ಸಾರಾಂಶ
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿಗೆ ಯಾವ ಆಪತ್ತೂ ಬಂದಿಲ್ಲ. ಸಿಎಂ ಕುರ್ಚಿ ಸುರಕ್ಷಿತವಾಗಿದೆ ಎಂದು ಹೇಳಿರುವ ವಿಧಾನಪರಿಷತ್ ಸದಸ್ಯ ಡಾ। ಯತೀಂದ್ರ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರ ಆರೋಪವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.
ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ಮುಂದೆ ತಂದಿದ್ದಾರೆಂಬ ವಿರೋಧಪಕ್ಷ ನಾಯಕರ ಆರೋಪಕ್ಕೆ ನಗರದಲ್ಲಿ ಸೋಮವಾರ ಪ್ರತಿಕ್ರಿಯಿಸಿ, ಮುಡಾ ಸುಳ್ಳು ಕೇಸ್ ಹಾಕಿದಾಗಲೂ ನಮ್ಮ ಶಾಸಕರು, ಹೈಕಮಾಂಡ್ ಸಿದ್ದರಾಮಯ್ಯ ಪರ ನಿಂತಿದ್ದಾರೆ. ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ಮುಂದೆ ತಂದಿದ್ದಾರೆ ಎಂಬುದು ಶುದ್ಧ ಸುಳ್ಳು ಎಂದು ಸ್ಪಷ್ಟಪಡಿಸಿದರು.
ಮುಡಾ ಕೇಸ್ ಇಡಿ ತನಿಖೆ ಸಂಬಂಧ ಕೋರ್ಟ್ ಆದೇಶ ಕಾಯ್ದಿರಿಸಿದ ವಿಚಾರವಾಗಿ ಪ್ರತಿಕ್ರಿಯಿಸಿ, ಮುಡಾ ಕೇಸ್ನಲ್ಲಿ ಏನೂ ಸತ್ಯಾಂಶ ಇಲ್ಲ. ಅದಕ್ಕಾಗಿ ಸಿದ್ದರಾಮಯ್ಯ ಹೆದರಬೇಕಾದ ಅವಶ್ಯಕತೆ ಇಲ್ಲ. ಬಿಜೆಪಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಎಲ್ಲಿ ಬಿಜೆಪಿಯೇತರ ಸರ್ಕಾರಗಳಿವೆ ಅಲ್ಲಿ ತೊಂದರೆ ಕೊಡುತ್ತಲೇ ಬಂದಿದ್ದಾರೆ. ನಾವು ಕಾನೂನಾತ್ಮಕ ಹೋರಾಟ ಮುಂದುವರೆಸುತ್ತೇವೆ ಎಂದರು.