ಸರ್ಕಾರಿ ಶಾಲೆಗಳ ಉಳಿವಿಗೆ ಸಹಿ ಸಂಗ್ರಹ ಅಭಿಯಾನ

| Published : Jun 08 2025, 01:56 AM IST

ಸಾರಾಂಶ

ದಾವಣಗೆರೆ: ಆಲ್ ಇಂಡಿಯಾ ಸ್ಟೂಡೆಂಟ್ಸ್ ರ್ಗನೈಜೇಷನ್(ಎಐಡಿಎಸ್‌ಒ) ಜಿಲ್ಲಾ ಸಮಿತಿಯಿಂದ ಶನಿವಾರ ನಗರದ ರೈಲ್ವೆ ನಿಲ್ದಾಣದ ಮುಂಭಾಗ ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ಖಂಡಿಸಿ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ದಾವಣಗೆರೆ: ಆಲ್ ಇಂಡಿಯಾ ಸ್ಟೂಡೆಂಟ್ಸ್ ಆರ್ಗನೈಜೇಷನ್(ಎಐಡಿಎಸ್‌ಒ) ಜಿಲ್ಲಾ ಸಮಿತಿಯಿಂದ ಶನಿವಾರ ನಗರದ ರೈಲ್ವೆ ನಿಲ್ದಾಣದ ಮುಂಭಾಗ ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ಖಂಡಿಸಿ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಎಐಡಿಎಸ್‌ಒ ಜಿಲ್ಲಾ ಸಮಿತಿ ಅಧ್ಯಕ್ಷೆ ಪೂಜಾ ನಂದಿಹಳ್ಳಿ ಮಾತನಾಡಿ, ರಾಜ್ಯಾದ್ಯಂತ 6,200ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಕರ್ನಾಟಕ ರಾಜ್ಯ ಸರ್ಕಾರವು ಹಬ್ ಅಂಡ್ ಸ್ಪೋಕ್ ಮಾದರಿಯಡಿ ಮುಚ್ಚಲು ಮುಂದಾಗಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೂ ಬರುವ ಮುನ್ನ ನಾವು ಬಡವರ ಪರ, ಕಾರ್ಮಿಕರ ಪರ ಎಂದು ಅಧಿಕಾರದ ಗದ್ದುಗೆ ಏರಿದೆ. ಅಧಿಕಾರದ ಚುಕ್ಕಾಣಿಹಿಡಿದ ನಂತರ ಹಲವಾರು ವಿದ್ಯಾರ್ಥಿ, ಜನ ವಿರೋಧಿ ನೀತಿಗಳನ್ನು ಜಾರಿಮಾಡುತ್ತಿದೆ. ಎಲ್ಲ ಸರ್ಕಾರಗಳು ಸೇರಿಕೊಂಡು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿವೆ ಎಂದು ದೂರಿದರು.

ಬೇಲಿ ಎದ್ದು ಹೊಲ ಮೇಯ್ದಂತೆ ಸರ್ಕಾರವೇ ಶಾಲೆಗಳನ್ನು ನುಂಗುತ್ತಿದೆ. ರಾಜ್ಯವನ್ನಾಳುವ ಎಲ್ಲ ಪಕ್ಷದ ನಾಯಕರು ತಮ್ಮ ತಮ್ಮದೇ ಶಾಲೆಗಳಿಂದ ಹಿಡಿದು ವೈದ್ಯಕೀಯ ಕಾಲೇಜು ಎಂಜಿನಿಯರಿಂಗ್ ಕಾಲೇಜುಗಳನ್ನು ಹಾಗೂ ವಿಶ್ವವಿದ್ಯಾಲಯಗಳು ನಡೆಸುತ್ತಿದ್ದಾರೆ. ಈ ಅನ್ಯಾಯವನ್ನು ಪ್ರಶ್ನಿಸುವವರು ಯಾರು ? ಎಂದು ಹೇಳಿದರು.

ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯಿಂದ ಜಿಲ್ಲಾದ್ಯಂತ ಬೀದಿಗಳಲ್ಲಿ, ಬಸ್ ನಿಲ್ದಾಣ, ಹಳ್ಳಿಗಳಲ್ಲಿ, ಹಾಸ್ಟೆಲ್‌ಗಳು, ಶಾಲಾ-ಕಾಲೇಜುಗಳಲ್ಲಿ ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಜನಗಳು ಬಂದು ಸಹಿ ಹಾಕುವ ಮೂಲಕ ಹೋರಾಟವನ್ನು ಬೆಂಬಲಿಸುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಟಿ.ಎಸ್.ಸುಮನ್, ಕಾರ್ಯಕರ್ತರಾದ ಗಂಗಾಧರ, ನಂದೀಶ, ಶ್ರೀನಿವಾಸ, ಸೃಷ್ಟಿ ಮುಂತಾದವರು ಭಾಗವಹಿಸಿದ್ದರು.