಮನ್ನು ಅಪ್ಪಿಕೊಂಡು ಸದಾ ಮಾರ್ಗದರ್ಶನ ನೀಡುತ್ತಿರುವ ಶಾಸಕರ ಕೊಡುಗೆ ಅಪಾರವಾಗಿದೆ. ಮುಂದಿನ ದಿನಗಳಲ್ಲೂ ಅವರ ಮಾರ್ಗದರ್ಶನದಲ್ಲಿ ಸಮಾಜವನ್ನು ಇನ್ನಷ್ಟು ಸಂಘಟಿತಗೊಳಿಸೋಣ ಎಂದು ಸಮಾಜದ ಬಂಧುಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಸಂತೋಷ್ ಕುಮಾರ್, ನಗರಸಭೆಯ ಪೌರಾಯುಕ್ತ ಕೃಷ್ಣಮೂರ್ತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಧರ್ಮಶೇಖರ್ ಅವರು ಮಾತನಾಡಿದರು. ಸಮಾರಂಭದಲ್ಲಿ ಗಂಗಾಮತ ಸಮಾಜದ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆಯಲ್ಲಿ ಗಂಗಾಮತ ಸಮಾಜದ ಉಪಾಧ್ಯಕ್ಷ ರವಿಶಂಕರ್, ಸತೀಶ್, ಮುಖಂಡರಾದ ಪ್ರಭಾಕರ್, ಜಾಜೂರು ಸಿದ್ದೇಶ್, ಜಾವಗಲ್ ಪ್ರಸನ್ನ, ಶಾಸಕರ ಅಂಗರಕ್ಷಕರಾದ ರಾಮು, ದಿನೇಶ್, ಸುಭಾಷ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.