ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ಗ್ರೇಡ್‌-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಹರಪನಹಳ್ಳಿ ತಾಲೂಕು ಘಟಕದಿಂದ ಇತ್ತೀಚೆಗೆ ಪಟ್ಟಣದಲ್ಲಿ ನಡೆದ ವಿಜಯನಗರ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿಕ್ಷಕ ಸಿದ್ದಪ್ಪ ಆರ್‌. ಮಾರೇರ ಅವರಿಗೆ ಜಿಲ್ಲಾಮಟ್ಟದ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಎಸ್‌ಎಚ್‌ಡಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರಾಗಿರುವ ಅವರು ರಾಜ್ಯ, ರಾಷ್ಟ್ರೀಯ ಮಟ್ಟದ ಖೋಖೋ ಪಂದ್ಯಾವಳಿಯಲ್ಲಿ ನಿರ್ಣಾಯಕರಾಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ ಪರಿಣಾಮ ಹಾಗೂ ವಿದ್ಯಾರ್ಥಿಗಳನ್ನು ಕ್ರೀಡಾಪಟಾಗಿ ತರಬೇತಿಗೊಳಿಸಿದ್ದರಿಂದ ಈ ಪ್ರಶಸ್ತಿ ಅವರಿಗೆ ಲಭಿಸಿದೆ. ಇತ್ತೀಚೆಗೆ ಅವರಿಗೆ ರಾಜ್ಯಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಹಾಗೂ ಗಣರಾಜ್ಯೋತ್ಸವ ದಿನದಂದು ತಾಲೂಕು ಆಡಳಿತದಿಂದ ಉತ್ತಮ ದೈಹಿಕ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.