ಧಾರವಾಡ:

ಪರಿಸರ ಮತ್ತು ಶಿಕ್ಷಣ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆಮರಣಾಂತ ಉಪವಾಸ ಸತ್ಯಾಗ್ರಹದ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸರಿಯಾಗಿ ನಿಭಾಯಿಸಿಲ್ಲ ಹಾಗೂ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಸೋಮವಾರ ನಗರದಲ್ಲಿ ಬೃಹತ್ ಮೌನ ಪ್ರತಿಭಟನೆ ನಡೆಯಿತು.

ಗಾಂಧಿ ಶಾಂತಿ ಪ್ರತಿಷ್ಠಾನ ಮತ್ತು ನಗರದ ವಿವಿಧ ಪ್ರಗತಿಪರ ಸಂಘಟನೆಗಳ ಜಂಟಿ ಆಶ್ರಯದಲ್ಲಿ ನಡೆದ ಮೌನ ಪ್ರತಿಭಟನೆಯು ಕಲಾ ಭವನದಿಂದ ಆರಂಭವಾಗಿ ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿ, ಜಿಲ್ಲಾಧಿಕಾರಿ ಕಚೇರಿ ತಲುಪಿತು. ತದನಂತರ ಭಾರತದ ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಅಪರ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.

ನಗರದ ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು, ಯುವಜನರು ಹಾಗೂ ಸಮಾನ ಮನಸ್ಕ ನಾಗರಿಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.

ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಂ ವಾಂಗ್ಚುಕ್ ಮತ್ತು ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಬೇಕು. ಅವರ ಹೋರಾಟದ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರವು ಅತ್ಯಂತ ನಿರ್ಲಕ್ಷ್ಯದಿಂದ ಹಾಗೂ ಅಸಮರ್ಪಕವಾಗಿ ನಿಭಾಯಿಸುತ್ತಿರುವುದನ್ನು ಖಂಡಿಸುತ್ತೇವೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರಗೊಳಿಸಿರುವ ''''''''''''''''ನೀಟ್'''''''''''''''' ಸೇರಿದಂತೆ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸುತ್ತೇವೆ. ಈ ಬಗ್ಗೆ ಪಾರದರ್ಶಕ ತನಿಖೆಯಾಗಬೇಕು ಎಂದು ಆಗ್ರಹಿಸಲಾಯಿತು.


ಈ ಶಿಕ್ಷಣ ಹಗರಣಗಳ ನೈತಿಕ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒಕ್ಕೊರಲಿನಿಂದ ಆಗ್ರಹಿಸಲಾಯಿತು. ವಿದ್ಯಾರ್ಥಿಗಳ ಮತ್ತು ದೇಶದ ಭವಿಷ್ಯದ ದೃಷ್ಟಿಯಿಂದ ರಾಷ್ಟ್ರಪತಿಗಳು ಈ ವಿಷಯದಲ್ಲಿ ತಕ್ಷಣವೇ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಮಾಜಿ ಸಚಿವರಾದ ಲೀಲಾವತಿ ಪ್ರಸಾದ, ಗಾಂಧಿ ಶಾಂತಿ ಪ್ರತಿಷ್ಠಾನ ಅಧ್ಯಕ್ಷ ಡಾ. ಸಂಜೀವ ಕುಲಕರ್ಣಿ, ಶಿವಾನಂದ್ ಶೆಟ್ಟರ್, ರಾಜೇಂದ್ರ ಪೊದ್ದಾರ್, ಎಂ.ಎಂ. ಚಿಕ್ಕಮಠ, ಶಾರದಾ ಗೋಪಾಲ್, ವಿಶ್ವೇಶ್ವರಿ ಹಿರೇಮಠ, ಮುಸ್ಟಾಕ್ ವಕೀಲರು, ಸರಸ್ವತಿ, ಎಚ್‌.ಜಿ. ದೇಸಾಯಿ, ಡಾ. ಗೋಪಾಲ್ ದಾಬಡೆ, ಮಲ್ಲಪ್ಪ ಹಳಕಟ್ಟಿ, ಕುಮಾರ್ ಲಾಲ್, ಸುನಿಲ್ ಲಗಳಿ, ಸಂತೋಷ್, ಬಿ.ಐ. ಈಳಿಗೇರ್ ಇದ್ದರು.