ಖಾಸಗಿ ಶಾಲೆಗಳ ಅಬ್ಬರದ ನಡುವೆ ಸರ್ಕಾರಿ ಶಾಲೆಗಳು ಅಮೃತ ಮಹೋತ್ಸವ ಕಾರ್ಯಕ್ರಮ ಆಚರಿಸಿಕೊಳ್ಳುವುದು ಸಂತಸದ ಸಂಗತಿ. ಸರ್ಕಾರಿ ಶಾಲೆಗಳು ಉಳಿದಾಗ ಮಾತ್ರ ಗ್ರಾಮೀಣ ಭಾಗದ ಪ್ರತಿಯೊಂದು ಮಗುವಿಗೂ ಉತ್ತಮ ಶಿಕ್ಷಣ ನೀಡಲು ಸಾಧ್ಯ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದರು.
ಹೊಸನಗರ: ಖಾಸಗಿ ಶಾಲೆಗಳ ಅಬ್ಬರದ ನಡುವೆ ಸರ್ಕಾರಿ ಶಾಲೆಗಳು ಅಮೃತ ಮಹೋತ್ಸವ ಕಾರ್ಯಕ್ರಮ ಆಚರಿಸಿಕೊಳ್ಳುವುದು ಸಂತಸದ ಸಂಗತಿ. ಸರ್ಕಾರಿ ಶಾಲೆಗಳು ಉಳಿದಾಗ ಮಾತ್ರ ಗ್ರಾಮೀಣ ಭಾಗದ ಪ್ರತಿಯೊಂದು ಮಗುವಿಗೂ ಉತ್ತಮ ಶಿಕ್ಷಣ ನೀಡಲು ಸಾಧ್ಯ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದರು.
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ
ತಾಲೂಕಿನ ಸಂಪೆಕಟ್ಟೆ ಸಮೀಪದ ಹೊಸೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹೊಸೂರು ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ನೀಡುತ್ತಿದೆ. ಸರ್ಕಾರಿ ಶಾಲೆಗಳು ಎಂಬ ಕೀಳರಿಮೆ ಪಾಲಕರಿಂದ ದೂರವಾದಾಗ ಮಾತ್ರ ಸರ್ಕಾರಿ ಶಾಲೆಗಳು ಉಳಿದು ಬೆಳೆಯಲು ಸಾಧ್ಯವಾಗಲಿದೆ ಎಂದರು.
ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಎಲ್ಲಾ ಸೌಕರ್ಯಗಳು ಲಭ್ಯವಿವೆ
ಇಂದು ಸರ್ಕಾರಿ ಶಾಲೆಗಳಲ್ಲಿಯೂ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಎಲ್ಲಾ ಸೌಕರ್ಯಗಳು ಲಭ್ಯವಿವೆ. ಹೀಗಾಗಿ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಲು ಮುಂದೆ ಬರಬೇಕು. ತಾವು ಓದುವ ಸಂದರ್ಭದಲ್ಲಿ ಯಾವುದೇ ಸೌಕರ್ಯಗಳು ಇರಲಿಲ್ಲ. ಆದರೆ ಇಂದಿನ ಮಕ್ಕಳಿಗೆ ಎಲ್ಲಾ ರೀತಿಯ ಸೌಕರ್ಯಗಳು ಸಿಗುತ್ತಿದ್ದು, ಮಕ್ಕಳು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ಹೇಳಿದರು.
ಹಿಂದೆ ಶೇಕಡ 35 ರಷ್ಟು ಅಂಕ ಪಡೆದು ತೇರ್ಗಡೆಗೊಂಡರೆ ಸಾಕು ಎನ್ನುವ ಸ್ಥಿತಿಯಿತ್ತು. ಆದರೆ ಇಂದು ಕಾಲ ಬದಲಾಗಿದೆ ಮಕ್ಕಳು ಶೇಕಡ 98 ರಷ್ಟು ಅಂಕ ಪಡೆದರು ಅವರಿಗೆ ಸಮಾಧಾನವೇ ಇಲ್ಲವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಎಸ್ ಡಿಎಂಸಿ ಅಧ್ಯಕ್ಷ ಕೆ.ವಿ.ಶ್ರೀಧರ, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ನಾಗಪ್ಪ ಕೊಟ್ಟಿಗೆಮನೆ, ಶಾಲೆಯ ಮುಖ್ಯ ಶಿಕ್ಷಕಿ ಗಾಯತ್ರಿ ಶೆಣೈ, ಪ್ರಮುಖರಾದ ಕೆ.ಕುಮಾರ್, ಎನ್.ಎಂ ಸತ್ಯನಾರಾಯಣ, ವೈ. ಗಣಪತಿ,ನವೀನ್ ಮತ್ತಿತರರಿದ್ದರು.
