ಸಿಎಂಗೆ ಕಪ್ಪು ಬಾವುಟ ಪ್ರದರ್ಶನ; ಮಾಜಿ ಶಾಸಕ ಡಾ.ಕೆ.ಅನ್ನದಾನಿ ಹೇಳಿಕೆಗೆ ಕಾಂಗ್ರೆಸ್‌ ಖಂಡನೆ

| Published : Sep 10 2024, 01:31 AM IST

ಸಿಎಂಗೆ ಕಪ್ಪು ಬಾವುಟ ಪ್ರದರ್ಶನ; ಮಾಜಿ ಶಾಸಕ ಡಾ.ಕೆ.ಅನ್ನದಾನಿ ಹೇಳಿಕೆಗೆ ಕಾಂಗ್ರೆಸ್‌ ಖಂಡನೆ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರವಾಸೋದ್ಯಮ ಅಭಿವೃದ್ಧಿಗೊಳಿಸುವ ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಗನಚುಕ್ಕಿ ಜಲಾಪಾತವನ್ನು ಪ್ರಚಾರಗೊಳಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಗಗನಚುಕ್ಕಿ ಜಲಪಾತೋತ್ಸವ ನಡೆಸಲಾಗುತ್ತಿದೆ. ಇದನ್ನು ವಿರೋಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡುವುದು ಸರಿಯಲ್ಲ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಗಗನಚುಕ್ಕಿ ಜಲಪಾತೋತ್ಸವದಲ್ಲಿ ಭಾಗವಹಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡುವುದಾಗಿ ಹೇಳಿದ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಹೇಳಿಕೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ ಖಂಡಿಸಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್ ಅಣೆಕಟ್ಟೆ ಸಂಪೂರ್ಣ ತುಂಬಿದ್ದರಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ. ಆ ನೀರಿನಿಂದಲೇ ಜಲಪಾತೋತ್ಸವ ಮಾಡಲಾಗುತ್ತಿದೆ ಎಂದರು.

ಪ್ರವಾಸೋದ್ಯಮ ಅಭಿವೃದ್ಧಿಗೊಳಿಸುವ ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಗನಚುಕ್ಕಿ ಜಲಾಪಾತವನ್ನು ಪ್ರಚಾರಗೊಳಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಗಗನಚುಕ್ಕಿ ಜಲಪಾತೋತ್ಸವ ನಡೆಸಲಾಗುತ್ತಿದೆ. ಇದನ್ನು ವಿರೋಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡುವುದು ಸರಿಯಲ್ಲ ಎಂದರು.

ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವ ಸಂದರ್ಭದಲ್ಲಿ ಅನ್ನದಾನಿ ಆಗಿಂದಾಗ್ಗೆ ಪತ್ರಿಕೆ ಹೇಳಿಕೆ ನೀಡಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುತ್ತಿರುವುದು ಸರಿಯಲ್ಲ. ಒಂದು ವೇಳೆ ಸಿಎಂಗೆ ಕಪ್ಪು ಭಾವುಟ ಪ್ರದರ್ಶನ ಮಾಡಿದರೆ ಸ್ಥಳದಲ್ಲಿಯೇ ಕಾಂಗ್ರೆಸ್ ಬಾವುಟ ಹಿಡಿದು ಕಾಂಗ್ರೆಸ್ ಕಾರ್ಯಕರ್ತರು ಅನ್ನದಾನಿ ವಿರುದ್ಧ ಪ್ರತಿಭಟನೆಗೆ ನಿಲ್ಲಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ. ರಾಜು ಮಾತನಾಡಿ, ಮಾಜಿ ಶಾಸಕ ಡಾ.ಕೆ.ಅನ್ನದಾನಿ ಹತಾಶೆಯಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಎಚ್‌.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ತಾಲೂಕಿಗೆ ಹಲಗೂರು ಹೋಬಳಿ ನೀರಾವರಿ ಯೋಜನೆಗೆ ಬಿಡುಗಡೆ ಮಾಡಿದ 650 ಕೋಟಿ ಎಲ್ಲಿಗೆ ಹೋಯಿತು ಎಂದು ಸ್ವಷ್ಟನೆ ನೀಡಲಿ ಎಂದು ಆಗ್ರಹಿಸಿದರು.

ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷ ಚಿಕ್ಕಲಿಂಗಯ್ಯ ಮಾತನಾಡಿ, ಎಚ್‌ಡಿ ಕುಮಾರಸ್ವಾಮಿ ಕೇಂದ್ರ ಮಂತ್ರಿಯಾಗಿದ್ದು, ತಾಲೂಕಿಗೆ ಕಾರ್ಖಾನೆಗಳನ್ನು ಅನುಷ್ಠಾನಗೊಳಿಸಲು ಡಾ.ಅನ್ನದಾನಿ ಪ್ರಾಮಾಣಿಕ ಪ್ರಯತ್ನ ಮಾಡಲಿ. ಅದನ್ನು ಬಿಟ್ಟು ಪ್ರತಿಯೊಂದಕ್ಕೂ ಮೂಗು ತೂರಿಸುವುದು ಸರಿಯಲ್ಲ ಎಂದರು.

ಜಿಪಂ ಮಾಜಿ ಸದಸ್ಯ ಆರ್.ಎನ್.ವಿಶ್ವಾಸ್ ಮಾತನಾಡಿ, ಮಾಜಿ ಶಾಸಕ ಅನ್ನದಾನಿ ಕಪ್ಪು ಬಾವುಟ ಪ್ರದರ್ಶನ ಮಾಡುವುದಾದರೇ ಮುಖ್ಯಮಂತ್ರಿಗಳ ಜೊತೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧವೂ ಕಪ್ಪು ಪ್ರದರ್ಶನ ಮಾಡಿ ನೈತಿಕತೆ ಪ್ರದರ್ಶಿಸಲಿ ಎಂದು ಆಗ್ರಹಿಸಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಅಂಬರೀಷ್, ತಾಪಂ ಮಾಜಿ ಉಪಾಧ್ಯಕ್ಷ ಸಿ.ಮಾಧು, ಜಿಪಂ ಮಾಜಿ ಸದಸ್ಯೆ ಸುಜಾತ ಕೆ.ಎಂ ಪುಟ್ಟು ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ದೇವರಾಜು, ಬಸವೇಶ್, ಕಿರಣ್‌ಶಂಕರ್, ಪುಟ್ಟಸ್ವಾಮಿ, ಕೃಷ್ಣಮೂರ್ತಿ, ಶಿವಸ್ವಾಮಿ, ಶಿವಮಾದೇಗೌಡ, ಅಜೀಜ್, ಕೃಷ್ಣ, ರೋಹಿತ್, ಲಿಂಗರಾಜು ಸೇರಿದಂತೆ ಇತರರು ಇದ್ದರು.