ಕನ್ನಡಪ್ರಭ ವಾರ್ತೆ ಸಿದ್ದಾಪುರ

ಸಿದ್ದಾಪುರದ ಇತಿಹಾಸ ಪ್ರಸಿದ್ಧ ಶ್ರೀ ಅಯ್ಯಪ್ಪ ದೇವಾಲಯದ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬುಧವಾರ ಭೂಮಿಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ದೇವಣೀರ ಸುಜಯ್ ಮಾತನಾಡಿ, ಪ್ರಾಚೀನ ಇತಿಹಾಸ ಹೊಂದಿರುವ ಶ್ರೀ ಅಯ್ಯಪ್ಪ ದೇವಾಲಯದ ಸಮಗ್ರ ಅಭಿವೃದ್ಧಿಗಾಗಿ ಆಡಳಿತ ಮಂಡಳಿ ಹಾಗೂ ಭಕ್ತರು ಸೇರಿ ಯೋಜನೆ ರೂಪಿಸಿರುವುದಾಗಿ ತಿಳಿಸಿದರು.

ಅಭಿವೃದ್ಧಿ ಕಾಮಗಾರಿಗಳ ಮೊದಲ ಹಂತದಲ್ಲಿ ದೇವಾಲಯದ ಮುಂಭಾಗದಲ್ಲಿರುವ ಹಳೆಯ ಮಳಿಗೆಗಳನ್ನು ತೆರವುಗೊಳಿಸಿ, ನೂತನ ಮಳಿಗೆಗಳು, ವೇದಿಕೆ, ಅರ್ಚಕರ ವಾಸದ ಕೊಠಡಿಗಳು ಸೇರಿದಂತೆ ವಿವಿಧ ಸೌಲಭ್ಯಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

ಒಟ್ಟಾರೆ ಕಾಮಗಾರಿಗಳಿಗೆ ₹50 ಲಕ್ಷಕ್ಕೂ ಅಧಿಕ ವೆಚ್ಚ ಅಂದಾಜಿಸಲಾಗಿದ್ದು, ಕಟ್ಟಡದ ನೀಲನಕ್ಷೆಯನ್ನೂ ಸಿದ್ಧಪಡಿಸಲಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆಗೆ ಹೆಚ್ಚಿನ ವೆಚ್ಚ ತಗಲುವುದರಿಂದ ದಾನಿಗಳು ಹಾಗೂ ಭಕ್ತರು ಉದಾರವಾಗಿ ಸಹಕಾರ ನೀಡುವಂತೆ ಅವರು ಮನವಿ ಮಾಡಿದರು.


ಭೂಮಿಪೂಜೆ ಕಾರ್ಯಕ್ರಮದಲ್ಲಿ ದೇವಾಲಯ ಸಮಿತಿಯ ಕಾರ್ಯದರ್ಶಿ ಶ್ರೀನಿವಾಸ್ ಟಿ.ಕೆ., ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.