ಜನರ ಆಶೋತ್ತರಗಳಿಗೆ ಸ್ಪಂದಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿರುವ ಸರ್ಕಾರಕ್ಕೆ ಟೀಕೆ-ಟಿಪ್ಪಣಿಗಳ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಜನರ ವಿಶ್ವಾಸವನ್ನು ಉಳಿಸಿಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡುವುದೇ ತಮ್ಮ ಆದ್ಯತೆ ಎಂದು ಹೇಳಿದರು. ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಸರ್ಕಾರಿ ಕಚೇರಿಗಳಿಗೆ ಪದೇಪದೇ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಅವರ ಮಾರ್ಗದರ್ಶನದಲ್ಲಿ ಪ್ರಜಾಸೇವಾ ಆಂದೋಲನ ರೂಪಿಸಲಾಗಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜನರ ಬಳಿಗೆ ತೆರಳಿ ಅವರ ಕಷ್ಟ-ಸುಖಗಳನ್ನು ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಲ್ಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಸರ್ಕಾರದ ಯೋಜನೆಗಳು ಹಾಗೂ ಆಡಳಿತದ ಪ್ರಯೋಜನಗಳು ಜನರಿಗೆ ನೇರವಾಗಿ ತಲುಪುವಂತೆ ಮಾಡುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನದ ಮೂಲಕ ಜನರ ಬಳಿಗೆ ತೆರಳಿ ಸಮಸ್ಯೆಗಳನ್ನು ಆಲಿಸಲಾಗುತ್ತಿದೆ. ಬರ ಸೇರಿದಂತೆ ಯಾವುದೇ ಸಂಕಷ್ಟ ಎದುರಾದರೂ ಜನರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ಜನರು ಆತಂಕಪಡಬೇಕಿಲ್ಲ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಂ. ಶಿವಲಿಂಗೇಗೌಡ ಹೇಳಿದರು.ನಗರದ ಹೊರವಲಯದಲ್ಲಿರುವ ಎಪಿಎಂಸಿ ಆವರಣದಲ್ಲಿ ನಡೆದ ಪ್ರಜಾಸೇವಾ ಆಂದೋಲನ ಸಭೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಜನರ ಆಶೋತ್ತರಗಳಿಗೆ ಸ್ಪಂದಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿರುವ ಸರ್ಕಾರಕ್ಕೆ ಟೀಕೆ-ಟಿಪ್ಪಣಿಗಳ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಜನರ ವಿಶ್ವಾಸವನ್ನು ಉಳಿಸಿಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡುವುದೇ ತಮ್ಮ ಆದ್ಯತೆ ಎಂದು ಹೇಳಿದರು. ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಸರ್ಕಾರಿ ಕಚೇರಿಗಳಿಗೆ ಪದೇಪದೇ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಅವರ ಮಾರ್ಗದರ್ಶನದಲ್ಲಿ ಪ್ರಜಾಸೇವಾ ಆಂದೋಲನ ರೂಪಿಸಲಾಗಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜನರ ಬಳಿಗೆ ತೆರಳಿ ಅವರ ಕಷ್ಟ-ಸುಖಗಳನ್ನು ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಲ್ಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.ಅಧಿಕಾರಿಗಳಿಗೆ ಸಚಿವರ ಸೂಚನೆ:

ತಾಲೂಕಿನ ಜನರು ಮುಗ್ಧರು ಹಾಗೂ ಸಹೃದಯಿಗಳು. ಇಂತಹ ಜನರಿಗೆ ಅಧಿಕಾರಿಗಳಿಂದ ಯಾವುದೇ ರೀತಿಯ ತೊಂದರೆ ಆಗಬಾರದು. ಜನರು ಅಧಿಕಾರಿಗಳಿಗೆ ತೊಂದರೆ ನೀಡುವುದಿಲ್ಲ. ಹೀಗಾಗಿ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಪ್ರಜಾಸೇವಾ ಆಂದೋಲನದಲ್ಲಿ ಸ್ವೀಕರಿಸಲಾದ ಅರ್ಜಿಗಳ ವಿಲೇವಾರಿ ಹಾಗೂ ಕೈಗೊಂಡಿರುವ ಕ್ರಮಗಳ ಕುರಿತು ತಾಲೂಕು ಪಂಚಾಯಿತಿಯಲ್ಲಿ ಪರಿಶೀಲನಾ ಸಭೆ ನಡೆಸಲಾಗುವುದು. ರೈತರು ಹಾಗೂ ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡದೆ ಇರುವ ಅಧಿಕಾರಿಗಳಿಂದ ತಮಗೆ ಯಾವುದೇ ಸಮರ್ಥನೆ ಕೇಳಿಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.ರೈತರ ಸಂಕಷ್ಟಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು. ರೈತರು ತಮ್ಮ ಸಮಸ್ಯೆ ಪರಿಹಾರಕ್ಕಾಗಿ ಅಧಿಕಾರಿಗಳ ಬಳಿ ಬರುತ್ತಾರೆ ಹೊರತು ಬೇರೆ ಯಾವುದೇ ನಿರೀಕ್ಷೆ ಹೊಂದಿರುವುದಿಲ್ಲ. ರೈತ ಸಮುದಾಯಕ್ಕಾಗಿ ಕೆಲಸ ಮಾಡುವ ಅವಕಾಶ ದೊರೆತಿರುವುದು ಪುಣ್ಯದ ಕಾರ್ಯವಾಗಿದ್ದು, ಅಧಿಕಾರಿಗಳು ಈ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಹೇಳಿದರು. ರೈತರು, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರಿಗೆ ಹಣಕಾಸು ಸೇರಿದಂತೆ ಯಾವುದೇ ರೀತಿಯ ತೊಂದರೆ ನೀಡಬಾರದು. ಸಾಮಾನ್ಯ ಜನರ ಸಂಕಷ್ಟಗಳನ್ನು ನಿವಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.ಬರ ಪರಿಸ್ಥಿತಿಯಲ್ಲಿ ಸರ್ಕಾರ ಜನರೊಂದಿಗೆ ತಾಲೂಕು, ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ಇಂತಹ ಸಂಕಷ್ಟಗಳು ಹಿಂದೆಯೂ ಬಂದಿದ್ದು, ಜನರು ಅದನ್ನು ಎದುರಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿಯೂ ಜನರ ನೆರವಿಗೆ ಸರ್ಕಾರ ನಿಲ್ಲಲಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವರು ಭರವಸೆ ನೀಡಿದರು. ಯಾರನ್ನೂ ನಿಂದಿಸುವುದು ತಮ್ಮ ಉದ್ದೇಶವಲ್ಲ. ಟೀಕೆ ಮಾಡುವವರಿಗೆ ದೇವರು ಒಳ್ಳೆಯದು ಮಾಡಲಿ. ಎಲ್ಲರೂ ಒಗ್ಗಟ್ಟಿನಿಂದ ಅರಸೀಕೆರೆಯ ಅಭಿವೃದ್ಧಿಗೆ ಕೈಜೋಡಿಸಬೇಕು. ತಾಲೂಕನ್ನು ಮತ್ತಷ್ಟು ಸುಭದ್ರವಾಗಿ ಕಟ್ಟುವ ಕಾರ್ಯದಲ್ಲಿ ಪ್ರತಿಯೊಬ್ಬರೂ ಸಹಭಾಗಿಗಳಾಗಬೇಕು ಎಂದು ಮನವಿ ಮಾಡಿದರು. ತಾಲೂಕು ಇದೀಗ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹೊಂದಿರುವ ಕ್ಷೇತ್ರವಾಗಿದ್ದು, ದೊರೆತಿರುವ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿಯಲ್ಲಿ ಹೊಸ ಹೆಜ್ಜೆ ಇಡಬೇಕಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಾಳ್ಮೆಯಿಂದ ಕಾರ್ಯನಿರ್ವಹಿಸಿ ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಉತ್ತಮ ಹೆಸರು ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.ಗ್ರಾಪಂ ಮಟ್ಟದಲ್ಲಿ ಸಮಿತಿ ರಚನೆ:ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಸಮಿತಿಗಳನ್ನು ರಚಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಭಾರತ್ ಜೋಡೋ ಸಂಘಗಳನ್ನು ರಚಿಸಿ ಸದಸ್ಯರ ನೋಂದಣಿ ಮಾಡುವ ಕಾರ್ಯ ಕೈಗೊಳ್ಳಲಾಗುವುದು. ಪ್ರತಿ ಸಂಘಕ್ಕೆ ಸರ್ಕಾರದ ವತಿಯಿಂದ 10 ಲಕ್ಷ ಅನುದಾನ ದೊರೆಯಲಿದೆ ಎಂದು ಸಚಿವರು ತಿಳಿಸಿದರು.ಸಾರ್ವಜನಿಕರು ತಮ್ಮ ಸಮಸ್ಯೆಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಪ್ರಜಾಸೇವಾ ಇಲಾಖೆ ರಚಿಸಿ, ಪ್ರತ್ಯೇಕ ಸಚಿವರು ಹಾಗೂ ಅಧಿಕಾರಿಗಳನ್ನು ನೇಮಿಸಿದೆ. ಇದರ ಭಾಗವಾಗಿ ಪ್ರತಿ ಶನಿವಾರ ಒಂದೊಂದು ಹೋಬಳಿ ಹಾಗೂ ತಾಲೂಕು ಮಟ್ಟದಲ್ಲಿ ಪ್ರಜಾಸೇವಾ ಆಂದೋಲನ ಸಭೆ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಾಗುವುದು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಎ. ಸಿ ಜಗದೀಶ್ ಗಂಗಣ್ಣನವರ್, ತಹಸೀಲ್ದಾರ್‌ ಸಂತೋಷ ಕುಮಾರ್‌, ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಮಹೇಶ್ ಕುಮಾರ್, ಕಾರ್ಮಿಕ ಅಧಿಕಾರಿ ಸುರೇಶ್, ತಾಪಂ ಇಒ ಗಂಗಣ್ಣ, ನಗರಸಭೆ ಆಯುಕ್ತ ಕೃಷ್ಣಮೂರ್ತಿ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಶೇಖರ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅರುಣ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.