ಮೊಳಹಳ್ಳಿ ಶಿವರಾವ್ ಅವರು ವಕೀಲ ವೃತ್ತಿ ಮಾಡಿಕೊಂಡಿದ್ದರೂ ಕೂಡ ಅದಕ್ಕೆ ಹೆಚ್ಚು ಮಹತ್ವ ನೀಡದೆ, ಸಹಕಾರಿ ಕ್ಷೇತ್ರವನ್ನು ಬೆಳೆಸಲು ಶ್ರಮಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ.
ಮಂಗಳೂರು: ಮೊಳಹಳ್ಳಿ ಶಿವರಾವ್ ಅವರು ವಕೀಲ ವೃತ್ತಿ ಮಾಡಿಕೊಂಡಿದ್ದರೂ ಕೂಡ ಅದಕ್ಕೆ ಹೆಚ್ಚು ಮಹತ್ವ ನೀಡದೆ, ಸಹಕಾರಿ ಕ್ಷೇತ್ರವನ್ನು ಬೆಳೆಸಲು ಶ್ರಮಿಸಿದ್ದಾರೆ. ಶಿವರಾವ್ ತಮ್ಮ 87 ವರ್ಷದ ಜೀವಿತಾವಧಿಯಲ್ಲಿ 60 ವರ್ಷಗಳನ್ನು ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದರಿಂದ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ಇಷ್ಟು ಬಲಿಷ್ಠವಾಗಿ ಬೆಳೆದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಮತ್ತು ಕರ್ನಾಟ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.
ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್ಪೇಟೆ ಅವರ ‘ತ್ಯಾಗಮಯಿ ಮೊಳಹಳ್ಳಿ’ ಪುಸ್ತಕವನ್ನು ಸೋಮವಾರ ಮಂಗಳೂರಿನ ಎಸ್ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಬಿಡುಗಡೆ ಮಾಡಿ ಅವರು ಮಾತನಾಡಿದರು.ಮೊಳಹಳ್ಳಿ ಶಿವರಾರಾವ್ 2ನೇ ಮಹಾಯುದ್ಧದ ಸಂದರ್ಭದಲ್ಲಿ ಆಹಾರ ಧಾನ್ಯದ ಕೊರತೆ ಸಂದರ್ಭ ಕೋಆಪರೇಟಿವ್ ಸ್ಟೋರ್ಸ್ ಸಂಸ್ಥೆ ಹುಟ್ಟು ಹಾಕಿ ಅದರ ಮೂಲಕ ಆಹಾರ ವಿತರಿಸುವ ಕೆಲಸ ಮಾಡಿದ್ದರು. ಟೌನ್ ಬ್ಯಾಂಕ್ ಕಟ್ಟಿದರು. ನಮ್ಮ ಎಸ್ಸಿಡಿಸಿಸಿ ಬ್ಯಾಂಕ್ ಬೆಳೆಯಲು ಕಾರಣಕರ್ತರಾಗಿದ್ದಾರೆ. ಅಂದು ಎತ್ತಿನಗಾಡಿಯಲ್ಲಿ ಸಂಚರಿಸಿ ಸಹಕಾರಿ ಕ್ಷೇತ್ರವನ್ನು ಬೆಳೆಸಿದ್ದಾರೆ. ಅಂತಹ ಮಹಾನುಭಾವ ಜಿಲ್ಲೆಯಲ್ಲಿ ಇದ್ದದರಿಂದ ಜಿಲ್ಲೆಯ ಸಹಕಾರಿ ಕ್ಷೇತ್ರ ಬೆಳೆದಿದೆ ಎಂದರು.ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ, ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟು, ಎಸ್ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕ ಅಶೋಕ್ ಕುಮಾರ್ ಶೆಟ್ಟಿ, ನಬಾರ್ಡ್ ಸಿಜಿಎಂ ಸಂಗೀತಾ ಕರ್ತ, ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್., ಎಸ್ಸಿಡಿಸಿಸಿ ಬ್ಯಾಂಕ್ ಸಿಇಒ ಗೋಪಾಲಕೃಷ್ಣ ಭಟ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್, ಎಸ್ಸಿಡಿಸಿಸಿ ಬ್ಯಾಂಕ್ ಮಹಾಪ್ರಬಂಧಕ ಸುನೀಲ್ ಕುಮಾರ್ ಹೊಳ್ಳ, ಪುಸ್ತಕದ ಲೇಖಕ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್ಪೇಟೆ ಮತ್ತಿತರರು ಇದ್ದರು.
ಸುಬ್ರಹ್ಮಣ್ಯ ಪಡುಕೋಣೆ ನಿರೂಪಿಸಿದರು.