ಕೃಷಿ ಮಹಾವಿದ್ಯಾಲಯ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ: ಲಕ್ಷ್ಮಣ ಸವದಿ

| Published : Sep 09 2024, 01:32 AM IST

ಕೃಷಿ ಮಹಾವಿದ್ಯಾಲಯ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ: ಲಕ್ಷ್ಮಣ ಸವದಿ
Share this Article
  • FB
  • TW
  • Linkdin
  • Email

ಸಾರಾಂಶ

ರೈತರ ಮಕ್ಕಳು ಉನ್ನತ ಶಿಕ್ಷಣಕ್ಕಾಗಿ ಅಥಣಿ ಮತಕ್ಷೇತ್ರದಲ್ಲಿ ಕೃಷಿ ಮಹಾವಿದ್ಯಾಲಯ ಸ್ಥಾಪನೆ ಮಾಡುವ ಸಂಕಲ್ಪ ಹೊಂದಿದ್ದೇನೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಕನ್ನಡಪ್ರಭ ವಾರ್ತೆ ಅಥಣಿ

ರೈತರ ಮಕ್ಕಳು ಉನ್ನತ ಶಿಕ್ಷಣಕ್ಕಾಗಿ ಅಥಣಿ ಮತಕ್ಷೇತ್ರದಲ್ಲಿ ಕೃಷಿ ವಿದ್ಯಾಲಯ ಸ್ಥಾಪನೆ ಮಾಡುವ ಸಂಕಲ್ಪ ಹೊಂದಿದ್ದೇನೆ. ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ಕೃಷಿ ಮಹಾವಿದ್ಯಾಲಯ ಮಂಜೂರಾತಿ ಪಡೆದುಕೊಳ್ಳಲಾಗುವುದು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಪಟ್ಟಣದ ಹೊರವಲಯದ ಬೀಜೋತ್ಪನ್ನ ಕೇಂದ್ರದಲ್ಲಿ ಕೃಷಿ ಇಲಾಖೆಯ ನೂತನ ಗೋದಾಮು ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕೃಷಿ ಇಲಾಖೆಯ ಪರಿಕರಗಳನ್ನು ದಾಸ್ತಾನು ಮಾಡಲು ನೂತನ ಗೋದಾಮ ನಿರ್ಮಾಣಕ್ಕೆ ಸರ್ಕಾರದಿಂದ ₹25 ಲಕ್ಷ ಅನುದಾನ ಮಂಜೂರಾಗಿದ್ದು, ಕಾಮಗಾರಿ ಅನುಷ್ಠಾನವನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯಗಳ ಅಭಿವೃದ್ಧಿ ನಿಗಮಕ್ಕೆ ವಹಿಸಲಾಗಿದೆ. ಗುಣಮಟ್ಟದ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ನಿರ್ಮಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಅಥಣಿ ಪಟ್ಟಣ ಸೇರಿದಂತೆ ಮತಕ್ಷೇತ್ರದಲ್ಲಿ ಅಗತ್ಯವಿರುವ ಮೂರು ಸರ್ಕಾರಿ ಪ್ರೌಢಶಾಲೆಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇವುಗಳಿಗೆ ಮಂಜೂರಾತಿ ಪಡೆದುಕೊಂಡರೆ ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಉಚಿತ ಶಿಕ್ಷಣಕ್ಕೆ ಸಹಕಾರಿಯಾಗಲಿದೆ. ತಾಲೂಕಿನ ಕೊಕಟನೂರದಲ್ಲಿ ಸ್ಥಾಪನೆಯಾಗಿರುವ ಪಶು ವೇದಿಕೆಯ ಮಹಾವಿದ್ಯಾಲಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಉದ್ಘಾಟನೆಗೊಳಿಸಿದ್ದಾರೆ. ಶೀಘ್ರದಲ್ಲಿಯೇ ಕೇಂದ್ರ ಸರ್ಕಾರದ ಅನುಮೋದನೆ ಪಡೆದುಕೊಂಡು ತರಗತಿಗಳನ್ನು ಆರಂಭಿಸಲು ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಮುಖಂಡರಾದ ಅರುಣ ಬಾಸಿಂಗೆ, ನರಸು ಬಡಕಂಬಿ, ಶ್ರೀಶೈಲ ನಾಯಿಕ, ಕೆಆರ್ ಐಡಿಎಲ್ ಸಹಾಯಕ ಅಭಿಯಂತರ ಸದಾಶಿವಯ್ಯ, ತಾಲೂಕು ಸಹಾಯಕ ಕೃಷಿ ನಿರ್ದೇಶಕ ನಿಂಗನಗೌಡ ಬಿರಾದಾರ, ಸಹಾಯಕ ಅಭಿಯಂತರ ಸಂತೋಷ ಶೇಗುಣಸಿ, ಸಹಾಯಕ ಕೃಷಿ ಅಧಿಕಾರಿ ಗುಂಜಿಗಾವಿ ಹಾಗೂ ಸಿಬ್ಬಂದಿ ಇದ್ದರು. ನಿಂಗನಗೌಡ ಬಿರಾದಾರ ಸ್ವಾಗತಿಸಿದರು. ಸದಾಶಿವಯ್ಯ ವಂದಿಸಿದರು.