ಯುವ ಮತದಾರರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಸಂಡೂರು: ಚುನಾವಣಾ ಆಯೋಗ ಹಾಗೂ ಮುಖ್ಯ ಚುನಾವಣಾಧಿಕಾರಿ ಕಚೇರಿಯ ನಿರ್ದೇಶನದಂತೆ ತಾಲೂಕಿನ ನಂದಿಹಳ್ಳಿಯಲ್ಲಿರುವ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದಲ್ಲಿನ ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಯಿತು.

ಕೇಂದ್ರದ ನಿರ್ದೇಶಕ ಡಾ.ಎಚ್. ತಿಪ್ಪೇಸ್ವಾಮಿ ಮಾತನಾಡಿ, ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಗಾಗಿ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ಈ ವಿಶೇಷ ಅಭಿಯಾನದ ಕುರಿತು ಯುವ ಮತದಾರರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಪ್ರತಿ ಅರ್ಹ ನಾಗರಿಕ ಮತದಾರರ ಪಟ್ಟಿಯಲ್ಲಿ ಇರುವುದು ಬಲಿಷ್ಠ ಪ್ರಜಾಪ್ರಭುತ್ವದ ಅಡಿಪಾಯ. ನಮ್ಮ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ಎಸ್.ಐ.ಆರ್ ಪ್ರಕ್ರಿಯೆಯ ಸದುಪಯೋಗ ಪಡೆದುಕೊಂಡು, ತಮ್ಮ ಮತ್ತು ತಮ್ಮ ಸುತ್ತಮುತ್ತಲಿನ ಅರ್ಹ ಮತದಾರರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಖಾತರಿಪಡಿಸಿಕೊಳ್ಳಲು ಎಲ್ಲರನ್ನೂ ಪ್ರೇರೇಪಿಸಬೇಕು ಎಂದರು.

ಕೇಂದ್ರದ ಅಧ್ಯಾಪಕರಾದ ಡಾ.ಎಸ್.ಎಂ. ಶಶೀಧರ ಎಸ್.ಐ.ಆರ್ ವಿಷಯದ ಕುರಿತು ಉಪನ್ಯಾಸ ನೀಡಿದರು. ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ಡಾ.ಚೌಡಪ್ಪ, ಎನ್‌ಎಸ್‌ಎಸ್ ಅಧಿಕಾರಿ ಡಾ.ಸುಮಾ ಮಾತನಾಡಿದರು.

ವಿದ್ಯಾರ್ಥಿಗಳಿಗೆ ವೋಟರ್ ಹೆಲ್ಪ್‌ಲೈನ್ ಆ್ಯಪ್ ಹಾಗೂ ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್ ಬಳಸುವ ವಿಧಾನದ ಕುರಿತು ತಿಳಿಸಲಾಯಿತು. ಆ.೫ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಅ.೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ ಎಂಬ ಮಾಹಿತಿ ಹಂಚಿಕೊಳ್ಳಲಾಯಿತು.

ಉಪನ್ಯಾಸಕರಾದ ಲಕ್ಷ್ಮಣ ತೋಳಿ ನಿರೂಪಿಸಿದರು. ಸ್ನಾತಕೋತ್ತರ ಕೇಂದ್ರದ ಅಧ್ಯಾಪಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಂಡೂರು ತಾಲೂಕಿನ ನಂದಿಹಳ್ಳಿಯಲ್ಲಿರುವ ಸ್ನಾತಕೋತ್ತರ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಎಸ್‌ಐಆರ್ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಕೇಂದ್ರದ ನಿರ್ದೇಶಕ ಡಾ.ಎಚ್.ತಿಪ್ಪೇಸ್ವಾಮಿ ಮಾತನಾಡಿದರು.