ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಸಹಕಾರ ನೀಡುವ ದೃಷ್ಟಿಯಿಂದ ಬಿಜೆಪಿ ವತಿಯಿಂದ ಜು.೨೫, ಜು.೨೬ರಂದು ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದರು.

ಮಡಿಕೇರಿ: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಸಹಕಾರ ನೀಡುವ ದೃಷ್ಟಿಯಿಂದ ಬಿಜೆಪಿ ವತಿಯಿಂದ ಜು.೨೫, ಜು.೨೬ರಂದು ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದರು.

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನಲ್ಲಿ ಎಸ್‌ಐಆರ್ ಪ್ರಕ್ರಿಯೆ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಬಿಜೆಪಿಯಿಂದ ಸಹಕಾರ ನೀಡುವ ನಿಟ್ಟಿನಲ್ಲಿ ಪ್ರತಿ ಬೂತ್‌ನಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬ ಕಾರ್ಯಕರ್ತ ಕನಿಷ್ಠ ೨೦ ಮನೆಗಳಿಗೆ ಭೇಟಿ ನೀಡಿ ಮತದಾರರಿಗೆ ಮಾರ್ಗದರ್ಶನ ನೀಡಲಿದ್ದಾರೆ. ಎಸ್‌ಐಆರ್ ಅಗತ್ಯತೆ, ಫಾರಂ ತುಂಬುವ ಪ್ರಕ್ರಿಯೆ, ಸಲ್ಲಿಸಬೇಕಾದ ಅಗತ್ಯ ದಾಖಲಾತಿಗಳು ಸೇರಿದಂತೆ ಮತದಾರರಲ್ಲಿ ಎಸ್‌ಐಆರ್ ಫಾರಂ ಬಗ್ಗೆ ಇರಬಹುದಾದ ಎಲ್ಲ ರೀತಿಯ ಗೊಂದಲ ಬಗೆಹರಿಸುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಹಿನ್ನೆಲೆ ಮರು ಪರೀಕ್ಷೆ ನಡೆಸುವ ಮೂಲಕ ಮೋದಿ ಸರ್ಕಾರ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿದೆ. ಕಾಕ್ರೋಚ್ ಜನತಾ ಪಾರ್ಟಿಯ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ ನೀಡುವ ಮೂಲಕ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಕೇಳುತ್ತಿರುವುದು ಹಾಸ್ಯಾಸ್ಪದ ಎಂದ ಅವರು, ಮಡಿಕೇರಿಯಲ್ಲಿ ಬುಧವಾರ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆ ನಾಟಕೀಯವಾಗಿತ್ತು. ಕೇವಲ ಪ್ರಚಾರಕ್ಕಾಗಿ ಪ್ರತಿಭಟನೆ ನಡೆದಿದೆ ಎಂದು ಟೀಕಿಸಿದರು.ಕಾಂಗ್ರೆಸ್ ಪಕ್ಷ ಹಾಗೂ ದೇಶ ವಿರೋಧಿ ಶಕ್ತಿಗಳು ಕೇಂದ್ರ ಸರ್ಕಾರದ ವಿರುದ್ಧ ಜನರಿಗೆ ತಪ್ಪು ಮಾಹಿತಿ ನೀಡುತ್ತಾ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸಿಗರ ಈ ನಡೆಯನ್ನು ವಿರೋಧಿಸಿ, ಜನತೆಗೆ ಸತ್ಯಾಂಶ ತಿಳಿಸುವ ನಿಟ್ಟಿನಲ್ಲಿ ಜು.೨೪ರ ಗುರುವಾರ ಮಡಿಕೇರಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಕೊಡಗಿನ ಮತದಾರರ ಪಟ್ಟಿ ಪರಿಶುದ್ಧವಾಗಿ ಆಗುತ್ತಿದೆ. ಜಿಲ್ಲೆಯಲ್ಲಿ ೫೫೨ ಬೂತ್‌ಗಳಿದೆ. ಬಿಎಲ್‌ಎ೨ ಅನ್ನು ನೇಮಕ ಮಾಡಲಾಗಿದ್ದು, ಸಕ್ರಮವಾಗಿ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಬಿಜೆಪಿ ವಕ್ತಾರ ಅರುಣ್ ಕುಮಾರ್ ಮಾತನಾಡಿ, ನೀಟ್ ಹೆಸರಿನಲ್ಲಿ ನಡೆಯುತ್ತಿರುವ ಹೋರಾಟವು ಮೋದಿ ಹೆಸರಿಗೆ ಕಪ್ಪು ಚುಕ್ಕೆ ತರುವ ಪ್ರಯತ್ನ ಎಂದು ಹೇಳಿದರು.ಪಕ್ಷದ ಪ್ರದಾನ ಕಾರ್ಯದರ್ಶಿ ಮಹೇಶ್ ಜೈನಿ ಮಾತನಾಡಿ, ದೇಶದ ಹಿತವನ್ನು ಕಾಪಾಡಬೇಕಾದ ಪ್ರತಿ ಪಕ್ಷವೇ ಸಿಜಿಪಿಯೊಂದಿಗೆ ಸೇರಿ ಹೋರಾಡುತ್ತಿರುವುದು ವಿಪರ್ಯಾಸ ಎಂದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್, ಮಾಧ್ಯಮ ಪ್ರಮುಖ ಸಜಿಲ್ ಕೃಷ್ಣನ್ ಉಪಸ್ಥಿತರಿದ್ದರು.