ಕನ್ನಡಪ್ರಭ ವಾರ್ತೆ ಚಾಮರಾಜನಗರ
ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕುರಿತು ಈ ಹಿಂದೆ ಹೊರಡಿಸಲಾಗಿದ್ದ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು, ಈ ಪ್ರಕಾರ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆಮನೆಗೆ ಭೇಟಿ ನೀಡುವ ಕಾರ್ಯವು ಆ.17 ರವರೆಗೆ ವಿಸ್ತರಣೆಯಾಗಿದೆ.ಈ ಹಿಂದಿನ ವೇಳಾಪಟ್ಟಿ ಪ್ರಕಾರ ಬಿಎಲ್ಒಗಳು ಜೂ.30ರಿಂದ ಆ.8ರವರೆಗೆ ಮನೆಮನೆಗೆ ಭೇಟಿ ನೀಡಬೇಕಿತ್ತು. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಆ.17ರವರೆಗೂ ಮನೆಮನೆಗೆ ಬಿಎಲ್ಒಗಳು ಭೇಟಿ ನೀಡಲಿದ್ದಾರೆ. ಮತಗಟ್ಟೆಗಳ ಮರು ಸಂಯೋಜನೆಗೆ ಈ ಹಿಂದಿನ ವೇಳಾಪಟ್ಟಿ ಪ್ರಕಾರ ಆ.8ಕ್ಕೆ ಅವಧಿ ನಿಗದಿಯಾಗಿದ್ದು, ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಆ. 17ರವರೆಗೆ ವಿಸ್ತರಿಸಲಾಗಿದೆ. ಕರಡು ಮತದಾರರ ಪಟ್ಟಿ ಈ ಹಿಂದಿನ ವೇಳಾಪಟ್ಟಿ ಪ್ರಕಾರ ಆ.17ರಂದು ಪ್ರಕಟವಾಗಬೇಕಿತ್ತು. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಆ. 24 ರಂದು ಪ್ರಕಟವಾಗಲಿದೆ.
ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆಗೆ ಈ ಹಿಂದಿನ ವೇಳಾಪಟ್ಟಿ ಪ್ರಕಾರ ಆ.17ರಿಂದ ಸೆ.16ರವರೆಗೆ ನಿಗದಿಯಾಗಿದ್ದ ದಿನಾಂಕವನ್ನು ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಆ.24ರಿಂದ ಸೆ.23ರವರೆಗೆ ನಿಗದಿ ಮಾಡಲಾಗಿದೆ. ನೋಟಿಸ್ ಅವಧಿ/ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿಗಾಗಿ ಈ ಹಿಂದಿನ ವೇಳಾಪಟ್ಟಿ ಪ್ರಕಾರ ಆ.17ರಿಂದ ಅ.15ರವರೆಗೆ ಅವಧಿ ನಿಗದಿಯಾಗಿತ್ತು. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಆ. 24ರಿಂದ ಅ.22ರವರೆಗೆ ನಿಗದಿ ಮಾಡಲಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು ಈ ಹಿಂದಿನ ವೇಳಾಪಟ್ಟಿ ಪ್ರಕಾರ ಅಕ್ಟೋಬರ್ 19ಕ್ಕೆ ಪ್ರಕಟಿಸಬೇಕಿತ್ತು. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಅ.27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಣೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.